Breaking: ಸಿಂದಗಿ ಫಲಿತಾಂಶ: ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಗೆಲುವು
ವಿಜಯಪುರ, ನವೆಂಬರ್ 2: ತೀವ್ರ ಕುತೂಹಲ ಕೆರಳಿಸಿದ್ದ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿಯಿಂದ ರಮೇಶ್ ಭೂಸನೂರ, ಕಾಂಗ್ರೆಸ್ನಿಂದ ಅಶೋಕ್ ಮನಗೂಳಿ ಮತ್ತು ಜೆಡಿಎಸ್ನಿಂದ ನಾಜೀಯಾ ಅಂಗಡಿ ಸ್ಪರ್ಧಿಸಿದ್ದರು. ಸಿಂದಗಿ ಮತ ಎಣಿಕೆ ಕಾರ್ಯದಲ್ಲಿ ಪ್ರತಿ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಗಳಿಸಿದ್ದರು.
20ನೇ ಸುತ್ತಿನ ಮತ ಎಣಿಕೆ ಬಳಿಕ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 93,865 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 62,680 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿ ನಾಜೀಯಾ ಅಂಗಡಿ 4353 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

ಇನ್ನೂ ಮತ ಏಣಿಕೆ ಕಾರ್ಯ ನಡೆಯುತ್ತಿದ್ದು, ಚಲಾವಣೆಯಾದ ಒಟ್ಟು ಮತಗಳ ಪೈಕಿ ಅರ್ಧ ಮತಗಳನ್ನು ಪಡೆದಿರುವ ಬಿಜೆಪಿ ಅಭ್ಯರ್ಥಿ ಗೆಲುವಿನ ಮಾಲೆ ಧರಿಸಿದ್ದಾರೆ. ಆದರೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಮತ ಎಣಿಕೆ ಆರಂಭವಾದಾಗಿನಿಂದಲೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ ಕಾಂಗ್ರೆಸ್ ಅಭ್ಯರ್ಥಿ ಯಾವ ಸುತ್ತಿನಲ್ಲೂ ಪೈಪೋಟಿ ನೀಡಲು ವಿಫಲವಾದರು. ಜೆಡಿಎಸ್ ಹಾಲಿ ಕ್ಷೇತ್ರವನ್ನು ಕೈಚೆಲ್ಲಿರುವುದು ಪಕ್ಷದ ಹಿನ್ನಡೆಗೆ ಸಾಕ್ಷಿಯಾಗಿದೆ.
ಜೆಡಿಎಸ್ ಶಾಸಕರಾಗಿದ್ದ ಎಂ.ಸಿ. ಮನಗೂಳಿ ನಿಧನದ ಬಳಿಕ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಆ ನಂತರ ಮೂರು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿನ ಕ್ಷೇತ್ರವಾಗಿ ಮಾರ್ಪಟ್ಟಿತ್ತು. ಪ್ರಚಾರದ ವೇಳೆ ರಾಜಕೀಯ ನಾಯಕರ ವೈಯಕ್ತಿಕ ಟೀಕೆಗಳಿಗೆ ಸಾಕ್ಷಿಯಾಗಿತ್ತು.
36 ವರ್ಷದ ರಮೇಶ್ ಭೂಸನೂರ ಪರ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ, ಜೈಕಾರ ಹಾಕುತ್ತಿದ್ದಾರೆ. ಚುನಾವಣೆಗೂ ಮುನ್ನ ತೀವ್ರ ಪೈಪೋಟಿ ನೀಡಿದ್ದ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಠೇವಣಿಯನ್ನು ಕಳೆದುಕೊಂಡು, ಸೋಲನ್ನಪ್ಪಿದ್ದಾರೆ.
Recommended Video
ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ಫಲಿತಾಂಶದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ ಭಾರೀ ಅಂತರದಲ್ಲಿ ಗೆದ್ದಿದ್ದಾರೆ. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪ ಚುನಾವಣೆ ನಡೆದಿತ್ತು.












Click it and Unblock the Notifications