"ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ಅನುಮತಿ ಬೇಕೇ": ಎಂ ಬಿ ಪಾಟೀಲ್
ವಿಜಯಪುರ, ಜುಲೈ 14: ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವುದಕ್ಕೆ ತಮಿಳುನಾಡು ಸರ್ಕಾರದ ಅನುಮತಿ ಕೇಳಬೇಕೇ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಎಂ ಬಿ ಪಾಟೀಲ್ ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಜಾರಿಗೊಳಿಸುವುದರಿಂದ ತಮಿಳುನಾಡಿಗೂ ಸಹ ಅನುಕೂಲವಾಗಲಿದೆ ಎಂದರು. ಇಂಥ ಸಂದರ್ಭದಲ್ಲಿ ತಮಿಳುನಾಡು ವಾದಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಅದರ ಬದಲಿಗೆ ಕಾನೂನಾತ್ಮಕ ಹಾಗೂ ತಾಂತ್ರಿಕವಾಗಿ ಯೋಜನೆ ಮುಂದುವರಿಸುವಂತೆ ಆಗ್ರಹಿಸಿದ್ದಾರೆ.
Recommended Video

ಮೇಕೆದಾಟು ಯೋಜನೆಯನ್ನು ತಡೆಯುವುದಕ್ಕೆ ಕೇಂದ್ರ ಸರ್ಕಾರದ ಮೇಲೆ ತಮಿಳುನಾಡು ಸರ್ಕಾರವು ರಾಜಕೀಯ ಒತ್ತಡವನ್ನು ಹಾಕಿದರೆ ಅದು ರಾಜಕೀಯವಾಗುತ್ತದೆ. ನಾವೂ ಕೂಡಾ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಕೂಡಲೇ ಮಾಜಿ ಮುಖ್ಯಮಂತ್ರಿಗಳು, ಮಾಜಿ ಜಲಸಂಪನ್ಮೂಲ ಸಚಿವರು ಸೇರಿದಂತೆ ಸರ್ವಪಕ್ಷ ಸಭೆ ಕರೆಯುವಂತೆ ಎಂ ಬಿ ಪಾಟೀಲ್ ಆಗ್ರಹಿಸಿದ್ದಾರೆ.

ಮೇಕೆದಾಟು ಯೋಜನೆ ಕರ್ನಾಟಕದ ಹಕ್ಕು:
ಮೇಕೆದಾಟು ಯೋಜನೆ ಎಂಬುದು ನಮ್ಮ ರಾಜ್ಯದ ಹಕ್ಕು. ತಮಿಳುನಾಡು ಈ ವಿಷಯದಲ್ಲಿ ತಕರಾರು ತೆಗೆಯುವುದಕ್ಕೆ ನಮ್ಮ ರಾಜ್ಯದವರು ತೆಲೆ ಕೆಡಿಸಿಕೊಳ್ಳಬೇಕಾಗಿಲ್ಲ. ನಮ್ಮ ರಾಜ್ಯ ಸರ್ಕಾರ ಮೊದಲಿನಂತೆ ಮುಂದುವರಿಯಬೇಕು. ಆ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಕಾಂಗ್ರೆಸ್ ಪಕ್ಷವು ಈ ಯೋಜನೆ ಜಾರಿಗೆ ಸಂಪೂರ್ಣ ಸಹಕಾರ ಕೊಡುತ್ತದೆ. ನಾನೂ ಕೂಡಾ ಮಾಜಿ ನೀರಾವರಿ ಸಚಿವನಾಗಿ ಸಂಪೂರ್ಣ ಸಹಕಾರ ನೀಡುವುದಾಗಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ವಿಡಿಯೋ ನೋಡಿ..












Click it and Unblock the Notifications