ಶೀಘ್ರದಲ್ಲೇ ಉಡುಪಿ ತ್ಯಾಜ್ಯ ಮುಕ್ತ ಜಿಲ್ಲೆಯಾಗಿ ಘೋಷಣೆ
ಉಡುಪಿ, ಅ.17 : 'ಉಡುಪಿ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಕಾರ್ಯ ಆರಂಭಗೊಂಡಿದೆ' ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಬುಧವಾರ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ 'ಸ್ವಚ್ಛ ಉಡುಪಿ ಮಿಷನ್' ವರ್ಷದ ಕೌಂಟ್ ಡೌನ್ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಿದರು. 'ದೇಶದಲ್ಲಿ ಅತಿ ಕಡಿಮೆ ಸಮಸ್ಯೆ ಇರುವ ಜಿಲ್ಲೆಗಳಲ್ಲಿ ಉಡುಪಿ ಒಂದಾಗಿದ್ದು, ತ್ಯಾಜ್ಯ ವಿಲೇವಾರಿ ಸಮಸ್ಯೆ ಬಗೆಹರಿಸಿದರೆ ಇಡೀ ದೇಶದಲ್ಲಿ ಸಮಸ್ಯೆ ಮುಕ್ತ ಜಿಲ್ಲೆ ಉಡುಪಿಯಾಗಲಿದೆ' ಎಂದರು.

'2018 ರ ಅಕ್ಟೋಬರ್ 2ರಂದು ಉಡುಪಿ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕ್ರಮ ಕೈಗೊಂಡಿದ್ದು, ಇಂದಿನಿಂದಲೇ ಅಗತ್ಯ ಕಾರ್ಯಗಳನ್ನು ಆರಂಭಿಸಲಾಗುತ್ತದೆ. ಜಿಲ್ಲಾಡಳಿತ ಇದಕ್ಕೆ ಸಂಬಂಧಿಸಿದ ಯೋಜನೆಯನ್ನು ತಯಾರಿಸಿದೆ' ಎಂದು ಪ್ರಮೋದ್ ಮಧ್ವರಾಜ್ ತಿಳಿಸಿದರು.
'ತಾಜ್ಯ ವಿಲೇವಾರಿ ಬಗ್ಗೆ ವೆಲ್ಲೂರಿನ ಇಂಡಿಯನ್ ಗ್ರೀನ್ ಸರ್ವಿಸಸ್ ನ ಶ್ರೀನಿವಾಸನ್ ಅವರಿಂದ ತರಬೇತಿ ನೀಡಲಾಗಿದೆ, ಸಮರ್ಪಕವಾಗಿ ಕಸ ವಿಲೇವಾರಿ ಮಾಡುವ ಕುರಿತಂತೆ ನಿರ್ಲಕ್ಷ ಬೇಡ. ತ್ಯಾಜ್ಯ ವಿಲೇವಾರಿ ಮಾಡುವುದು ಜಿಲ್ಲೆಯ ಪ್ರತಿಯೊಬ್ಬ ನಾಗರೀಕರ ಜವಾಬ್ದಾರಿ' ಎಂದು ಸಚಿವರು ಹೇಳಿದರು.
ಇಂಡಿಯನ್ ಗ್ರೀನ್ ಸರ್ವಿಸಸ್ನ ವೆಲ್ಲೂರು ಶ್ರೀನಿವಾಸನ್ ಮಾತನಾಡಿ, 'ಉಡುಪಿ ಜಿಲ್ಲೆ ಈಗಾಗಲೇ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿದ್ದು, ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ಕಷ್ಟವಲ್ಲ, ಇದಕ್ಕಾಗಿ ಜಿಲ್ಲೆಗೆ ಪ್ರತ್ಯೇಕ ಸೂತ್ರ ತಯಾರಿದ್ದು ಅದರಂತೆ ಕಾರ್ಯ ನಿರ್ವಹಿಸುವುದರ ಮೂಲಕ ಒಂದುವರ್ಷದ ಒಳಗೆ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿ ಮಾಡಲಾಗುವುದು' ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾತನಾಡಿ, 'ಜಿಲ್ಲೆಯ ಜನತೆ ಒಟ್ಟಾಗಿ ಶ್ರಮಿಸಿದರೆ ತ್ಯಾಜ್ಯ ಮುಕ್ತ ಜಿಲ್ಲೆ ಮಾಡುವುದು ಕಷ್ಟವಲ್ಲ, ಜಿಲ್ಲೆಯ ಪ್ರತಿ ಮನೆ ಮನೆಯಲ್ಲಿ ಕಸ ವಿಂಗಡನೆ ಮಾಡುವ ಕುರಿತಂತೆ ಅರಿವು ಮೂಡಿಸಲಾಗುತ್ತಿದೆ, ಜನರಲ್ಲಿ ತ್ಯಾಜ್ಯ ವಿಲೇವಾರಿ ಪ್ರವೃತ್ತಿ ಬೆಳೆಯಬೇಕು' ಎಂದರು.












Click it and Unblock the Notifications