ಧರ್ಮರಾಜ್ ಚಡಚಣ ಎನ್ಕೌಂಟರ್ ಕೇಸ್ ಸಿಐಡಿಗೆ
ವಿಜಯಪುರ, ಜುಲೈ 26 : ಶಾರ್ಪ್ ಶೂಟರ್ ಧರ್ಮರಾಜ್ ಚಡಚಣ ಎನ್ಕೌಂಟರ್ ಬಗ್ಗೆ ಸಿಐಡಿ ತನಿಖೆ ನಡೆಯುವ ಸಾಧ್ಯತೆ ಇದೆ. ಧರ್ಮರಾಜ್ ಚಡಚಣ ಸಹೋದರ ಗಂಗಾಧರ ಚಡಚಣ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಯುತ್ತಿದೆ.
ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಅಮೃತ್ ನಿಕ್ಕಂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಈ ಕುರಿತು ಪತ್ರ ಬರೆದಿದ್ದಾರೆ. ಗಂಗಾಧರ ಚಡಚಣ ಹತ್ಯೆ, ಧರ್ಮರಾಜ್ ಚಡಚಣ ಎನ್ಕೌಂಟರ್ಗೆ ಸಂಬಂಧವಿದೆ ಎರಡೂ ಪ್ರಕರಣ ಒಂದೇ ದಿನ ನಡೆದಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಗಂಗಾಧರ ಚಡಚಣ ಮತ್ತು ಧರ್ಮರಾಜ್ ಚಡಚಣ ಸಹೋದರರು. ಗಂಗಾಧರ ಚಡಚಣ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಗೆ ಎನ್ಕೌಂಟರ್ ಪ್ರಕರಣದ ತನಿಖೆಯನ್ನು ಹಸ್ತಾಂತರ ಮಾಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಎನ್ಕೌಂಟರ್ಗೆ ಬಲಿ : ಕೊಲೆ, ಬೆದರಿಕೆ, ಅಪಹರಣ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಸೇರಿದಂತೆ 40 ಪ್ರಕರಣಗಳಲ್ಲಿ ಧರ್ಮರಾಜ್ ಚಡಚಣ ಪೊಲೀಸರಿಗೆ ಬೇಕಾಗಿದ್ದ. ವಿಜಯಪುರ ಬಿಟ್ಟು ಪುಣೆಯಲ್ಲಿ ಹೋಗಿ ಅತ ಅಡಗಿ ಕೂತಿದ್ದ.
2017ರ ಅಕ್ಟೋಬರ್ 30ರಂದು ವಿಜಯಪುರ ಜಿಲ್ಲೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದ ಬಗ್ಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆಗ ಮನೆಯೊಂದರ ಮೇಲೆ ದಾಳಿ ನಡೆಸಿದಾಗ ಧರ್ಮರಾಜ್ ಚಡಚಣ ಅಡಗಿ ಕುಳಿತಿರುವ ಮಾಹಿತಿ ಸಿಕ್ಕಿತ್ತು.
ಪೊಲೀಸರು ಬಂಧಿಸಲು ಮುಂದಾದಾಗ ಅವರ ಮೇಲೆ ಗುಂಡು ಹಾರಿಸಲಾಯಿತು. ಪೊಲೀಸರು ಆತ್ಮರಕ್ಷಣೆಗಾಗಿ ಪ್ರತಿಯಾಗಿ ಗುಂಡು ಹಾರಿಸಿದಾಗ ಧರ್ಮರಾಜ್ ಚಡಚಣ ಗುಂಡೇಟಿನಿಂದ ಗಾಯಗೊಂಡಿದ್ದ. ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ.
ಧರ್ಮರಾಜ್ ಚಡಚಣ ಎನ್ಕೌಂಟರ್ ನಡೆದ ಸ್ಥಳದಲ್ಲಿ ಗಂಗಾಧರ ಚಡಚಣನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸ್ ವಶದಲ್ಲಿದ್ದ ಗಂಗಾಧರ ಚಡಚಣ ಬಳಿಕ ನಾಪತ್ತೆಯಾಗಿದ್ದ. ಕೆಲವು ದಿನಗಳ ಬಳಿಕ ಆತ ಹತ್ಯೆಯಾಗಿರುವ ಸುದ್ದಿ ಬಹಿರಂಗವಾಗಿದೆ.
ಗಂಗಾಧರ ಚಡಚಣ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ.












Click it and Unblock the Notifications