ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ: ನಡುಗಡ್ಡೆಯಲ್ಲಿ ಸಿಲುಕಿದ ಜನ
ವಿಜಯಪುರ, ಅಕ್ಟೋಬರ್ 16: ಮಳೆಯ ಅಬ್ಬರ ಉತ್ತರ ಕರ್ನಾಟಕ ಭಾಗದಲ್ಲಿ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭೀಕರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದೀಗ ನದಿಯ ನಡುಗಡ್ಡೆಯಲ್ಲಿ 7 ಜನ ಸಿಲುಕಿದ್ದು, ರಕ್ಷಣೆಗಾಗಿ ಮನವಿ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಬಳಿ ಇರುವ ಡೋಣಿ ನದಿಯ ನಡುಗಡ್ಡೆಯಲ್ಲಿ 7 ಜನ ಸಿಲುಕಿದ್ದು, ಸಹಾಯಕ್ಕಾಗಿ ಪರದಾಡುತ್ತಿದ್ದಾರೆ. ಇದ್ದಿಲು ತಯಾರಿಸಲು ಬಂದಿರುವ ಮಹಾರಾಷ್ಟ್ರ ಮೂಲದ ಏಳು ಜನ ಡೋಣಿ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದು, ಏಳು ಜನರ ಪೈಕಿ ಐವರು ಮಕ್ಕಳಿರುವ ಮಾಹಿತಿ ಲಭ್ಯವಾಗಿದೆ.
ಡೋಣಿ ನದಿಯಲ್ಲಿ ಅಪಾಯದ ಮಟ್ಟ ಮೀರಿ ಪ್ರವಾಹ ಬಂದರೂ ಹೊರ ಬಾರದೆ ನಡುಗಡ್ಡೆಯಲ್ಲಿ ಉಳಿದುಕೊಂಡಿದ್ದರು. ಭಾರಿ ಪ್ರವಾಹದಿಂದ ನೀರು ಹೆಚ್ಚಾಗುತ್ತಿದ್ದಂತೆ ಅಲ್ಲಿಂದ ಹೊರ ಬರಲು ಸಾಧ್ಯವಾಗದೆ ಸ್ಥಳೀಯ ಅಧಿಕಾರಿಗಳಿಗೆ ಕರೆ ಮಾಡಿ ಸಹಾಯಕ್ಕೆ ಮನವಿ ಮಾಡಿದ್ದಾರೆ.

ಇದೀಗ ಏಳು ಜನರನ್ನು ಕರೆ ತರಲು ಬೋಟ್ ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಗುರುವಾರ ರಾತ್ರಿ ಸ್ಥಳಕ್ಕೆ ಎಸಿ ಬಲರಾಮ ಲಮಾಣಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು ನಡುಗಡ್ಡೆಯಲ್ಲಿ ಸಿಲುಕಿದವರ ರಕ್ಷಿಸಿ ಕರೆ ತರಲು ಕಂದಾಯ ಇಲಾಖೆ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಿದ್ಧತೆ ಮಾಡಿಕೊಂಡಿದ್ದಾರೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭಾರೀ ಅನಾಹುತ ಸಂಭವಿಸಿದ್ದು, ನದಿ, ಹಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಹಲವು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ವಿಪರೀತ ಮಳೆಯಿಂದಾಗಿ ಜನ ಕಂಗಾಲಾಗಿದ್ದಾರೆ.












Click it and Unblock the Notifications