Vijayapura Airport: 2024ರ ಏಪ್ರಿಲ್ಗೆ ಏರ್ಪೋರ್ಟ್ ಉದ್ಘಾಟನೆ, ನೈಟ್ ಲ್ಯಾಂಡಿಂಗ್ ವ್ಯವಸ್ಥೆ
ವಿಜಯಪುರ, ಜುಲೈ 30: ರಾಜ್ಯದ ಬಹುನಿರೀಕ್ಷೆಯ ವಿಜಯಪುರ ವಿಮಾನ ನಿಲ್ದಾಣವು ನಿರ್ಮಾಣ ಹಂತದಲ್ಲಿದ್ದು, ಕಾಮಗಾರಿ ಭರದಿಂದ ಸಾಗಿದೆ. 2024ರ ಏಪ್ರಿಲ್ ವೇಳೆಗೆ ಉದ್ಘಾಟನೆಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದರು.
ಸಚಿವರು ಇತ್ತೀಚೆಗೆ ವಿಮಾನ ನಿಲ್ದಾಣ ಕಾಮಗಾರಿಯನ್ನು ಸಮಗ್ರವಾಗಿ ಪರಿಶೀಲಿಸಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾಹಿತಿ ನೀಡಿದ ಅವರು, 727 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತುತ್ತಿರುವ ವಿಮಾನ ನಿಲ್ದಾಣದ ಸಿವಿಲ್ ಕಾಮಗಾರಿಗಳು ಈ ವರ್ಷದ ಡಿಸೆಂಬರ್ ಹೊತ್ತಿಗೆ ಮುಗಿಯಲಿವೆ. ಅದರ ನಂತರ ಇತರ ತಾಂತ್ರಿಕ ಕೆಲಸಗಳು ನಡೆದು ಏಪ್ರಿಲ್ ವೇಳೆಗೆ ಎಲ್ಲವೂ ಮುಗಿಯುವ ವಿಶ್ವಾಸ ಇದೆ ಎಂದು ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರ, ಇಲ್ಲಿ ಬೆಳಗಿನ ಹೊತ್ತು ಮಾತ್ರ ವಿಮಾನ ಸಂಚಾರಕ್ಕೆ ಅವಕಾಶ ಕಲ್ಪಿಸಿತ್ತು. ಆದರೆ ನಾನು ಸಚಿವನಾದ ನಂತರ ರಾತ್ರಿ ಹೊತ್ತು ಕೂಡ ವಿಮಾನ ಬಂದಿಳಿಯುವ ಹಾಗೆ ಸೌಲಭ್ಯಗಳಿರಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಇನ್ನೂ ಏರ್ ಬಸ್ ಮಾದರಿಯ ದೊಡ್ಡ ವಿಮಾನಗಳು ಕೂಡ ಇಲ್ಲಿಗೆ ಬಂದಿಳಿಯಲು ಅನುಕೂಲವಾಗುವ ಹಾಗೆ ಯೋಜನೆಯಲ್ಲಿ ಮಾರ್ಪಾಡು ಮಾಡಲಾಗಿದೆ.
ಕಾಮಗಾರಿಗಳು ತಾಂತ್ರಿಕ ಕಾರಣಗಳಿಂದ ನಿಲ್ಲಬಾರದೆಂಬ ಉದ್ದೇಶದಿಂದ ಎರಡು ದಿನಗಳ ಹಿಂದೆ ಈ ಯೋಜನೆಗೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಇಲ್ಲಿ ಶೌಚಾಲಯ, ಕ್ಯಾಂಟೀನ್ ಸೇರಿದಂತೆ ಪ್ರತಿಯೊಂದು ಸೌಲಭ್ಯವೂ ದೊಡ್ಡ ವಿಮಾನ ನಿಲ್ದಾಣದಲ್ಲಿ ಇರುವಂತೆಯೇ ಸ್ಥಾಪಿಸಲಾಗುತ್ತಿದೆ. ಜತೆಗೆ ಏರ್ಬಸ್ ಮಾದರಿಯ ವಿಮಾನಗಳು ಬಂದಿಳಿಯಲು ಅಗತ್ಯವಿರುವ ಭೂಸ್ವಾಧೀನ ಕೂಡ ನಡೆಯಲಿದ್ದು, ಈ ಸಂಬಂಧ ಈಗಾಗಲೇ ನಿರ್ದೇಶನ ನೀಡಿದ್ದೇವೆ ಎಂದರು.
ನೈಟ್ ಲ್ಯಾಂಡಿಂಗ್ ಗೆ ವ್ಯವಸ್ಥೆ
ಡಿಜಿಸಿಎ ಮಾನದಂಡಗಳ ಪ್ರಕಾರ ಇಲ್ಲಿನ ವಿಮಾನ ನಿಲ್ದಾಣಕ್ಕೆ ಎರಡು ವಿಮಾನ ರಕ್ಷಣಾ ಅಗ್ನಿಶಾಮಕ ವಾಹನಗಳು ಅಗತ್ಯವಿವೆ. ರಾತ್ರಿ ವೇಳೆ ವಿಮಾನಗಳು ಲ್ಯಾಂಡ್ ಆಗುವ ಸೌಲಭ್ಯ ಕಲ್ಪಿಸಲು ಬೇಕಾಗುವ ಉಪಕರಣಗಳ ಸಂಗ್ರಹಣೆಗೆ ಕೂಡ ಸ್ಪಷ್ಟ ನಿರ್ದೇಶನ ನೀಡಿದ್ದೇವೆ. ಇದರ ಜತೆಗೆ ಹವಾಮಾನ ಕುರಿತ ಮಾಹಿತಿ ನೀಡುವ ಉಪಕರಣ ಅಳವಡಿಸುವುದು ಬಾಕಿ ಇದೆ. ಈ ಎಲ್ಲದಕ್ಕೂ ಅಂದಾಜು 50ಕೋಟಿ ರೂ, ಬೇಕಾಗಬಹುದುಗುತ್ತದೆ. ಹೀಗಾಗಿ ವಿಮಾನ ನಿಲ್ದಾಣದ ಅಂದಾಜು ವೆಚ್ಚ 400 ಕೋಟಿ ರೂ. ಆಗುವ ಸಾಧ್ಯತೆ ಇದೆ ಎಂದು ವಿವರಿಸಿದರು.

ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ 300 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ. ಪರಿಸರ ಇಲಾಖೆಯ ಅನುಮತಿಗಾಗಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಕಾಮಗಾರಿಗಳು ಮುಕ್ತಾಯದ ಹಂತಕ್ಕೆ ಬಂದಿರುವುದರಿಂದ ಈ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆ.
ಕೇಂದ್ರದ ತಂಡ ಆಗಸ್ಟ್ಗೆ ಭೇಟಿ
ಕೇಂದ್ರ ಸರಕಾರದ ಮಲ್ಟಿ ಡಿಸಿಪ್ಲಿನರಿ ತಂಡದಿಂದ ವಿಮಾನ ನಿಲ್ದಾಣ ಕಾಮಗಾರಿಯ ಪರಿಶೀಲನೆ ನಡೆಸುವಂತೆ ಕೋರಲಾಗಿದೆ. ಈ ತಂಡವು ಆಗಸ್ಟ್ ತಿಂಗಳಲ್ಲಿ ವಿಜಯಪುರಕ್ಕೆ ಭೇಟಿ ನೀಡಬಹುದು ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ವಿಮಾನ ನಿಲ್ದಾಣದ ಕಾಮಗಾರಿಗಳು ಒಟ್ಟು ಮೂರು ಪ್ಯಾಕೇಜ್ಗಳಲ್ಲಿ ನಡೆಯುತ್ತಿವೆ. ಪ್ಯಾಕೇಜ್-1ರಲ್ಲಿ 222.92 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಪೆರಿಫೆರಲ್ ರಸ್ತೆ, ಏಪ್ರಾನ್, ಟ್ಯಾಕ್ಸಿವೇ, ಅಪ್ರೋಚ್ ರಸ್ತೆಗಳ ಕೆಲಸ ನಡೆಯುತ್ತಿದೆ.
ಪ್ಯಾಕೇಜ್-2ರಲ್ಲಿ 86.20 ಕೋಟಿ ರೂ. ವೆಚ್ಚದಲ್ಲಿ ಪ್ಯಾಸೆಂಜರ್ ಟರ್ಮಿನಲ್, ಎಟಿಸಿ ಕಟ್ಟಡ, ವಿದ್ಯುತ್ ಉಪಕೇಂದ್ರ, ಕಾಂಪೌಂಡ್, ವೀಕ್ಷಣಾ ಗೋಪುರ, ಅಂಡರ್ಗ್ರೌಂಡ್ ಟ್ಯಾಂಕ್ ಕಾಮಗಾರಿ ಪ್ರಗತಿಯಲ್ಲಿದೆ. ಪ್ಯಾಕೇಜ್-3ರಲ್ಲಿ 19.30 ಕೋಟಿ ರೂ. ವಿನಿಯೋಗಿಸಿ ಎಲೆಕ್ಟ್ರೋ-ಮೆಕ್ಯಾನಿಕಲ್ ಸಾಧನಗಳ ಕೆಲಸ ಚಾಲ್ತಿಯಲ್ಲಿದೆ. ಮಿಕ್ಕಂತೆ ವಿದ್ಯುತ್ ಪೂರೈಕೆ, ಸರ್ವೇ ಇತ್ಯಾದಿ ಕೆಲಸಗಳಿಗಾಗಿ 19.41 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದರು.
ರಾಜ್ಯದ ಏರ್ಪೋರ್ಟ್ ಗೆ ಕೇಂದ್ರ ಹಣ ನೀಡಿಲ್ಲ
ಕಲ್ಯಾಣ ಕರ್ನಾಟಕದ ಕಲಬುರಗಿ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಹಲವು ವಿಮಾನ ನಿಲ್ದಾಣಗಳ ಕಾಮಗಾರಿಗಳಿಗೆ ಕೇಂದ್ರ ಸರ್ಕಾರ ಹಣ ಕೊಟ್ಟಿಲ್ಲ. ಕಲಬುರಗಿ ಮಾತ್ರವಲ್ಲದೆ, ಶಿವಮೊಗ್ಗ, ವಿಜಯಪುರ ಮತ್ತು ಹಾಸನ ವಿಮಾನ ನಿಲ್ದಾಣ ಸಹ ಹಣ ಕೊಟ್ಟಿಲ್ಲ. ಎಲ್ಲದಕ್ಕೂ ರಾಜ್ಯ ಸರ್ಕಾರವೇ ಹಣ. ಹೀಗಾಗಿ ನಾವು ಹಣ ಹಾಕಿ ಭಾರತೀಯ ವಿಮಾನ ಪ್ರಾಧಿಕಾರಕ್ಕೆ ವಹಿಸುವುದರಲ್ಲಿ ಅರ್ಥ ಇಲ್ಲ ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರದಿಂದಲೇ ಏಕೆ ಇವುಗಳ ನಿರ್ವಹಣೆ ಮಾಡಬಾರದು ಎನ್ನುವ ಚಿಂತನೆ ನಡೆದಿದೆ ಎಂದು ವಿವರಿಸಿದರು.
ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದ ನಂತರ ಈ ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ದ್ರಾಕ್ಷಿ ಸೇರಿದಂತೆ ಇತರ ಕೃಷಿ ಉತ್ಪನ್ನಗಳ ರಫ್ತಿಗೂ ಅನುಕೂಲ ಆಗುವ ವಿಶ್ವಾಸ ಇದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರ ಜತೆ ಮಾತುಕತೆ ನಡೆಸಿದರು. ನಮ್ಮ ರೈತರಿಗೆ ಅನುಕೂಲ ಮಾಡಲಾಗುವುದು.
ಪ್ರವಾಸೋದ್ಯಮ ಕ್ಷೇತ್ರದಲ್ಲೂ ಜಿಲ್ಲೆ ಹಿಂದುಳಿದಿದೆ. ಹೀಗಾಗಿ ವಿಮಾನ ನಿಲ್ದಾಣ ಆದ ಮೇಲೆ ಪ್ರವಾಸಿಗರನ್ನು ಆಕರ್ಷಿಸಲು ವಿಶೇಷ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.
ನಾಗಠಾಣ ಶಾಸಕರಾದ ವಿಠಲ ಕಟಕದೊಂಡ, ಕೆಎಸ್ ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಆರ್ ರವಿ, ಜಿಲ್ಲಾಧಿಕಾರಿಗಳಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಚ್.ಡಿ. ಆನಂದ ಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications