ವಿಜಯಪುರದಲ್ಲಿ ಎರಡು ದಿನ ನಿಷೇಧಾಜ್ಞೆ ಹೇರಿಕೆ
ವಿಜಯಪುರ, ಜನವರಿ 08 : ದಾನಮ್ಮ ಅತ್ಯಾಚಾರ, ಕೊಲೆ ಖಂಡಿಸಿ ಕರೆ ನೀಡಿದ್ದ 'ವಿಜಯಪುರ ಚಲೋ' ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಎರಡು ದಿನಗಳ ಕಾಲ ವಿಜಯಪುರದಲ್ಲಿ ನಿಷೇಧಾಜ್ಞೆ ಹೇರಲಾಗಿದೆ.
ಅತ್ಯಾಚಾರ ವಿರೋಧಿ ವೇದಿಕೆ ಅಪ್ರಾಪ್ತೆ ದಾನಮ್ಮ ಕೊಲೆ ಖಂಡಿಸಿ 'ವಿಜಯಪುರ ಚಲೋ' ಪ್ರತಿಭಟನಾ ಜಾಥಾ ಹಮ್ಮಿಕೊಂಡಿತ್ತು. ಪ್ರತಿಭಟನೆ ನಡೆಸಲು ಅನುಮಿತಿ ಕೋರಿ ಎಚ್.ಗೀತಾ ಅವರು ಅರ್ಜಿ ಸಲ್ಲಿಸಿದ್ದರು.
ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಜೈನ್ ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದಾರೆ. ಪ್ರತಿಭಟನೆಯಿಂದ ಶಾಂತಿ ಭಂಗವಾಗುವ ಸಾಧ್ಯತೆ ಇರುವುದರಿಂದ ಅವಕಾಶ ನೀಡಲಾಗಿಲ್ಲ.

ನಿಷೇಧಾಜ್ಞೆ ಹೇರಿಕೆ : ಜನವರಿ 9 ಮತ್ತು 10ರಂದು ವಿಜಯಪುರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಹೇರಲಾಗಿದೆ. ಮಂಗಳವಾರ ಬೆಳಗ್ಗೆ 9 ರಿಂದ ಜನವರಿ 10ರ ಸಂಜೆ 6 ಗಂಟೆಯ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ನಿಷೇಧಾಜ್ಞೆ ಹೇರಿರುವುದರಿಂದ ಪ್ರತಿಭಟನೆ, ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ. 4 ಮತ್ತು ಅದಕ್ಕಿಂತ ಹೆಚ್ಚಿನ ಜನರು ಗುಂಪುಗೂಡುವಂತಿಲ್ಲ. ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ.
2017ರ ಡಿಸೆಂಬರ್ 19ರಂದು ದಾನಮ್ಮ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿತ್ತು. ಸರ್ಕಾರ ಈ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.












Click it and Unblock the Notifications