ಚುನಾವಣೆ ಹೊಸ್ತಿಲಲ್ಲೇ ದಳಪತಿಗಳಿಗೆ ಶಾಕ್: ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ
ವಿಜಯಪುರ, ಏಪ್ರಿಲ್ 30: ಚುನಾವಣೆಗೆ ಇನ್ನೇನೂ ಕೆಲವೇ ದಿನಗಳು ಬಾಕಿ ಇರುವಾಗಲೇ ವಿಜಯಪುರ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪಕ್ಷದ ಮುಖಂಡರಿಗೆ ಶಾಕ್ ನೀಡಿದ್ದಾರೆ. ವಿಜಯಪುರ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಾಭಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.
ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಸೂಕ್ತವಾಗಿರದ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಾಭಾರಿ ಚುನಾವಾಣಾ ರಾಜಕೀಯದಿಂದ ಹಿಂದೆ ಸರಿದಿದ್ದು, ವಿಜಯಪುರ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಕಾಜಾಸಾಹೇಬ ಮುಶ್ರಿಫ್ ಗೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಾತನಾಡಿರುವ ಬಂದೇನವಾಜ್ ಮಹಾಭಾರಿ " ಕೊನೆಯ ಕ್ಷಣದಲ್ಲಿ ನನಗೆ ಟಿಕೆಟ್ ಘೋಷಣೆ ಮಾಡಿದರು. ವಿಜಯಪುರ ನಗರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಇಲ್ಲ. ಕಾರ್ಯಕರ್ತರ ತಂಡ ಇಲ್ಲ. ಎರಡು ದಿನ ಪ್ರಚಾರ ನಡೆಸಿದಾಗ ಯಾವುದೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹೀಗಾಗಿ ಕಣದಿಂದ ಹಿಂದೆ ಸರಿದಿದ್ದೇನೇ" ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಾತು ಮುಂದುವರಿಸಿದ ಬಂದೇನವಾಜ್ ಮಹಾಭಾರಿ ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಸೈಲೆಂಟ್ ಆಗಿರುತ್ತೇನೆ. ನನ್ನ ಮೇಲೆ ಯಾವುದೇ ಒತ್ತಡ ಇಲ್ಲ. ಸ್ವಯಂ ಪ್ರೇರಣೆಯಿಂದ ಹಿಂದೆ ಸರಿದಿದ್ದೇನೆ. ಈ ಹಿಂದೆ ಬಸನಗೌಡ ಪಾಟೀಲ್ ಯತ್ನಾಳ್ ಜೆಡಿಎಸ್ ಸಂಘಟನೆ ಹಾಳು ಮಾಡಿದ್ದಾರೆ. ವಿಜಯಪುರ ನಗರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಂಘಟನೆಯೇ ಇಲ್ಲ. ಪ್ರಚಾರಕ್ಕೆ ಹೋದರೆ ಜನರ ಬೆಂಬಲ ಇಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
ಇನ್ನು ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ನನ್ನ ಆಪ್ತರ ಜೊತೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಗಮನಕ್ಕೆ ಈ ವಿಷಯ ತಂದಿಲ್ಲ. ವಿಜಯಪುರ ಜೆಡಿಎಸ್ ಜಿಲ್ಲಾಧ್ಯಕ್ಷರಿಗೆ ನನ್ನ ನಿರ್ಧಾರ ತಿಳಿಸಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಆದರೆ ಅವರು ನನ್ನ ಮೇಲೆ ಒತ್ತಡ ಹೇರಿಲ್ಲ. ನನ್ನ ನಿರ್ಧಾರದಿಂದ ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ವಿವರಿಸಿದು.
ಇನ್ನು ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸದ್ಯ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಕಾಜಾಸಾಹೇಬ ಮುಶ್ರಿಫ್ ನಡುವೆ ಜಿದ್ದಾಜಿದ್ದಿಯ ಪೈಪೋಟಿ ಏರ್ಪಟ್ಟಿದೆ.












Click it and Unblock the Notifications