ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೇರಲು ರೆಡಿ ಎಂದ ಯತ್ನಾಳ್
ವಿಜಯಪುರ, ಮೇ 06: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯ ಹುಡುಕಾಟ ಜಾರಿಯಲ್ಲಿದೆ. ಈ ನಡುವೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೇರಲು ರೆಡಿ ಎಂದ ಮಾಜಿ ಕೇಂದ್ರ ಸಚಿವ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ. ಲೋಕಸಭೆ ಚುನಾವಣೆ 2019ರ ಫಲಿತಾಂಶ ಹೊರ ಬಂದ ಬಳಿಕ ಅಧ್ಯಕ್ಷ ಸ್ಥಾನವನ್ನು ತುಂಬುವ ಕಾರ್ಯದಲ್ಲಿ ಬಿಜೆಪಿ ಹೈಕಮಾಂಡ್ ಮಗ್ನವಾಗಲಿದೆ.
ಸಂಘಟನಾ ಚತುರ ಸಂತೋಷ್ ಗೆ ಬಡ್ತಿ, ಬಿಜೆಪಿ ಅಧ್ಯಕ್ಷ ಸ್ಥಾನ ರವಿಗೆ ಖಾತ್ರಿ?
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ಯಡಿಯೂರಪ್ಪ ಅವರ ಅಧಿಕಾರಾವಧಿ ಏಪ್ರಿಲ್ 05ಕ್ಕೆ ಮುಕ್ತಾಯವಾಗಿದೆ. ಹೀಗಾಗಿ, ರಾಜ್ಯ ಬಿಜೆಪಿ ಅಧ್ಯಕ್ಷ ಹುದ್ದೆಗೂ ಭಾರಿ ಲಾಬಿ ನಡೆಯುತ್ತಿದೆ. ಸುಮಾರು 13 ಆಕಾಂಕ್ಷಿಗಳು ರೇಸ್ನಲ್ಲಿದ್ದಾರೆ. ಒಕ್ಕಲಿಗ ಕೋಟಾದಲ್ಲಿ ಮಾಜಿ ಸಚಿವ ಸಿ.ಟಿ ರವಿ, ಮಾಜಿ ಡಿಸಿಎಂ ಆರ್ ಅಶೋಕ್ ಹೆಸರುಗಳು ಮುಂಚೂಣಿಯಲ್ಲಿವೆ. ಈ ನಡುವೆ ಅಧ್ಯಕ್ಷ ಸ್ಥಾನದ ರೇಸಿನಲ್ಲಿ ನಾನಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಆಯ್ಕೆಯಲ್ಲೂ ಸಂತೋಷ್ ಅವರು ಹೈಕಮಾಂಡ್ ನಾಯಕರಿಗೆ ನೆರವಾಗಲಿದ್ದು, ಅವರಿಗೆ ದೆಹಲಿಯಲ್ಲಿ ಉನ್ನತ ಹುದ್ದೆ ಸಿಗಲಿದೆ ಎಂಬ ಮಾಹಿತಿಯಿದೆ. ಈ ಈ ನಡುವೆ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳಲ್ಲಿ ನಾನು ಕೂಡ ಒಬ್ಬನಾಗಿದ್ದೇನೆ. ಯಾಕಂದ್ರೆ ಉತ್ತರ ಕರ್ನಾಟಕ ಬಿಜೆಪಿಯ ಭದ್ರಕೋಟೆಯಾಗಿದೆ. ಹೀಗಾಗಿ ಈ ಭಾಗಕ್ಕೆ ರಾಜ್ಯಾಧ್ಯಕ್ಷ ಸ್ಥಾನ ಸಿಗಬೇಕಿದೆ ಎಂದರು.
ಯಾವುದೇ ಒಂದು ಪ್ರದೇಶವನ್ನು ಯಾರಿಗೂ ಗುತ್ತಿಗೆ ಕೊಟ್ಟಿಲ್ಲ. ಮೈತ್ರಿ ಸರ್ಕಾರ ಮುಂದುವರಿದರೆ ಕಾಂಗ್ರೆಸ್ ಸಂಪೂರ್ಣ ನಾಶ ಆಗುತ್ತದೆ ಎನ್ನುವುದು ಈಗಾಗಲೇ ಕಾಂಗ್ರೆಸ್ಗೆ ಮನವರಿಕೆಯಾಗಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯರನ್ನ ರಾಜಕೀಯವಾಗಿ ಮುಗಿಸುವ ತಂತ್ರ ರೂಪಿಸಲು ಮುಂದಾಗಿದ್ದಾರೆ. ಸರ್ಕಾರ ಬೀಳಿಸಲು ನಾವು ಪ್ರಯತ್ನ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.