ದೇವೇಗೌಡರ ಕಂಚಿನ ಪ್ರತಿಮೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು
ವಿಜಯಪುರ, ನವೆಂಬರ್ 29 : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಹಾಲಿ ಸಚಿವ ಎಂ.ಸಿ.ಮನಗೂಳಿ ಅವರ ಕಂಚಿನ ಪ್ರತಿಮೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಎಚ್.ಡಿ.ದೇವೇಗೌಡ ಮತ್ತು ಹಾಲಿ ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ಅವರ ಕಂಚಿನ ಪ್ರತಿಮೆ ಇದೆ. ಬುಧವಾರ ತಡರಾತ್ರಿ ದುಷ್ಕರ್ಮಿಗಳು ಪ್ರತಿಮೆಗೆ ಬೆಂಕಿ ಹಚ್ಚಿದ್ದಾರೆ.

ಬೆಂಕಿ ಹಚ್ಚಿರುವುದರಿಂದ ಪ್ರತಿಮೆ ಕಪ್ಪಾಗಿದೆ. ಅಪರೂಪದ ಪ್ರತಿಮೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುದ್ದಾರೆ. ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.
ಕುಮಾರಸ್ವಾಮಿ ಉದ್ಘಾಟಿಸಿದ್ದರು : ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದ ಹಿನ್ನಲೆಯಲ್ಲಿ ಉಭಯ ನಾಯಕರ ಕಂಚಿನ ಪ್ರತಿಮೆಯನ್ನು ಗೋಲಗೇರಿ ಗ್ರಾಮದಲ್ಲಿ ಸ್ಥಾಪನೆ ಮಾಡಲಾಗಿತ್ತು.

ದೇವೇಗೌಡ ಎಂ.ಸಿ.ಮನಗೂಳಿ ಅವರ ಹೆಗಲ ಮೇಲೆ ಕೈ ಹಾಕಿಕೊಂಡು ನಿಂತಿರುವ ಕಂಚಿನ ಪ್ರತಿಮೆಯನ್ನು 2014ರ ಫೆ.12ರಂದು ಎಚ್.ಡಿ.ಕುಮಾರಸ್ವಾಮಿ ಅವರು ಪ್ರತಿಮೆಯನ್ನು ಉದ್ಘಾಟಿಸಿದ್ದರು. ಈಗ ಕುಮಾರಸ್ವಾಮಿ ಸಂಪುಟದಲ್ಲಿ ಮನಗೂಳಿ ಅವರು ತೋಟಗಾರಿಕಾ ಸಚಿವರು.
ಎಂ.ಸಿ.ಮನಗೂಳಿ ಅವರು ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ಎರಡು ವರ್ಷ ಚಪ್ಪಲಿ ಧರಿಸದೇ ಬರಿಗಾಲಿನಲ್ಲಿ ಹೋರಾಟ ಮಾಡಿದ್ದರು. ಆಗ ಪ್ರಧಾನಿಯಾಗಿದ್ದ ಎಚ್.ಡಿ.ದೇವೇಗೌಡರು ಯೋಜನೆ ಅನುಷ್ಠಾನಗೊಳಿಸಿ ನೀರಾವರಿಗೆ ಆದ್ಯತೆ ನೀಡಿ, ಜನರ ಕನಸು ನನಸು ಮಾಡಿದ್ದರು.
ಈ ಸವಿ ನೆನಪಿಗಾಗಿ ಸಿಂಧಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಇಬ್ಬರು ನಾಯಕರ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗಿತ್ತು. ಈಗ ಪ್ರತಿಮೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.












Click it and Unblock the Notifications