ಪೇಜಾವರ ಶ್ರೀಗಳಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ಉಡುಪಿ, ಡಿಸೆಂಬರ್ 20: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿಯ ಪೇಜಾವರ ಮಠದ 88 ವರ್ಷದ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಶುಕ್ರವಾರ ದಾಖಲಿಸಲಾಗಿದೆ. ಉಸಿರಾಟದ ತೊಂದರೆಯಿಂದಾಗಿ ಮುಂಜಾನೆ 3 ಗಂಟೆ ಸುಮಾರಿಗೆ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಕೂಡಲೇ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಅವರಿಗೆ ಸದ್ಯ ಐಸಿಯುದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ತಮ್ಮ ಇಳಿವಯಸ್ಸಿನಲ್ಲಿಯೂ ಪೇಜಾವರ ಶ್ರೀಗಳು ನಿರಂತರ ಪ್ರವಾಸದಲ್ಲಿದ್ದರು. ಉತ್ತರ ಭಾರತ, ತಿರುಪತಿ ಮತ್ತು ಚೆನ್ನೈಗೆ ಭೇಟಿ ನೀಡಿದ್ದರು. ಗುರುವಾರ ರಾತ್ರಿಯಿಂದ ಅವರು ಶೀತದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

2017ರಲ್ಲಿ ಪೇಜಾವರ ಶ್ರೀಗಳು ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಒಂದು ತಿಂಗಳ ಬಳಿಕ ಅವರಿಗೆ ಪುನಃ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆ ನೀಡಲಾಗಿತ್ತು.












Click it and Unblock the Notifications