ವಿಜಯಪುರದಲ್ಲಿ 45.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು
ವಿಜಯಪುರ, ಮೇ 26: ಗುಮ್ಮಟಗಳ ಜಿಲ್ಲೆ ವಿಜಯಪುರದ ಜನರಿಗೆ ಒಂದು ಕಡೆ ಕೊರೊನಾ ವೈರಸ್ ಸೋಂಕಿನ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ಬಿರು ಬಿಸಿಲಿನಿಂದ ಅಧಿಕ ತಾಪಮಾನ ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ವಿಜಯಪುರ ಜಿಲ್ಲೆಯ ಇತಿಹಾಸದಲ್ಲಿಯೇ ಅತಿ ಹೆಚ್ಚು ತಾಪಮಾನ ದಾಖಲಾಗಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ತಾಪಮಾನ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ದಾಖಲಾಗಿದೆ.
ರಾಮನಗರದಲ್ಲಿ ಗುಡುಗು ಸಹಿತ ಮಳೆ; ಬಾಳೆ, ರೇಷ್ಮೆ ನಾಶ
ವಿಜಯಪುರ ಜಿಲ್ಲೆಯಲ್ಲಿ ಗರಿಷ್ಠ 45.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಈ ತಾಪಮಾನ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ವರದಿಯಲ್ಲಿ ಬಹಿರಂಗಪಡಿಸಿದೆ. ಒಟ್ಟಿನಲ್ಲಿ ಈ ಭಯಾನಕ ಬಿಸಿಲು ರಾಜಸ್ತಾನದ ಮರುಭೂಮಿ ಯನ್ನು ನೆನಪಿಸುತ್ತಿದೆ.
ಜಿಲ್ಲೆಯಲ್ಲಿ ಅಧಿಕ ತಾಪಮಾನ ಇರುವುದರಿಂದ ಜನರು ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ. ಇನ್ನೊಂದು ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಆಗ ತಾಪಮಾನ ಕಡಿಮೆಯಾಗಲಿದೆಯೇ ಎಂದು ಕಾದು ನೋಡಬೇಕು.