ಖರ್ಗೆ ಸಿಎಂ ಆಗುವುದನ್ನು ತಪ್ಪಿಸಿದ್ದು ನಾನಲ್ಲ: ಗೌಡರಿಗೆ ಸಿದ್ದು ಚಾಟಿ
ವಿಜಯಪುರ, ನವೆಂಬರ್ 12: "ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಸಿದ್ದರಾಮಯ್ಯ ಒಪ್ಪಲಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹೇಳಿದ್ದಾರೆ. ಆದರೆ ಅವರ ಆರೋಪ ಆಧಾರ ರಹಿತ. ನಾನು ಯಾರನ್ನೂ ಮುಖ್ಯಮಂತ್ರಿಯಾಗಲು ತಡೆದಿಲ್ಲ" ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಹೇಳಿದ್ದಾರೆ.
"ಹೈಕಮಾಂಡ್ ಯಾರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳಿತ್ತು. ನಾನು ಆ ಆದೇಶವನ್ನು ಪಾಲಿಸಿದೆ ಅಷ್ಟೆ. ಅದರಲ್ಲಿ ನನ್ನ ಪಾತ್ರವೇನೂ ಇಲ್ಲ" ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಸಿದ್ದರಾಮಯ್ಯ ಅವರಿಗೆ ಇಷ್ಟವಿರಲಿಲ್ಲ ಎಂದಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಈ ರೀತಿ ಹೇಳಿದರು.

ಯಾರ ಮುಖ್ಯಮಂತ್ರಿಸ್ಥಾನವನ್ನೂ ತಪ್ಪಿಸಿಲ್ಲ
ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಏಕೈಕ ಉದ್ದೇಶದಿಂದ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಹೈಕಮಾಂಡ್ ಸೂಚಿಸಿತ್ತು. ಹೈಕಮಾಂಡ್ ಆದೇಶವನ್ನು ನಾನು ಪಾಲಿಸಿದೆ. ಇದರಲ್ಲಿ ನನ್ನ ಪಾತ್ರ ಇಷ್ಟೆ. ಹೈಕಮಾಂಡ್ ಜೊತೆ ಚರ್ಚಿಸಿದ್ದು, ಸರ್ಕಾರ ರಚಿಸಿದ್ದು ದೇವೇಗೌಡರು. ನಾನು ಯಾರ ಮುಖ್ಯಮಂತ್ರಿ ಪಟ್ಟವನ್ನು ತಪ್ಪಿಸಿಲ್ಲ.

12 ಸ್ಥಾನಗಳಲ್ಲಿ ಗೆಲುವು
ಉಳಿದ 7 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ನಂತರ ಹೈಕಮಾಂಡ್ ಜೊತೆ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ನಮ್ಮ ಗುರಿ ಕನಿಷ್ಠ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು. 15 ಸ್ಥಾನ ಗೆದ್ದರೂ ಆಶ್ಚರ್ಯವಿಲ್ಲ.

ಆಪರೇಷನ್ ಗೊತ್ತಿಲ್ಲ
ನಾವಾಗಿಯೇ ಹಣ, ಅಧಿಕಾರದ ಆಮಿಷ ಒಡ್ಡಿ ಬೇರೆ ಪಕ್ಷದವರನ್ನು ನಮ್ಮ ಪಕ್ಷಕ್ಕೆ ಕರೆತಂದರೆ ಅದು ಆಪರೇಷನ್ ಆಗುತ್ತದೆ. ಆದರೆ ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಅವರಾಗಿಯೇ ಬಂದರೆ ಅದು ಆಪರೇಷನ್ ಹೇಗಾಗುತ್ತದೆ? ಈ ಆಪರೇಷನ್, ಸರ್ಜರಿ ಇದರಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೇ ಸ್ಪೆಷಲಿಸ್ಟ್. ನಾನು ಡಾಕ್ಟರೂ ಅಲ್ಲ, ನನಗೆ ಯಾವ ರೋಗಿಗಳು ಗೊತ್ತಿಲ್ಲ.

ಬಿಜೆಪಿ ಬಿಟ್ಟು ಹೋಗುತ್ತಿರುವವರನ್ನು ತಡೆಯಲಿ
ಉಪಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಇನ್ನಷ್ಟು ಜನ ನಮ್ಮ ಪಕ್ಷಕ್ಕೆ ಬರುತ್ತಾರೆಂದು ಸಿಟಿ ರವಿ ಹೇಳಿದ್ದಾರಂತೆ. ಮೊದಲು ಬಿಜೆಪಿ ಬಿಟ್ಟು ಹೋಗುತ್ತಿರುವವರನ್ನು ತಡೆಯಲಿ, ಆಮೇಲೆ ಬೇರೆ ಮಾತು. ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಹೇಳಿಕೆಗಳನ್ನು ಕೇಳಿ ಕೇಳಿ ಸಾಕಾಗಿದೆ.

ಹಿಂಬಾಗಿಲ ರಾಜಕಾರಣ!
ಬಿಜೆಪಿಯವರ ಬಳಿ ಹಣವಿದೆ, ಅಧಿಕಾರ ಹಿಡಿಯಲು ಆಪರೇಷನ್ ಕಮಲವನ್ನೂ ಮಾಡ್ತಾರೆ, ಅನೈತಿಕ ರಾಜಕಾರಣವನ್ನೂ ಮಾಡ್ತಾರೆ. ಮೌಲ್ಯಾಧಾರಿತ ರಾಜಕಾರಣ ಅಂದ್ರೆ ಏನು ಅಂತಲೇ ಅವರಿಗೆ ಗೊತ್ತಿಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಸ್ವಲ್ಪವೂ ಗೌರವವಿಲ್ಲ. ಹಿಂಬಾಗಿಲ ರಾಜಕಾರಣಕ್ಕೆ ಬಿಜೆಪಿಯವರು ಹೆಸರುವಾಸಿ.












Click it and Unblock the Notifications