Udupi: ಅಪ್ರಾಪ್ತೆ ಮೇಲೆ ಅತ್ಯಾಚಾರ, ಯುವಕನಿಗೆ 20 ವರ್ಷ ಜೈಲು ಶಿಕ್ಷೆ
ಉಡುಪಿ, ಏಪ್ರಿಲ್. 20: ಜಿಲ್ಲೆಯ ಬೈಂದೂರು ಮೂಲದ ಅಪ್ರಾಪ್ತೆಯೊಂದಿಗೆ ಸ್ನೇಹ ಬೆಳೆಸಿದ ನಂತರ ಅನೇಕ ಬಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ ಉಡುಪಿ ಜಿಲ್ಲೆಯ ತ್ವರಿತ ಪೋಕ್ಸೊ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಎರಡು ವರ್ಷಗಳ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ 23 ವರ್ಷದ ಸಾಹಿಲ್ ಎಂಬುವವರಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಆರೋಪಪಟ್ಟಿ ಪ್ರಕಾರ ಸಾಹಿಲ್ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಹೋಟೆಲ್ ಬಳಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.

ಸಂತ್ರಸ್ತೆ ಉಡುಪಿಯ ಬೈಂದೂರು ಮೂಲದವರಾಗಿದ್ದು, ಆಕೆಯ ತಂದೆ ಸಾಗರದಲ್ಲಿ ಹೋಟೆಲ್ ಹೊಂದಿದ್ದರಿಂದ ಅಲ್ಲಿಯೇ ವಾಸವಾಗಿದ್ದರು. ಇದನ್ನೇ ನೆಪ ಮಾಡಿಕೊಂಡ ಆರೋಪಿ ಅಪ್ರಾಪ್ರ ಬಾಲಕಿ ಜೊತೆಗೆ ಸಂಬಂಧವನ್ನು ಬೆಳೆಸಿದ್ದಾರೆ. ಜುಲೈ 2021 ರಲ್ಲಿ, ಸಾಹಿಲ್ ಅಪ್ರಾಪ್ತೆಯ ಹುಟ್ಟುಹಬ್ಬದ ಆಚರಣೆಗಾಗಿ ಬೈಂದೂರಿಗೆ ಪ್ರಯಾಣ ಬೆಳೆಸಿದರು. ಹುಟ್ಟುಹಬ್ಬದ ಪಾರ್ಟಿಯ ನಂತರ ಸಂತ್ರಸ್ತೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
ಆರೋಪಿ ಯುವಕ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾನೆ. ಇದಾದ ನಂತರ ಪದೇ ಪದೇ ಆಕೆಯ ಮೇಲೆ ಅತ್ಯಾಚಾರ ಕೃತ್ಯ ಎಸಗಿದ್ದಾನೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಸಂತ್ರಸ್ತೆಯ ತಾಯಿಗೆ ಈ ಸಂಬಂಧ ತಿಳಿದಾಗ ಅವರು ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ ಕಾಯ್ಕಿಣಿ ಅವರು ಪ್ರಕರಣದ ಆರೋಪಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿದ ತ್ವರಿತ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ್ ಸುವರ್ಣ ಅವರು ಆರೋಪಿಯನ್ನು ಅಪರಾಧಿ ಎಂದು ಘೋಷಿಸಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 22,500 ರೂಪಾಯಿ ದಂಡ ವಿಧಿಸಿದರು. ಸಂತ್ರಸ್ತ ಬಾಲಕಿಗೆ 1.5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ ಟಿ ರಾಘವೇಂದ್ರ ವಾದ ಮಂಡಿಸಿದ್ದರು.












Click it and Unblock the Notifications