ಮುಗಿದಿಲ್ಲ ಬಿಜೆಪಿ ಬಿಕ್ಕಟ್ಟು; ಸಿಪಿ ಯೋಗೀಶ್ವರ್, ಯತ್ನಾಳ್ ಭೇಟಿ!
ವಿಜಯಪುರ, ಜೂನ್ 29; "ಮುಂದಿನ ದಿನಗಳಲ್ಲಿ ಯತ್ನಾಳ್ ಅವರಿಗೆ ಉತ್ತಮ ಸ್ಥಾನಮಾನ ಸಿಗಲಿದೆ. ನಾನು ಅವರಿಗೆ ನೈತಿಕವಾಗಿ ಬೆಂಬಲ ನೀಡುತ್ತೇನೆ" ಎಂದು ಪ್ರವಾಸೋದ್ಯಮ ಸಚಿವ ಸಿ. ಪಿ. ಯೋಗೀಶ್ವರ್ ಹೇಳಿದ್ದಾರೆ.
ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿರುವ ಹೆಸರು ಸಿ. ಪಿ. ಯೋಗೀಶ್ವರ್ ಮತ್ತು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.
ಮಂಗಳವಾರ ಇಬ್ಬರು ನಾಯಕರು ಭೇಟಿಯಾಗಿದ್ದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಅದರಲ್ಲೂ ಸಿ. ಪಿ. ಯೋಗೀಶ್ವರ್ ದೆಹಲಿಯಿಂದ ಬಂದ ಬಳಿಕ ಯತ್ನಾಳ್ ಭೇಟಿಯಾಗಿದ್ದು, ಹೊಸ ಲೆಕ್ಕಾಚಾರ ಹುಟ್ಟುಹಾಕಿದೆ.

ವಿಜಯಪುರದಲ್ಲಿ ಮಂಗಳವಾರ ಭೂತನಾಳ ಕೆರೆಯ ಬಳಿ ತ್ರಿ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲು ಸಿ. ಪಿ. ಯೋಗೀಶ್ವರ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಮಾಡಿದ್ದಾರೆ.
ಭೇಟಿಯ ಬಳಿಕ ಮಾತನಾಡಿದ ಸಿ. ಪಿ. ಯೋಗೀಶ್ವರ್, "ಉತ್ತರ ಕರ್ನಾಟಕ ಹಾಗೂ ವಿಜಯಪುರ ಜಿಲ್ಲೆಯ ಅಭಿವೃದ್ಧಿಗಾಗಿ ಯತ್ನಾಳ್ ಅವರಿಗೆ ಮುಂದಿನ ದಿನಗಳಲ್ಲಿ ಉತ್ತಮ ಸ್ಥಾನಮಾನ ಸಿಗಲಿದೆ. ಅದಕ್ಕಾಗಿ ನಾನು ಅವರ ಬೆಂಬಲಕ್ಕೆ ನಿಲ್ಲುತ್ತೇನೆ" ಎಂದು ಹೇಳಿದರು.
ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಕರ್ನಾಟಕ ಸರ್ಕಾರದ ವಿರುದ್ಧ ಸತತವಾಗಿ ವಾಗ್ದಾಳಿ ನಡೆಸುತ್ತಿದ್ದರು. ಪಕ್ಷದ ಶಿಸ್ತು ಸಮಿತಿಯಿಂದ ನೋಟಿಸ್ ಸಹ ಪಡೆದಿದ್ದಾರೆ.
ಕರ್ನಾಟಕದಲ್ಲಿ ಇಬ್ಬರು ನಾಯಕರು ಭೇಟಿಯಾದರೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿದ್ದಾರೆ. ಇದರಿಂದಾಗಿ ಕರ್ನಾಟಕ ಬಿಜೆಪಿಯ ಬಿಕ್ಕಟ್ಟು ಇನ್ನೂ ಮುಗಿದಿಲ್ಲವೇ? ಎಂಬ ಪ್ರಶ್ನೆ ಎದುರಾಗಿದೆ.












Click it and Unblock the Notifications