ಉಡುಪಿ: ಪ್ರಸಾದದ ಬಗ್ಗೆ ಎಚ್ಚರ ವಹಿಸಲು ದೇವಾಲಯಗಳಿಗೆ ಸೂಚನೆ
ಉಡುಪಿ, ಡಿಸೆಂಬರ್ 22: ಸುಳ್ವಾಡಿ ವಿಷ ಪ್ರಸಾದ ದುರಂತ ಘಟನೆಯ ನಂತರ ರಾಜ್ಯದ ದೇವಾಲಯಗಳಲ್ಲಿ ನೀಡಲಾಗುವ ಪ್ರಸಾದದ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಉಡುಪಿ ಜಿಲ್ಲೆಯ ಎಲ್ಲಾ ಪ್ರಸಿದ್ದ ದೇವಾಲಯಗಳಲ್ಲಿ ಭಕ್ತರಿಗೆ ನೀಡಲಾಗುವ ಪ್ರಸಾದದ ಬಗ್ಗೆ ಎಚ್ಚರಿಕೆ ವಹಿಸಲಾಗುತ್ತಿದೆ. ಉಡುಪಿ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಪ್ರಸಾದ ವಿನಿಯೋಗ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ದೇವಾಲಯಗಳಲ್ಲಿ ಭಕ್ತರಿಗೆ ಪ್ರಸಾದ ವಿನಿಯೋಗ ಮತ್ತು ದಾಸೋಹ ಏರ್ಪಡಿಸುವ ಸಂದರ್ಭದಲ್ಲಿ ಅಗತ್ಯ ಎಚ್ಚರಿಕಾ ಕ್ರಮಗಳನ್ನು ವಹಿಸುವ ಕುರಿತು ಎಲ್ಲಾ ದೇವಾಲಯಗಳ ಆಡಳಿತ ಮಂಡಳಿಗಳ ಮುಖ್ಯಸ್ಥರಿಗೆ ಕಾರ್ಯಾಗಾರ ಏರ್ಪಡಿಸಿ , ಆಹಾರ ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದ್ದಾರೆ.

ಇತ್ತೀಚೆಗೆ ಚಾಮರಾಜ ನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಕ್ತಾಧಿಗಳಿಗೆ ನೀಡಲಾದ ಪ್ರಸಾದದಲ್ಲಿ ವಿಷ ಮಿಶ್ರಣ ದಿಂದ 17 ಮಂದಿ ಮೃತಪಟ್ಟಿದ್ದರು. ಈ ಘಟನೆಯಲ್ಲಿ ಹಲವು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಈ ಹಿನ್ನೆಲೆಯಲ್ಲಿ ದೇವಾಲಯಗಳಲ್ಲಿ ದಾಸೋಹ ಮತ್ತು ಪ್ರಸಾದ ತಯಾರಿಸುವಾಗ ಅಗತ್ಯ ರೀತಿಯ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು, ಪ್ರಸಾದ ತಯಾರಿಕೆ ಕೋಣೆ ಮತ್ತು ದಾಸೋಹ ತಯಾರಿಸುವ ಅಡುಗೆ ಕೋಣೆಗೆ ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸುವಂತೆ ಸೂಚಿಸಿದ್ದಾರೆ. ಅದಲ್ಲದೇ ಈ ಕೋಣೆಗಳಿಗೆ ಯಾರೇ ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ನಿಗಾ ವಹಿಸಬೇಕು.
ತಯಾರಿಸಿರುವ ನೈವೇದ್ಯ, ಪ್ರಸಾದ, ಅಡುಗೆ ಸ್ವೀಕರಿಸಲು ಯೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಂಡು ನಂತರ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದ್ದಾರೆ.












Click it and Unblock the Notifications