ರಾಹುಲ್ ವಿರುದ್ಧ ನಳಿನ್ ಅವಹೇಳನಕಾರಿ ಹೇಳಿಕೆಗೆ ಬಿಎಸ್ವೈ ಆಕ್ಷೇಪ
ಸಿಂದಗಿ, ಅಕ್ಟೋಬರ್ 20: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದು ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ ನೀಡಿರುವುದಕ್ಕೆ ಕರ್ನಾಟಕ ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. "ರಾಹುಲ್ ಗಾಂಧಿಯ ವಿರುದ್ಧ ಇಂತಹ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಬೇಡಿ," ಎಂದು ಹೇಳಿದ್ದಾರೆ.
ಮಂಗಳವಾರ ಹುಬ್ಬಳ್ಳಿಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, "ರಾಹುಲ್ ಗಾಂಧಿ ಡ್ರಗ್ ಪೆಡ್ಲರ್," ಎಂದು ಹೇಳಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ಈಗಾಗಲೇ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈಗ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಖಂಡಿಸಿದ್ದಾರೆ.
ರಾಹುಲ್ ಗಾಂಧಿ ಡ್ರಗ್ ಪೆಡ್ಲರ್; ಕಟೀಲ್ ವಿವಾದಾತ್ಮಕ ಹೇಳಿಕೆ
ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, "ರಾಹುಲ್ ಗಾಂಧಿಯಂತಹ, ನಮ್ಮ ಪಕ್ಷವು ಗೌರವ ನೀಡುವ ವ್ಯಕ್ತಿಗಳ ಬಗ್ಗೆ ಹೀಗೆ ಅವಹೇಳನಕಾರಿಯಾಗಿ ಯಾರೂ ಕೂಡಾ ಮಾತನಾಡಬಾರದು. ಈ ಹೇಳಿಕೆಯ ಹಿಂದೆ ಏನಿದೆ ಎಂಬ ಬಗ್ಗೆ ನಾನು ಕಟೀಲ್ ಜೊತೆ ಮಾತನಾಡುತ್ತೇನೆ. ಈ ರೀತಿಯಾಗಿ ಮಾತನಾಡುವುದು ಸರಿಯಲ್ಲ," ಎಂದು ಅಭಿಪ್ರಾಯಿಸಿದ್ದಾರೆ.
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್ಎಸ್ಎಸ್) ಟೀಕಿಸಿದ್ದರ ವಿರುದ್ದವಾಗಿ ಹಾಗೂ ಕರ್ನಾಟಕ ಕಾಂಗ್ರೆಸ್ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಹೆಬ್ಬೆಟ್ಟುಗಿರಾಕಿ ಮೋದಿ ಎಂದು ಟ್ವೀಟ್ನಲ್ಲಿ ಉಲ್ಲೇಖ ಮಾಡಿದ್ದರ ವಿರುದ್ಧವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡುತ್ತಾ "ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತಾ ವರದಿಗಳು ಹೇಳಿವೆ," ಎಂದಿದ್ದಾರೆ.
ನಳಿನ್ ಕುಮಾರ್ ಕಟೀಲ್ರ ಈ ಹೇಳಿಕೆಗೆ ರಾಜಕೀಯ ವಲಯದಲ್ಲಿ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಈ ಹೇಳಿಕೆಯನ್ನು ಖಂಡಿಸಿದ್ದಾರೆ. "ನಿನ್ನೆ ನಾನು ಮಾತನಾಡುವಾಗ "ರಾಜಕೀಯ ವಿರೋಧಿಗಳೊಡನೆ ನಾಗರಿಕ ಮೌಲ್ಯದ ಜೊತೆಗೆ ಗೌರವಯುತವಾಗಿ ನಡೆದುಕೊಳ್ಳೋದ್ರಲ್ಲಿ ನಂಬಿಕೆಯಿದೆ" ಎಂದಿದ್ದೆ. ಬಿಜೆಪಿ ಇದನ್ನು ಒಪ್ಪುತ್ತದೆಂದು ಭಾವಿಸಿದ್ದೆ ಆದರೆ, ಬಿಜೆಪಿ ರಾಜ್ಯಾಧ್ಯಕ್ಷರು ಶ್ರೀ ರಾಹುಲ್ ಗಾಂಧಿಯವರನ್ನು ಅಸಂಸದೀಯ ಪದಗಳಿಂದ ನಿಂದಿಸಿದ್ದು, ಕ್ಷಮೆ ಯಾಚಿಸುತ್ತಾರೆಂದು ಭಾವಿಸುತ್ತೇನೆ," ಎಂದು ಮಂಗಳವಾರ ಟ್ವೀಟ್ ಮಾಡಿದ್ದಾರೆ.
ಅ.20ರಂದು ಸಿಂದಗಿ ಉಪ ಚುನಾವಣಾ ಪ್ರಚಾರದಲ್ಲಿ ಘಟಾನುಘಟಿ ನಾಯಕರು ಭಾಗಿ
ಇನ್ನು ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಹೆಚ್ ಡಿ ಕುಮಾರಸ್ವಾಮಿ ಕೂಡಾ ಈ ಹೇಳಿಕೆಯನ್ನು ಖಂಡಿಸಿದ್ದಾರೆ. "ನಮ್ಮ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ನಳಿನ್ ಕುಮಾರ್ ಕಟೀಲ್ ಆಡಿದ ಮಾತುಗಳು ಅವರ ಅಸ್ವಸ್ಥ ಮನಸ್ಸಿನ ಪ್ರತೀಕ. ಈ ಹುಚ್ಚು ಸಾಂಕ್ರಾಮಿಕವಾಗುವ ಮೊದಲು ಅವರನ್ನು ಶೀಘ್ರ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಬೇಕೆಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಲ್ಲಿ ಕೇಳಿಕೊಳ್ಳುತ್ತೇನೆ," ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
"ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತಾ ವರದಿಗಳು ಹೇಳಿವೆ" ಎಂಬ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ನಾನು ಯಾವಾಗಲೂ ಇಂತಹ ಕೀಳು ಮಟ್ಟಕ್ಕೆ ಇಳಿಯಲ್ಲ. ಯಾರೂ ಅಂತಹ ಹೇಳಿಕೆಗಳನ್ನು ನೀಡಬಾರದು. ಯಾರೇ ಆಗಲಿ ಯಾರದ್ದೇ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಬಾರದು" ಎಂದರು.
ಇನ್ನು ನಳಿನ್ ಕುಮಾರ್ ಕಟೀಲ್ ಈ ಹೇಳಿಕೆ ಮಾತ್ರವಲ್ಲದೇ, ಕಾಂಗ್ರೆಸ್ ಪಕ್ಷದ ವಿರುದ್ಧವು ಟೀಕೆ ಮಾಡಿದ್ದಾರೆ. "ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಹೇಳಿ?. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಗೆ ಪೈಪೋಟಿ ನಡೆಸುತ್ತಿದ್ದಾರೆ. ಅವರಿಗೆ ಪಕ್ಷವನ್ನು ಸಂಭಾಳಿಸಲು ಆಗುತ್ತಿಲ್ಲ. ಇನ್ನು ದೇಶವನ್ನುಮುನ್ನಡೆಸುತ್ತಾರಾ?" ಎಂದು ಪ್ರಶ್ನಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)