ಗಂಗಾಧರ ಚಡಚಣ ಹತ್ಯೆ : ಮುಂದಿನ ವಾರ ಸಿಐಡಿಯಿಂದ ಚಾರ್ಜ್ ಶೀಟ್
ವಿಜಯಪುರ, ಆಗಸ್ಟ್ 31 : ಗಂಗಾಧರ ಚಡಚಣ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಗಂಗಾಧರ ಚಡಚಣ ನಿಗೂಢ ನಾಪತ್ತೆ ಮತ್ತು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಮುಂದಿನ ವಾರ ಚಾರ್ಜ್ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಐವರು ಪೊಲೀಸರು ಸೇರಿ 15 ಆರೋಪಿಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.
ಈ ಪ್ರಕರಣದಲ್ಲಿ ಪಿಎಸ್ಐ ಗೋಪಾಲ ಹಳ್ಳೂರ, ಪೇದೆಗಳಾದ ಸಿದ್ದಾರೂಢ ರಾಗಿ, ಚಂದ್ರಶೇಖರ ಜಾಧವ, ಗೆದ್ದಪ್ಪ ನಾಯ್ಕೋಡಿ ಅವರು ಆರೋಪಿಗಳು. ಇನ್ನೊಬ್ಬ ಪೊಲೀಸ್ ಅಧಿಕಾರಿ ತಲೆಮರೆಸಿಕೊಂಡಿದ್ದು, ಸಿಐಡಿ ಹುಡುಕಾಟ ಮುಂದುವರೆಸಿದೆ.

ಪೊಲೀಸ್ ಅಧಿಕಾರಿಗಳು ಮತ್ತು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹಾದೇವ ಭೈರಗೊಂಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂಡಿ ನ್ಯಾಯಾಲಯ ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ಕೆಲವು ಆರೋಪಿಗಳು ಗಂಗಾಧರ ಚಡಚಣ ಸಹೋದರ ಧರ್ಮರಾಜ್ ಚಡಚಣ ಎನ್ಕೌಂಟರ್ ಪ್ರಕರಣದಲ್ಲಿಯೂ ಆರೋಪಿಗಳು.
2017ರ ಅಕ್ಟೋಬರ್ 30ರಂದು ವಿಜಯಪುರದಲ್ಲಿ ರೌಡಿ ಶೀಟರ್ ಧರ್ಮರಾಜ್ ಚಡಚಣ ಎನ್ ಕೌಂಟರ್ ನಡೆದಿತ್ತು. ಅಂದು ಪೊಲೀಸರು ಗಂಗಾಧರ ಚಡಚಣನನ್ನು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಗಂಗಾಧರ ಚಡಚಣ ಹತ್ಯೆಯಾದ ವಿಚಾರ ಬೆಳಕಿಗೆ ಬಂದಿತ್ತು.
ಪೊಲೀಸ್ ವಶದಲ್ಲಿದ್ದ ಗಂಗಾಧರ ಚಡಚಣ ಹತ್ಯೆಯಾಗಿದ್ದು ಹೇಗೆ? ಎಂಬುದು ಕುತೂಹಲದ ವಿಚಾರವಾಗಿದೆ. ಅಲ್ಲದೇ ಗಂಗಾಧರ ಚಡಚಣನ ಮೃತದೇಹ ಇನ್ನೂ ಸಿಕ್ಕಿಲ್ಲ. ಕೆಲವು ಪೊಲೀಸರು ಗಂಗಾಧರ ಚಡಚಣನ ವಿರೋಧ ಮಹಾದೇವ ಭೈರಗೊಂಡ ಜೊತೆ ಕೈ ಜೋಡಿಸಿ ಆತನನ್ನು ಹತ್ಯೆ ಮಾಡಿದ್ದಾರೆ ಎಂಬುದು ಆರೋಪವಾಗಿದೆ.












Click it and Unblock the Notifications