Siddeshwara Swamiji : ವೈಕುಂಠ ಏಕಾದಶಿಯ ದಿನ ಲಿಂಗೈಕ್ಯರಾದ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನದ ವಿವರ
ವಿಜಯಪುರ, ಜನವರಿ 03: ಪ್ರವಚನಕಾರರು, ಲಕ್ಷಾಂತರ ಭಕ್ತ ಸಮೂಹ ಈ ಯುಗದ ನಡೆದಾಡುವ ದೇವರೆಂದೇ ಕರೆಯುತ್ತಿದ್ದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಸೋಮವಾರ ವಿಧಿವಶರಾಗಿದ್ದಾರೆ.
ಕೆಲದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಸಿದ್ದೇಶ್ವರ ಶ್ರೀಗಳು ಜ್ಞಾನಯೋಗಾಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಶ್ರೀಗಳ ಆರೋಗ್ಯ ಚೇತರಿಕೆಗಾಗಿ ಲಕ್ಷಾಂತರ ಭಕ್ತರು ಪ್ರಾರ್ಥಿಸಿದ್ದರು. ಆದರೆ ವೈಕುಂಠ ಏಕಾದಶಿಯ ಪುಣ್ಯ ದಿನದಂದು ಸಿದ್ದೇಶ್ವರ ಶ್ರೀಗಳು ಕೊನೆಯುಸಿರೆಳೆದಿದ್ದಾರೆ.
ವಿಜಯಪುರದ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಸಾವಿರಾರು ಭಕ್ತರು ತಂಡೋಪಾದಿಯಲ್ಲಿ ಆಗಮಿಸಿ ಶ್ರೀಗಳ ದರ್ಶನ ಪಡೆಯುತ್ತಿದ್ದಾರೆ. ಸೈನಿಕ ಶಾಲೆಯ ಆವರಣದಲ್ಲಿ ಬೃಹತ್ ವೇದಿಕೆ ಹಾಕಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಶ್ರೀಗಳ ಅಂತಿಮ ದರ್ಶನಕ್ಕೆ ಶ್ರೀಗಳ ಹುಟ್ಟೂರು ಬಿಜ್ಜರಗಿಯಿಂದ ವಿಜಯಪುರಕ್ಕೆ ಸಾವಿರಾರು ಜನರು ಆಗಮಿಸುತ್ತಿದ್ದು, ಬಿಜ್ಜರಗಿ ಗ್ರಾಮದಿಂದ ಹೊರಡಲು ಬಸ್, ಕ್ರೂಸರ್ಗಳ ವ್ಯವಸ್ಥೆ ಮಾಡಲಾಗಿದೆ. ಇನ್ನು ಶ್ರೀಗಳ ಅಂತಿಮ ದರ್ಶನಕ್ಕೆ ಬರುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕೂಡ ಮಾಡಲಾಗಿದೆ. ವಿಜಯಪುರ ಹೊರವಲಯದ ಆಕಾಶವಾಣಿ ಕೇಂದ್ರದ ಬಳಿ ಸಿದ್ದೇಶ್ವರ ಸಂಸ್ಥೆ ಹಾಗೂ ಬಿಎಲ್ಡಿಇ ಸಂಸ್ಥೆಯಿಂದ ಭಕ್ತರಿಗಾಗಿ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.
ಅಂತಿಮ ದರ್ಶನ ಬಳಿಕ ಮಧ್ಯಾಹ್ನ 3-4 ಗಂಟೆವರೆಗೆ ಸರ್ಕಾರಿ ಗೌರವ ಸಲ್ಲಿಸಲಾಗುತ್ತದೆ. ಸಂಜೆ 4 ಗಂಟೆಗೆ ವಾಹನದಲ್ಲಿ ಶ್ರೀಗಳ ಪಾರ್ಥಿವ ಶರೀರ ಜ್ಞಾನಯೋಗಾಶ್ರಮಕ್ಕೆ ರವಾನೆಯಾಗಲಿದ್ದು, ಮಂಗಳವಾರ ಸಂಜೆ 5 ಗಂಟೆಗೆ ಆಶ್ರಮದ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಿಸುವ ಬಗ್ಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಶ್ರೀಗಳ ಅಂತಿಮ ಕಾರ್ಯ ನೆರವೇರಿಸಲು 50ಕ್ಕೂ ಹೆಚ್ಚು ಸ್ವಾಮೀಜಿಗಳು ವಿಜಯಪುರಕ್ಕೆ ಆಗಮಿಸುತ್ತಿದ್ದಾರೆ. ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಭದ್ರತೆಗಾಗಿ ಐವರು ಎಸ್ಪಿ, 25 ಡಿವೈಎಸ್ಪಿಗಳು, 60 ಸಿಪಿಐ, 200 ಪಿಎಸ್ಐಗಳು, 1500 ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.