ಸಿಂದಗಿ ಉಪಚುನಾವಣೆ: 'ಬಿಜೆಪಿಯಿಂದ ಪ್ರತಿ ಹಳ್ಳಿಗೂ 30-40 ಲಕ್ಷ ಹಂಚಿಕೆ'
ಬೆಂಗಳೂರು, ಅ.28: ಉಪಚುನಾವಣೆಯ ಬಹಿರಂಗ ಪ್ರಚಾರ ಮುಗಿದ ಮರುದಿನವೇ ಬಿಜೆಪಿ ಕೊನೆ ಹಂತದ ಆಟ ಆಡಲು ಶುರು ಮಾಡಿದೆ. ಪ್ರತಿ ಹಳ್ಳಿಗೆ 30-40 ಲಕ್ಷ ಹಂಚಿಕೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
"ವಸತಿ ಸಚಿವ ವಿ. ಸೋಮಣ್ಣ ಹೇಳಿದಂತೆಯೇ ಆಟ ಆರಂಭಿಸಿದ್ದಾರೆ. ನಿನ್ನೆಯಿಂದ ಸಚಿವರಾದ ವಿ.ಸೋಮಣ್ಣ, ಸಿ.ಸಿ. ಪಾಟೀಲ್, ಗೋವಿಂದ ಕಾರಜೋಳ ಸೇರಿದಂತೆ ಏಳೆಂಟು ಮಂತ್ರಿಗಳು ಇವತ್ತಿಗೂ ಸಮೀಪದ ರೆಸಾರ್ಟ್ನಲ್ಲಿಯೇ ಉಳಿದುಕೊಂಡಿದ್ದಾರೆ. ಕೊನೆಯ ಹಂತದಲ್ಲಿ ಹಣ ಹಂಚುವ ಕಾರ್ಯವನ್ನು ನೋಡಿಕೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
"ಇವತ್ತು ಸಾಯಂಕಾಲದ ತನಕ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸಿಂಧಗಿಯಲ್ಲಿ ಫ್ರೀ ಆಗಿ ಬಿಟ್ಟುಬಿಟ್ಟಿದ್ದೇವೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತದೆ" ಎಂದು ಬುಧವಾರ ಸಚಿವ ಸೋಮಣ್ಣ ನೀಡಿದ್ದ ಹೇಳಿಕೆ ನೀಡಿದ್ದರು. ಅದಕ್ಕೆ ಕುಮಾರಸ್ವಾಮಿ ಅವರು "ನಾಳೆಯಿಂದ ನಮ್ಮ ಆಟ ಆರಂಭ ಎಂದರೆ ಅರ್ಥವೇನು? ಆಟ ಎಂದರೆ ದುಡ್ಡು ಹಂಚುವುದಾ?" ಎಂದು ಪ್ರಶ್ನಿಸಿದ್ದರು. "ಗುರುವಾರದಿಂದ ನಮ್ಮ ಆಟ ತೋರಿಸುತ್ತೇವೆ ಎಂದು ಸೋಮಣ್ಣ ಅವರು ನಿನ್ನೆಯೇ ಹೇಳಿದ್ದರು. ಈಗ ಅವರು ತಮ್ಮ ಕೊನೆಯ ಹಂತದ ಆಟ ತೋರಿಸಲು ಹೊರಟಿದ್ದಾರೆ" ಎಂದು ದೂರಿದ್ದಾರೆ.

ಹಳ್ಳಿ ಹಳ್ಳಿಯಲ್ಲಿ ಹಣ ಹಂಚಿಕೆ:
"ನನಗೆ ಬಂದ ಮಾಹಿತಿ ಪ್ರಕಾರ ಸಿಂದಗಿ ಕ್ಷೇತ್ರದಾದ್ಯಂತ ಬಿಜೆಪಿಯಿಂದ ಪ್ರತಿ ಹಳ್ಳಿಗೆ 30ರಿಂದ 40 ಲಕ್ಷ ರೂಪಾಯಿ ಹಂಚಿಕೆ ಆಗಿದೆ. ಖುದ್ದು ಸಚಿವರೇ ಈ ಕೃತ್ಯದಲ್ಲಿ ತೊಡಗಿರುವ ಮಾಹಿತಿ ಬಂದಿದೆ. ಅದೇ ರೀತಿ ಕಾಂಗ್ರೆಸ್ ಪಕ್ಷದಿಂದಲೂ ದೊಡ್ಡ ಪ್ರಮಾಣದಲ್ಲಿ ಹಣ ಹಂಚುವ ಕೆಲಸ ನಡೆದಿದೆ'' ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಕೆಲ ಹಳ್ಳಿಗಳಲ್ಲಿ ಐದರಿಂದ ಆರು ಮತಗಟ್ಟೆಗಳಿವೆ. ಅಂದರೆ ಪ್ರತೀ ಮತಗಟ್ಟೆಗೆ ತಲಾ 5 ಲಕ್ಷ ರೂ. ನೀಡಲಾಗುತ್ತಿದೆ ಹಾಗೂ ಒಂದು ಮತಕ್ಕೆ 1,000 ರೂ. ಫಿಕ್ಸ್ ಮಾಡಿದ್ದಾರೆ ಎಂದಾಯಿತು. ಬಿಜೆಪಿ ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಸರಕಾರ ರಚನೆ ಮಾಡಿದ ಮೇಲೆ ಎಲ್ಲ ಚುನಾವಣೆಗಳನ್ನು ಗೆದ್ದಿರುವುದು ಹಣದ ಹೊಳೆ ಹರಿಸಿಯೇ ಎಂದು ಕುಮಾರಸ್ವಾಮಿ ಅವರು ಹೇಳಿದರು.
'ಹಣದ ಚೀಲ ಹೊತ್ತು ಅಭ್ಯಾಸ ಇರುವುದು ಕಾಂಗ್ರೆಸ್ನವರಿಗೆ. ಅವರೇ ಹಣ ಹಂಚುವವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಹಿಂದೆ ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಾಗ ಸರಕಾರಿ ಅಧಿಕಾರಿಯ ಕಾರಿನಲ್ಲೇ ಹಣ ಸಿಕ್ಕಿಬಿತ್ತು. ಆ ಹಣ ಸಿಕ್ಕಿದ್ದು ಗುಂಡ್ಲುಪೇಟೆಯಲ್ಲಿ. ಆಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು. ಆಗ ಕಾಂಗ್ರೆಸ್ ಪಕ್ಷದವರು ಮಾಡಿದ ತಂತ್ರಗಾರಿಕೆಯನ್ನೇ ಈಗ ಬಿಜೆಪಿಯವರು ಅಳವಡಿಸಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ದೂರಿದ್ದಾರೆ.
"ಇಷ್ಟಾದರೂ ಕ್ಷೇತ್ರದ ಮತದಾರರು ಹಣಕ್ಕಿಂತ ಹೆಚ್ಚಾಗಿ ತಮಗೆ ಬದುಕು ತೋರಿಸಿರುವ ಜೆಡಿಎಸ್ ಪಕ್ಷದ ಬಗ್ಗೆ ಒಲವು ಹೊಂದಿದ್ದಾರೆ. ದೇವೇಗೌಡರು ಹಾಗೂ ನಾನು ನೀಡಿರುವ ಕಾರ್ಯಕ್ರಮಗಳ ಬಗ್ಗೆ ಅವರಿಗೆ ಅಭಿಮಾನ ಇದೆ. ಈವರೆಗೂ ನಾನು ಎಂಬತ್ತಕ್ಕೂ ಹೆಚ್ಚು ಹಳ್ಳಿಗಳನ್ನು ಸುತ್ತಿದ್ದೇನೆ. ಎಲ್ಲೇ ಹೋದರೂ ಜನ ನಮ್ಮ ಪಕ್ಷ ನೀಡಿರುವ ಕೊಡುಗೆಗಳ ಬಗ್ಗೆಯೇ ಮಾತನಾಡಿದ್ದರು, ರಾಷ್ಟ್ರೀಯ ಪಕ್ಷಗಳು ಒಡ್ಡುವ ಆಮಿಷಗಳಿಗೆ ಜನರು ಒಳಗಾಗಬಾರದು" ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದರು.
ಎರಡೂ ರಾಷ್ಟ್ರೀಯ ಪಕ್ಷಗಳು ಹಣ ಬಲದಿಂದ ಚುನಾವಣೆ ಗೆಲ್ಲಬೇಕು ಎಂದು ಹೊರಟಿವೆಯೇ ವಿನಾ ಅಭಿವೃದ್ಧಿಯಿಂದಲ್ಲ ಎಂದ ಅವರು, ಕ್ಷೇತ್ರದ ಜನರಿಗೆ ನಾವು ಅಭಿವೃದ್ಧಿ ವಿಷಯಗಳನ್ನಷ್ಟೇ ಹೇಳಿದ್ದೇವೆ. ಆ ಮೂಲಕ ನಾವು ಸಿಂದಗಿ ಕ್ಷೇತ್ರದಲ್ಲಿ ಜಯ ಸಾಧಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications