ಕುಂದಾಪುರ: ಬಿಜೆಪಿಗರ ಕೆಂಗಣ್ಣಿಗೆ ಗುರಿಯಾದ ಶೋಭಾ
ಉಡುಪಿ, ಸೆಪ್ಟೆಂಬರ್ 21: ಬಿಜೆಪಿಯಿಂದ ರಾಜ್ಯದ 224 ಕ್ಷೇತ್ರಗಳಲ್ಲಿ ಇದುವರೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಅಂತಿಮಗೊಂಡಿಲ್ಲ. ಹೀಗಿರುವಾಗ ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರೇ ಮುಂದಿನ ಬಿಜೆಪಿ ಅಭ್ಯರ್ಥಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಘಂಟಾಘೋಷವಾಗಿ ಸಾರಿದ್ದು ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ.
ಯಾವ ಕ್ಷೇತ್ರಕ್ಕೂ ಇಲ್ಲಿಯವರೆಗೆ ಅಭ್ಯರ್ಥಿ ಯಾರೆಂದು ಘೋಷಣೆಯಾಗಿಲ್ಲ. ಹೀಗಿರುವಾಗ ಸ್ಥಳೀಯವಾಗಿ ಪಕ್ಷ ಕಟ್ಟುವಲ್ಲಿ ಶ್ರಮಿಸಿದ ಕಾರ್ಯಕರ್ತರನ್ನು ಗಣನೆಗೆ ತೆಗೆದುಕೊಳ್ಳದೆ ಪಕ್ಷಾಂತರ ಅಭ್ಯರ್ಥಿ ಹಾಲಾಡಿಯವರನ್ನು ಮುಂದಿನ ಅಭ್ಯರ್ಥಿ ಎಂದು ಶೋಭಾ ಘೋಷಿಸಿದ್ದಾರೆ. ಇದು ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿಶೋರ್ ಕುಮಾರ್ ಹೇಳಿಕೆ ನೀಡಿದ್ದು ಬಹಿರಂಗವಾಗಿ ಅಸಮಧಾನ ಹೊರ ಹಾಕಿದ್ದಾರೆ.
ಅಭ್ಯರ್ಥಿ ಆಯ್ಕೆ ಆಗಿಲ್ಲ
ಸಂಸದೆ ಶೋಭಾ ಹೇಳಿಕೆ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದ ಅವರು, "ಕುಂದಾಪುರ ಬಿಜೆಪಿ ಆಂತರಿಕವಾಗಿ ಎಷ್ಟು ಸದೃಢವಾಗಿದೆ ಎಂಬ ವಿಷಯ ಎಲ್ಲರಿಗೂ ಗೊತ್ತಿದೆ. ಎಲ್ಲರ ಅಭಿಪ್ರಾಯವನ್ನು ಕ್ರೋಢೀಕರಿಸಿ ಅಂತಿಮವಾಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುತ್ತದೆ," ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಕೆಲ ದಿನಗಳ ಹಿಂದೆಯಷ್ಟೇ ಚುನಾವಣೆಯವರೆಗೂ ನಾನು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾಧ್ಯಮ ಸಂದರ್ಶನವೊಂದರಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಕಿಶೋರ್ ಕುಮಾರ್ ಇದೇ ಸಂದರ್ಭದಲ್ಲಿ ನೆನಪಿಸಿದರು.
ಶೋಭಾ ಕರಂದ್ಲಾಜೆ ವಿರುದ್ಧ ಆಕ್ರೋಶ
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಹಿಂದೆ ಮಾಡಿದ ಹಾಗೆ ಬಣ ರಾಜಕೀಯ ಮಾಡಿದ್ದಾರೆ. ಅವರಿಗೆ ನಾವು ಬೆಂಬಲ ನೀಡುವುದಿಲ್ಲ. ಅವರು ನಮ್ಮ ಜತೆ ಹೇಗೆ ಹೊಂದಿಕೊಂಡು ಹೋಗುತ್ತಾರೆ ಎಂಬ ನೆಲೆಯಲ್ಲಿ ನಮ್ಮ ಅಭಿಪ್ರಾಯ ತಿಳಿಸಲಿದ್ದೇವೆ ಎಂದು ಕಿಶೋರ್ ಕುಮಾರ್ ಹೇಳಿದ್ದಾರೆ.
ಸಂಸದೆ ಶೋಭಾ ಕರಂದ್ಲಾಜೆ ಭಟ್ಕಳದಿಂದ ಪ್ರಯಾಣ ಬೆಳೆಸಿದ್ದಾರೆ. ಅವರು ಬೈಂದೂರು, ಉಡುಪಿ, ಕಾಪು, ಕಾರ್ಕಳ ಅಭ್ಯರ್ಥಿಯ ಬಗ್ಗೆ ಎಲ್ಲೂ ಮಾತನಾಡಿಲ್ಲ. ಆದರೆ ಕುಂದಾಪುರ ಅಭ್ಯರ್ಥಿಯ ಕುರಿತು ಹೇಳಿಕೆ ನೀಡಿರುವುದು ಹಲವು ಗೊಂದಲಗಳಿಗೆ ಕಾರಣವಾಗಿದೆ ಎಂದವರು ಹೇಳಿದ್ದಾರೆ.
ಸ್ಪರ್ಧಾ ಕಣದಲ್ಲಿ ಕಿಶೋರ್ ಕುಮಾರ್, ಹಾಲಾಡಿ
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿಬೇಕು ಎನ್ನುವ ಕುರಿತು ಪಕ್ಷ ಇದುವರೆಗೂ ತನ್ನ ತೀರ್ಮಾನ ಹೊರಡಿಸಿಲ್ಲ. ಹೀಗಿರುವಾಗ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಕುಂದಾಪುರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಕಿಶೋರ್ ಕುಮಾರ್ ನುಡಿದರು.
ಕುಂದಾಪುರದ ಮುಂದಿನ ವಿಧಾನ ಸಭಾ ಅಭ್ಯರ್ಥಿ ನೀವು ಆಗಬಯಸಿದ್ದೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಿಶೋರ್ ಕುಮಾರ್, ಹಿಂದಿನ ವಿಧಾನಸಭಾ ಚುನಾವಣೆಯಲ್ಲೂ ನಾನು ಅಭ್ಯರ್ಥಿಯಾಗಿದ್ದೇನೆ. ಈ ವರ್ಷವೂ ನಾನು ಯಾಕೆ ಕೇಳಬಾರದು? ಎಂದು ಪ್ರಶ್ನಿಸಿದ್ದಾರೆ.
ಜಯಪ್ರಕಾಶ್ ಹೆಗ್ಡೆ ಬಗ್ಗೆ ಮೆಚ್ಚುಗೆ
ಎಲ್ಲಾ ಕ್ಷೇತ್ರಗಳಲ್ಲಿಯೂ ಇರುವಂತೆ ಒಂದಿಷ್ಟು ಗೊಂದಲಗಳು ನಮ್ಮ ಕ್ಷೇತ್ರದಲ್ಲಿಯೂ ಇವೆ. ಗೊಂದಲಗಳು ಸರಿಪಡಿಸುವ ಕೆಲಸಗಳು ಪಕ್ಷದ ಮುಖಂಡರು ಮಾಡುತ್ತಿದ್ದಾರೆ ಎಂದರು.
ಜಯಪ್ರಕಾಶ ಹೆಗ್ಡೆಯವರು ಪಕ್ಷದ ಹೊರಗಿದ್ದು, ಸ್ಥಳೀಯ ಚುನಾವಣೆಗಳಲ್ಲಿ ನಮ್ಮನ್ನು ಬೆಂಬಲಿಸಿದ್ದರು. ಬಳಿಕ ಬಹಿರಂಗವಾಗಿ ಪಕ್ಷಕ್ಕೆ ಸೇರ್ಪಡೆಗೊಂಡು, ಪಕ್ಷವನ್ನು ಬೆಳೆಸುವಲ್ಲಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಆದರೆ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರು ಎಲ್ಲೆಲ್ಲೊ ಬಿಜೆಪಿ ನಡೆಸುವ ಸಭೆಗಳಲ್ಲಿ ಕಾಣಿಸಿಕೊಂಡು ಮತ್ತೆ ಕಣ್ಮರೆಯಾಗುತ್ತಾರೆ ಎಂದು ಅವರು ದೂರಿದರು.