Siddheshwar Swamiji Health; ಸಚಿವ ಪ್ರಹ್ಲಾದ್ ಜೋಶಿಗೆ ಮೋದಿ ಫೋನ್ ಕರೆ
ವಿಜಯಪುರ, ಜನವರಿ 01; ವಿಜಯಪುರದ ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಜ್ಞಾನ ಯೋಗಾಶ್ರಮದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.
ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿ ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಶ್ರೀಗಳ ಜೊತೆ ಅರ್ಧಗಂಟೆಗಳ ಕಾಲ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಶೀಘ್ರ ಗುಣಮುಖರಾಗುವಂತೆ ಆಶಯ ವ್ಯಕ್ತಪಡಿಸಿದರು.
ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು
ಇದೇ ವೇಳೆ ಪ್ರಹ್ಲಾದ್ ಜೋಶಿಗೆ ಕರೆ ಮಾಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಶ್ರೀಗಳ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಕರೆ ಮಾಡಿದ ವೇಳೆ ಪ್ರಧಾನಿ ಮೋದಿ ಅವರು, ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಶ್ರೀಗಳ ಪುಸ್ತಕ ಬಿಡುಗಡೆಗೊಳಿದ ಪ್ರಸಂಗವನ್ನು ನೆನಪಿಸಿಕೊಂಡು ಆರೋಗ್ಯವಾಗಿದ್ದ ಶ್ರೀಗಳ ಅನಾರೋಗ್ಯಗೊಂಡಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಸಿದ್ದೇಶ್ವರ ಶ್ರೀಗಳಿಂದ ಪದ್ಮಶ್ರೀ ಪುರಸ್ಕಾರ ವಿನಮ್ರ ನಿರಾಕರಣೆ
ಹೆಚ್ಚಿನ ಚಿಕಿತ್ಸೆಗೆ ಕೇಂದ್ರ ಹಾಗೂ ರಾಜ್ಯದಿಂದ ಎಲ್ಲ ರೀತಿಯ ಸಹಕಾರ ನೀಡುವಂತೆ ಪ್ರಧಾನಿ ಮೋದಿ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಸೂಚನೆ ನೀಡಿದರು.
ಹೆಚ್ಚಿನ ಚಿಕಿತ್ಸೆ ಒದಗಿಸುವ ಬಗ್ಗೆ
ಹೆಚ್ಚಿನ ಚಿಕಿತ್ಸೆ ಒದಗಿಸುವ ಬಗ್ಗೆ ಪ್ರಧಾನ ಮಂತ್ರಿಗಳು ಅಭಿಲಾಶೆ ವ್ಯಕ್ತಪಡಿಸಿರುವ ಬಗ್ಗೆ ಸಿದ್ದೇಶ್ವರ ಶ್ರೀಗಳಿಗೆ ಪ್ರಹ್ಲಾದ್ ಜೋಶಿ ಅವರು ಹೇಳಿದಾಗ ಸಿದ್ದೇಶ್ವರ ಶ್ರೀಗಳು ಕೈ ಮುಗಿದರು. ಇದನ್ನು ನೋಡಿದರೆ ಸಿದ್ದೇಶ್ವರ ಶ್ರೀಗಳು ಯಾವುದೇ ಚಿಕಿತ್ಸೆ ಪಡೆಯದಿರಲು ನಿರ್ಧರಿಸಿದಂತಿದೆ ಎಂದು ಸಚಿವರು ಮಾಧ್ಯಮಗಳ ಮುಂದೆ ಮಾಹಿತಿ ಹಂಚಿಕೊಂಡಿದ್ದಾರೆ.
ಸಿದ್ದೇಶ್ವರ ಶ್ರೀಗಳ ದರ್ಶನದ ಬಳಿಕ ಮಾತನಾಡಿ ಸಚಿವರು, "ಆಕ್ಸಿಜನ್ ಕಡಿಮೆ ಆಗಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕಳವಳಗೊಂಡು, ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರು ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆವು" ಎಂದರು.
ಶ್ರೀಗಳು ಬೇಗ ಗುಣಮುಖರಾಗಲಿ
"ಶ್ರೀಗಳು ಚೆನ್ನಾಗಿಯೇ ಇದ್ದರು. ಅವರಿಗೆ ಏನಾಗಿದೆ? ಎಂದು ಪ್ರಧಾನಿ ಮೋದಿ ಅವರು ಆತಂಕಕ್ಕೆ ಒಳಗಾಗಿದ್ದರು. ಸಿದ್ದೇಶ್ವರ ಶ್ರೀಗಳಂಥ ಆದರ್ಶ ಸ್ವಾಮೀಜಿ ಸಿಗುವುದು ಬಹಳ ಕಷ್ಟ. ಶ್ರೀಗಳು ಬೇಗ ಗುಣವಾಗಲಿ ಎಂದು ಪಾರ್ಥಿಸುತ್ತೇವೆ" ಎಂದು ಹೇಳಿದರು.
"ಸಮಾಜ, ಕೇಂದ್ರ ಹಾಗೂ ರಾಜ್ಯ ಸರಕಾರ ಎಲ್ಲ ರೀತಿಯ ಸಹಕಾರವನ್ನು ಕೊಡಲಿವೆ. ಚಿಕಿತ್ಸೆಯ ಬಗ್ಗೆ ಶ್ರೀಗಳಿಗೆ ವಿನಂತಿ ಮಾಡಿದ್ದೇವೆ. ಅವರು ಕೈ ಮುಗಿಯುತ್ತಿದ್ದಾರೆ. ಶ್ರೀಗಳ ಸನ್ನೆಯನ್ನು ನೋಡಿದರೆ, ಅವರು ಚಿಕಿತ್ಸೆ ತೆಗೆದುಕೊಳ್ಳಬಾರದು ಎಂದು ನಿರ್ಧರಿಸಿದ್ದಾರೆ ಎಂದು ನನಗೆ ಅನ್ನಿಸುತ್ತಿದೆ" ಎಂದು ಪ್ರಹ್ಲಾದ್ ಜೋಶಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಬಸವರಾಜ ಬೊಮ್ಮಾಯಿ ಮಾತು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, "ಕಳೆದ ಒಂದು ವಾರದಿಂದ ಪ್ರತಿದಿನ ಫೋನ್ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸುತ್ತಿದ್ದೇನೆ. ಮೊನ್ನೆ ನಾನು ಕರೆ ಮಾಡಿದ್ದಾಗ ಒಂದೆರಡು ಮಾತಾಡಿದ್ದರು. ಈಗ ಶ್ರೀಗಳ ಆರೋಗ್ಯ ಆಶ್ಚರ್ಯಕರ ರೀತಿಯಲ್ಲಿ ಸುಧಾರಿಸಿದೆ. ಪ್ರಧಾನಿಗಳು ಜೋಶಿ ಅವರೊಂದಿಗೆ ಮತನಾಡಿದ್ದಾರೆ. ಶ್ರೀಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಧಾನ ಮಂತ್ರಿಗಳು ಹಾರೈಸಿದ್ದಾರೆ. ಶ್ರೀಗಳ ಬದುಕೇ ಮಾದರಿಯಾಗಿದೆ. ಅವರ ಮಾತು, ನಡೆ, ನುಡಿ ನಮ್ಮೆಲ್ಲರಿಗೂ ದಾರಿದೀಪವಾಗಿದೆ. ವಿಜಯಪುರ ಪುಣ್ಯ ಭೂಮಿಯನ್ನು ಅವರ ಕರ್ಮ ಭೂಮಿ ಮಾಡಿಕೊಂಡಿದ್ದು ನಮ್ಮ ಪುಣ್ಯ. ನಿಜವಾಗಿಯೂ ಶ್ರೀಗಳು ನಡೆದಾಡುವ ದೇವರು. ಅವರ ಆಚರಣೆ, ವಿಚಾರ ಎಲ್ಲವೂ ಪರಿಶುದ್ಧವಾಗಿದೆ" ಎಂದು ಹೇಳಿದರು.
ಸರಳವಾಗಿ ಪರಿಹಾರ ಕೊಟ್ಟಿದ್ದಾರೆ
"ಶ್ರೀಗಳು ಅಪರೂಪದ ತತ್ವಜ್ಞಾನಿಯಾಗಿದ್ದಾರೆ. ಇವರು ಬದುಕಿನ ಸೂಕ್ಷ್ಮತೆಯನ್ನು ನಿಖರವಾಗಿ, ಸ್ಪಷ್ಟವಾಗಿ ತಿಳಿದುಕೊಂಡಿದ್ದಾರೆ. ಸಾಮಾನ್ಯ ಮನುಷ್ಯನ ಸಮಸ್ಯೆಗಳಿಗೆ ಸರಳವಾಗಿ ಪರಿಹಾರ ಕೊಟ್ಟವರು. ಅವರ ಮಾತುಗಳನ್ನು ಕೇಳಿ ನಾವೆಲ್ಲ ಬದಲಾಗಿದ್ದೇವೆ. ಹಲವಾರು ಬಾರಿ ಶ್ರೀಗಳು ರೈತರ ಬಗ್ಗೆ, ನೀರಾವರಿ ಬಗ್ಗೆ, ತತ್ವಗಳ ಬಗ್ಗೆ ಗಂಟೆಗಟ್ಟಲೇ ಚರ್ಚೆ ಮಾಡಿದ್ದೇವೆ. ನನ್ನನ್ನು ಅತ್ಯಂತ ಸಮಾಧಾನವಾಗಿ ಪ್ರೀತಿ ವಿಶ್ವಾಸದಿಂದ ಕಂಡಿದ್ದಾರೆ. ಅವರ ಆರೋಗ್ಯ ಕ್ಷೀಣಿಸಿದ್ದು, ಬೇಗ ಗುಣವಾಗಲಿ ಎಂದು ಪ್ರಾರ್ಥಿಸುತ್ತೇವೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶಯ ವ್ಯಕ್ತಪಡಿಸಿದರು.