ಯಾದಗಿರಿ; 9ನೇ ತರಗತಿ ವಿದ್ಯಾರ್ಥಿನಿ ಜಿ.ಪಂಚಾಯಿತಿ ಸಿಇಒ
ಯಾದಗಿರಿ, ಜನವರಿ 29: ಗ್ರಾಮೀಣ ಪ್ರದೇಶದ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಕೆಲವು ಗಂಟೆಗಳ ಕಾಲ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯ ನಿರ್ವಹಣೆ ಮಾಡಿದರು.
ಗುರುವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಕಂದಕೂರ ಗ್ರಾಮದ ವಿದ್ಯಾರ್ಥಿನಿ ಪ್ರಗತಿ ಅಥಿತಿಯಾಗಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದರು.
ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲು ಸ್ಪೂರ್ತಿ ತುಂಬಲು ಯಾದಗಿರಿ ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ ತಮ್ಮ ಹುದ್ದೆಯನ್ನು ಕೆಲವು ಕಾಲ ಪ್ರಗತಿಗೆ ಬಿಟ್ಟುಕೊಟ್ಟಿದ್ದರು. ಬಳಿಕ ಶಾಲಾ ಬಾಲಕಿಯರಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂವಹನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಐಎಎಸ್ ಅಧಿಕಾರಿ ಶಿಲ್ಪಾ ಶರ್ಮಾ ಅವರು ಆಗಮಿಸಿದ್ದ ವಿದ್ಯಾರ್ಥಿಗಳಿಗೆ ತಮ್ಮ ಹುದ್ದೆಯ ಕಾರ್ಯ ನಿರ್ವಹಣೆ ಬಗ್ಗೆ ವಿವರಣೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಬಸನಗೌಡ ಯಡಿಯಾಪೂರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆಯನ್ನು ಸಹ ನಡೆಸಲಾಯಿತು.
ಕೆಲವು ಕಾಲ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಪ್ರಗತಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪೋಷಕರು ಆದ್ಯತೆ ನೀಡಬೇಕು ಎಂದು ಭಾಷಣ ಮಾಡಿದರು. ಪ್ರಗತಿಯ ಅನೇಕ ಸ್ನೇಹಿತೆಯರು ಸಹ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡಿದ್ದರು.

"ಗುರುಗಳ ಸಹಾಯದಿಂದ ನಿಮ್ಮ ಗುರಿಗಳನ್ನು ಸಾಧಿಸಿ ದೊಡ್ಡ ಮಟ್ಟದ ಅಧಿಕಾರಿಗಳಾಬೇಕೆಂದು" ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪೂರ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯತಿ ಸಿಇಒ ಶಿಲ್ಪಾ ಶರ್ಮಾ ಮಾತನಾಡಿ, "ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಸಮಾಜದಲ್ಲಿ ಹೆಣ್ಣಿನ ಅಸಮಾನತೆ ಹೋಗಲಾಡಿಸಲು ಜನವರಿ 24, 2015ರಿಂದ ಆಚರಿಸುತ್ತಾ ಬರಲಾಗುತ್ತಿದೆ" ಎಂದರು.












Click it and Unblock the Notifications