ರಾಜ್ಯ ಸರ್ಕಾರ ಪೂರ್ಣಾವಧಿ ಅಧಿಕಾರ ಮಾಡಲಿ: ಪೇಜಾವರ ಶ್ರೀ
ಉಡುಪಿ, ಜೂನ್. 01 : ಸಿಎಂ ಕುಮಾರಸ್ವಾಮಿ ಅನುಭವಿ ರಾಜಕಾರಣಿ. ರಾಜ್ಯ ಸರ್ಕಾರ ಪೂರ್ಣಾವಧಿ ಅಧಿಕಾರ ಮಾಡಲಿ ಎಂದು ಹಾರೈಸುತ್ತೇನೆ ಎಂದು ಪೇಜಾವರ ಶ್ರೀ ಹೇಳಿದರು.
ಉಡುಪಿ ಮಠದಲ್ಲಿ ಇಂದು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವದ ವಿಕೃತಿಯಾಗಿವೆ. ರಾಜಕಾರಣಿಗಳು ರೆಸಾರ್ಟ್, ಆಪರೇಷನ್ ನಲ್ಲಿ ತಲ್ಲೀನರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಯಾವುದೇ ರಾಜಕೀಯ ಪಕ್ಷಗಳು ನೈತಿಕತೆ ಹೊಂದಿಲ್ಲ. ಗೊಂದಲ ನಿರ್ಮಾಣವಾದ್ರೆ ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಬೇಡ. ಸರ್ವ ಪಕ್ಷ ಸರ್ಕಾರ ಜಾರಿಗೆ ಬರಬೇಕು. ಅಂತಹ ಪ್ರಯೋಗ ರಾಜ್ಯದಲ್ಲಿ ನಡೆಯಬೇಕು. ವಿಪಕ್ಷ ಮುಕ್ತ ಸರ್ಕಾರ ಸರಿಯಲ್ಲ. ವಿಪಕ್ಷ ಇರಬೇಕು ಎಂಬುದು ನನ್ನ ವಾದ.

ಮೋದಿ ಸರ್ಕಾರದಿಂದ ಸಾಕಷ್ಟು ಕೆಲಸ ಆಗಿದೆ. ಕೇಂದ್ರ ಸರ್ಕಾರದ ಬಗ್ಗೆ ಬಹಳ ನಿರೀಕ್ಷೆ ಇತ್ತು. ನಿರೀಕ್ಷೆಯಷ್ಟು ಸಾಧನೆಗಳು ಆಗಲಿಲ್ಲ ಎಂಬ ಬೇಸರವಿದೆ. ರಾಮ ಮಂದಿರಕ್ಕಿಂತ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು. ಗಂಗಾ ಶುದ್ಧೀಕರಣ ವಿಷಯದಲ್ಲೂ ಪೂರ್ತಿ ಕೆಲಸ ಆಗಿಲ್ಲ ಎಂದು ತಿಳಿಸಿದರು.
ಈ ಬಾರಿಯೂ ಇಫ್ತಾರ್ ಕೂಟ ಮಾಡಬೇಕೆಂಬ ಭಾವನೆ ಇದೆ. ಮುಸಲ್ಮಾನ ನಾಯಕರು, ಪ್ರಮುಖರು ಒಪ್ಪಿದರೆ ಸತ್ಕಾರ ಕೂಟ ಮಾಡುತ್ತೇನೆ. ಈ ಬಾರಿ ಮುಸ್ಲೀಮರು ಇಫ್ತಾರ್ ಕೂಟಕ್ಕೆ ಬಹಳ ಉತ್ಸಾಹ ತೋರಿಸುತ್ತಿಲ್ಲ. ಕಳೆದ ಬಾರಿಯ ಇಫ್ತಾರ್ ಕೂಟ ಬಹಳ ಚರ್ಚೆಯಾಗಿತ್ತು.
ಮೂರ್ತಿ ಇರುವಲ್ಲಿ ಕಾರ್ಯಕ್ರಮ ಆಯೋಜಿಸಲು ಮುಸಲ್ಮಾನರು ಒಪ್ಪುತ್ತಿಲ್ಲ. ಗೋವಿಂದ ಕಲ್ಯಾಣ ಮಂಟಪದಲ್ಲಿ ಸತ್ಕಾರ ಕೂಟ ಆಯೋಜಿಸುವ ಆಲೋಚನೆಯಿದೆ. ಅಲ್ಪಸಂಖ್ಯಾತರನ್ನು ಬಹು ಸಂಖ್ಯಾತರನ್ನು ಸಮಾನವಾಗಿ ಕಾಣಬೇಕು. ಸಂವಿಧಾನ ಬದಲಿಸಿ ಅಂತ ನಾನು ಯಾವತ್ತೂ ಹೇಳಿಲ್ಲ.
ದೇಶದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ದೇಶದಲ್ಲಿ ಎಲ್ಲರಿಗೂ ಒಂದೇ ನ್ಯಾಯ ಇರಬೇಕು. ಶಿಕ್ಷಣ, ಆಹಾರ, ಸರ್ಕಾರದ ಯೋಜನೆ ಎಲ್ಲಾ ಧರ್ಮದ ಬಡವರಿಗೆ ಸಿಗಬೇಕು. ನಾನು ಅಂಬೇಡ್ಕರ್ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದರು.












Click it and Unblock the Notifications