ನಿಖಿಲ್, ಪ್ರಜ್ವಲ್ ಚುನಾವಣೆಗೆ ಸ್ಪರ್ಧೆ : ದೇವೇಗೌಡರು ಹೇಳಿದ್ದೇನು?
Recommended Video

ವಿಜಯಪುರ, ಅಕ್ಟೋಬರ್ 10 : 'ಮಂಡ್ಯ ಕ್ಷೇತ್ರದ ಲೋಕಸಭೆ ಉಪ ಚುನಾವಣೆಯಲ್ಲಿ ಮೊಮ್ಮಕ್ಕಳು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲ. ಮಂಡ್ಯದವರನ್ನೇ ಅಭ್ಯರ್ಥಿಯನ್ನಾಗಿ ಮಾಡಲಾಗುತ್ತದೆ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ವಿಜಯಪುರದಲ್ಲಿ ಬುಧವಾರ ಮಾತನಾಡಿದ ಅವರು, 'ಕಾಂಗ್ರೆಸ್ ಪಕ್ಷದ ಜೊತೆ ಮಂಡ್ಯ ಉಪ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದೆ. ಶೀಘ್ರದಲ್ಲೇ ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಮೊಮ್ಮಕ್ಕಳು ಸ್ಪರ್ಧೆ ಮಾಡುವುದಿಲ್ಲ' ಎಂದು ಸ್ಪಷ್ಟಪಡಿಸಿದರು.
ನವೆಂಬರ್ 3ರಂದು ಮಂಡ್ಯ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಜೆಡಿಎಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅಥವ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.
ಕಳೆದ ವಾರ ಮಂಡ್ಯಕ್ಕೆ ಭೇಟಿ ನೀಡಿದ್ದ ನಿಖಿಲ್ ಕುಮಾರಸ್ವಾಮಿ ಅವರು, 'ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರ ಒತ್ತಡವಿದೆ. ಪಕ್ಷ ಮತ್ತು ತಂದೆ ಕುಮಾರಸ್ವಾಮಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ' ಎಂದು ಹೇಳಿದ್ದರು.

ಮೊಮ್ಮಕ್ಕಳ ಸ್ಪರ್ಧೆ ಇಲ್ಲ
'ಮಂಡ್ಯ ಲೋಕಸಭೆ ಉಪ ಚುನಾವಣೆ ಬಗ್ಗೆ ಈಗಾಗಲೇ ಕಾಂಗ್ರೆಸ್ ಜೊತೆ ಮಾತುಕತೆ ನಡೆಸಲಾಗಿದೆ. ಯಾವುದೇ ಕಾರಣಕ್ಕೂ ಮೊಮ್ಮಕ್ಕಳನ್ನು ಕಣಕ್ಕಿಳಿಸುವುದಿಲ್ಲ. ಮಂಡ್ಯದವರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಲಿದ್ದೇವೆ' ಎಂದು ಎಚ್.ಡಿ.ದೇವೇಗೌಡರು ಹೇಳಿದರು.

ಮಧು ಬಂಗಾರಪ್ಪ ಕಣಕ್ಕೆ
'ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸಲಿದ್ದೇವೆ. ಶಿವಮೊಗ್ಗ ಕ್ಷೇತ್ರದಿಂದ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸುವ ಆಲೋಚನೆ ಇದೆ. ಅವರು ಡೆನ್ಮಾರ್ಕ್ ಪ್ರವಾಸದಲ್ಲಿದ್ದು, ವಾಪಸ್ ಬಂದ ಬಳಿಕ ಅಭಿಪ್ರಾಯಪಡೆದು ಅಭ್ಯರ್ಥಿ ಅಂತಿಮಗೊಳಿಸುತ್ತೇವೆ. ಕಾಂಗ್ರೆಸ್ ಜೊತೆಗೂ ಮಾತುಕತೆ ನಡೆಸಿದ್ದು, ಅಭ್ಯರ್ಥಿ ಹುಡುಕಿಕೊಳ್ಳಿ ಎಂದು ಹೇಳಿದ್ದೇವೆ' ಎಂದು ದೇವೇಗೌಡರು ತಿಳಿಸಿದರು.

ಗಂಭೀರವಾಗಿ ಪರಿಗಣಿಸಿದ್ದೇವೆ
'ಐದೂ ಉಪ ಚುನಾವಣೆಗಳನ್ನು ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ನಾನು, ಸಿದ್ದರಾಮಯ್ಯ, ಕುಮಾರಸ್ವಾಮಿ, ಪರಮೇಶ್ವರ, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಚರ್ಚಿಸಿ ಗೆಲವಿನ ಕಾರ್ಯತಂತ್ರ ರೂಪಿಸಿದ್ದೇವೆ. ಸಿದ್ದರಾಮಯ್ಯ ಸರ್ಕಾರದ ಸಾಧನೆ, ಈಗಿನ ಮೈತ್ರಿ ಸರ್ಕಾರದ ಸಾಧನೆ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ' ಎಂದು ದೇವೇಗೌಡರು ಹೇಳಿದರು.

ಜನರು ತೀರ್ಪು ನೀಡಲಿದ್ದಾರೆ
'ಪ್ರತಿ ದಿನವೂ ಸರ್ಕಾರ ಪತನವಾಗಲಿದೆ ಎಂದು ಹೇಳುವವರಿಗೆ ನ.6ರಂದು ಜನರು ಉತ್ತರ ಕೊಡಲಿದ್ದಾರೆ. ಐದು ಉಪಚುನಾವಣೆಯನ್ನೂ ಗೆಲ್ಲುತ್ತೇವೆ. ದೇಶದಲ್ಲಿ ನಡೆಯುತ್ತಿರುವ ಅಹಿತಕರ ಘಟನೆ ಹತ್ತಿಕ್ಕಲು ಎಲ್ಲರೂ ಹಳೆಯದನ್ನು ಮರೆತು ಒಂದಾಗಿದ್ದೇವೆ' ಎಂದು ದೇವೇಗೌಡರು ತಿಳಿಸಿದರು.












Click it and Unblock the Notifications