ನ್ಯೂಜೆರ್ಸಿಯ ಸಾಂಸ್ಕೃತಿಕ ಕೇಂದ್ರದ ಬಗ್ಗೆ ಕುಮಾರಸ್ವಾಮಿ ಮೆಚ್ಚುಗೆ
ನ್ಯೂಜೆರ್ಸಿ, ಜೂನ್ 30 : ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೂನ್ 29 ರಂದು ನ್ಯೂಜೆರ್ಸಿಯ ಸೋಮರ್ಸೆಟ್ ಎಂಬಲ್ಲಿ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ನಿರ್ಮಿಸುತ್ತಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಭೂಮಿ ಪೂಜೆಗೆ ಸಂಬಂಧಿಸಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು.
ಬಳಿಕ ಮಾತನಾಡಿದ ಕುಮಾರಸ್ವಾಮಿ ಅವರು, 'ಆದಿಚುಂಚನಗಿರಿ ಮಹಾಸಂಸ್ಥಾನವು ಅಮೆರಿಕಾದ ನ್ಯೂ ಜೆರ್ಸಿಯಲ್ಲಿ ನಿರ್ಮಿಸುತ್ತಿರುವ ಈ ದೇವಾಲಯವು ಭಾರತೀಯರ, ಅದರಲ್ಲೂ ಕನ್ನಡಿಗರಿಗೆ ಪ್ರಮುಖ ಸಾಂಸ್ಕೃತಿ ಕೇಂದ್ರವಾಗಿ ರೂಪುಗೊಳ್ಳಲಿದೆ' ಎಂದು ಹೇಳಿದರು.
'ಹೊರನಾಡ ಕನ್ನಡಿಗರು ತಮ್ಮ ಬೇರನ್ನು ಬಲಪಡಿಸಲು, ಸಂಸ್ಕೃತಿಯೊಂದಿಗೆ ಬೆಸೆದುಕೊಳ್ಳಲು ಇಂತಹ ಸಾಂಸ್ಕೃತಿಕ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ, ಇಲ್ಲಿ ನೆಲೆಸಿರುವ ಕನ್ನಡಿಗರು ಈ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ಮನಃಪೂರ್ವಕವಾಗಿ ಕೈಜೋಡಿಸಬೇಕು' ಎಂದು ಕರೆ ನೀಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಸ್ಥಳೀಯ ಕನ್ನಡಿಗರ ಸಂಘಟನೆಗಳ ಪದಾಧಿಕಾರಿಗಳು ಸಹ ಪಾಲ್ಗೊಂಡಿದ್ದರು.

ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜೂನ್ 30 ರಂದು ದೇವಾಲಯ ನಿರ್ಮಾಣದ ಶಿಲಾನ್ಯಾಸ ಸಮಾರಂಭ ನಡೆಯಲಿದೆ.












Click it and Unblock the Notifications