ಕಾರ್ಮಿಕರನ್ನು ನೋಡಿಕೊಳ್ಳದಿದ್ದರೆ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಕೇಸ್: ಉಡುಪಿ ಜಿಲ್ಲಾಧಿಕಾರಿ
ಉಡುಪಿ, ಮೇ 12: ಜಿಲ್ಲೆಯಲ್ಲಿದ್ದ ಏಳು ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡಿದೆ. ಜಿಲ್ಲೆಯಲ್ಲಿ ಇನ್ನಷ್ಟು ವಲಸೆ ಕಾರ್ಮಿಕರಿದ್ದಾರೆ. ಇಂತಹ ಕಾರ್ಮಿಕರನ್ನು ಎಲ್ಲೆಂದರಲ್ಲಿ ಬಿಟ್ಟು ಹೋದರೆ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಉಡುಪಿ ಡಿಸಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಹಲವಾರು ರಾಜ್ಯಗಳ ಕಾರ್ಮಿಕರು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ದುಡಿಯುತ್ತಿದ್ದಾರೆ. ಈ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸುವ ಕೆಲಸವನ್ನು ಕರೆದುಕೊಂಡು ಬಂದ ಗುತ್ತಿಗೆದಾರರೇ ಮಾಡಬೇಕು. ಅಮಾನವೀಯವಾಗಿ ಅವರನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದರೆ ಜಿಲ್ಲಾಡಳಿತ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ರೀತಿಯ ಗುತ್ತಿಗೆದಾರರನ್ನು ಪತ್ತೆಹಚ್ಚಲು ಎಲ್ಲಾ ತಹಶೀಲ್ದಾರ್ ಗಳಿಗೆ ಸೂಚನೆ ನೀಡಿದ್ದೇನೆ. ಬೇರೆ ರಾಜ್ಯದ ಕಾರ್ಮಿಕರು ಉಳಿದುಕೊಂಡಿದ್ದರೆ ಅವರನ್ನು ಗುತ್ತಿಗೆದಾರರೇ ಊರಿಗೆ ಕಳುಹಿಸಿ ಕೊಡಬೇಕು. ಅವರನ್ನು ಕಳುಹಿಸುವವರೆಗೆ ಅವರ ಊಟ-ತಿಂಡಿಯ ವ್ಯವಸ್ಥೆಯನ್ನು ಗುತ್ತಿಗೆದಾರರೇ ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.












Click it and Unblock the Notifications