ಕೃಷ್ಣಾ ನದಿ ಮಾದರಿಯಲ್ಲೇ ಭೀಮಾ ನದಿ ನೀರು ನಿರ್ವಹಣಾ ಸಮಿತಿ ರಚನೆ: ಶಶಿಕಲಾ ಜೊಲ್ಲೆ
ವಿಜಯಪುರ, ಅಕ್ಟೋಬರ್ 22: ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ನೆರೆಯ ಮಹಾರಾಷ್ಟ್ರದಲ್ಲೂ ಮಳೆಯಾಗುತ್ತಿದೆ. ಈ ನಡುವೆ ಮಹಾರಾಷ್ಟ್ರದ ಉಜನಿ ಹಾಗೂ ವೀರಾ ಜಲಾಶಯಗಳಿಂದ ಅವೈಜ್ಞಾನಿಕವಾಗಿ ನೀರು ಬಿಟ್ಟ ಪರಿಣಾಮ ಜಿಲ್ಲೆಯಲ್ಲಿ ಪ್ರವಾಹಕ್ಕೆ ಕಾರಣವಾಗಿದೆ.
ಇದಕ್ಕೆ ಕಾರಣರಾದ ಅಧಿಕಾರಿಗಳ ಕರ್ತವ್ಯ ನಿರ್ವಹಣೆಯ ಕುರಿತು ಜಿಲ್ಲಾಧಿಕಾರಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಅ.21ರಂದು ಆಲಮಟ್ಟಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಅಷ್ಟಲ್ಲದೇ ಕೃಷ್ಣಾ ನದಿ ನಿರ್ವಹಣಾ ಮಾದರಿಯಲ್ಲಿ ಭೀಮಾ ನದಿ ನೀರು ನಿರ್ವಹಣಾ ಸಮಿತಿ ರಚನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮಾಹಿತಿ ನೀಡಿದರು. ನವೆಂಬರ್ ಎರಡನೇ ವಾರದಲ್ಲಿ ಸಮಿತಿ ರಚನೆಯಾಗಲಿದ್ದು, ಇದರಲ್ಲಿ ಯಾವ ತಜ್ಞರು, ಅಧಿಕಾರಿಗಳನ್ನು ನೇಮಿಸಬೇಕು ಎನ್ನುವ ವಿಷಯವೂ ಅಂತಿಮವಾಗಲಿದೆ. ಮಹಾರಾಷ್ಟ್ರದ ಜಲಾಶಯಗಳಿಂದ ರಾಜ್ಯಕ್ಕೆ ನೀರು ಬಿಡುಗಡೆ ಮಾಡುವಾಗ ತೆಗೆದುಕೊಳ್ಳಬೇಕಾದ ಕ್ರಮ ಹಾಗೂ ರಾಜ್ಯ ಸರ್ಕಾರ ಸಮಯಕ್ಕೆ ತಕ್ಕಂತೆ ನೀರು ನಿರ್ವಹಣೆ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಸಮಿತಿ ರಚನೆಗೆ ಮುಂದಾಗಿದೆ ಎಂದು ತಿಳಿಸಿದರು.

ಮಹಾರಾಷ್ಟ್ರದಿಂದ ಏಕಾಏಕಿ ನೀರು ಬಿಟ್ಟ ಪರಿಣಾಮ ಭೀಮಾ ನದಿ ತೀರದಲ್ಲಿ ಪ್ರವಾಹ ಉಂಟಾಗಿದೆ. ಮುಂದೆ ಈ ರೀತಿ ಅನಾಹುತಗಳು ಆಗಬಾರದು ಎನ್ನುವ ಉದ್ದೇಶದಿಂದ ನೀರು ನಿರ್ವಹಣಾ ಸಮಿತಿ ರಚಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.












Click it and Unblock the Notifications