ಚಂಡರಕಿ ಗ್ರಾಮದಲ್ಲಿ ಶುಕ್ರವಾರ ಎಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ
ಯಾದಗಿರಿ, ಜೂನ್ 20 : ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯಕ್ಕೆ ಚಂಡರಕಿ ಗ್ರಾಮದಲ್ಲಿ ಸಕಲ ಸಿದ್ಧತೆ ನಡೆದಿದೆ. 10 ರಿಂದ 15 ಸಾವಿರ ಜನರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸುವ ನಿರೀಕ್ಷೆ ಇದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಬೆಳಗ್ಗೆ ಆಗಮಿಸಲಿದ್ದು, ಸಂಜೆ ಅಲ್ಲಿಯೇ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಮೂಲಕ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲಿದ್ದಾರೆ.
ಗುರುವಾರ ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಎಚ್.ಡಿ.ಕುಮಾರಸ್ವಾಮಿ ಪ್ರಯಾಣ ಆರಂಭಿಸಲಿದ್ದಾರೆ. ಶುಕ್ರವಾರ ಬೆಳಗ್ಗೆ 3.40ಕ್ಕೆ ಅವರು ಯಾದಗಿರಿಗೆ ಆಗಮಿಸಲಿದ್ದಾರೆ. ಯಾದಗಿರಿಯಿಂದ ರಸ್ತೆ ಮೂಲಕ 7.30ಕ್ಕೆ ಚಂಡರಕಿ ಗ್ರಾಮಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ತನಕ ಗ್ರಾಮದಲ್ಲಿ ಜನರ ಅಹವಾಲುಗಳನ್ನು ಸ್ವೀಕಾರ ಮಾಡಲಿದ್ದಾರೆ. ಬಳಿಕ ರೈತರು, ಶಾಲಾ ಮಕ್ಕಳು ನಡೆಸಿಕೊಡುವ ಸಾಂಸ್ಕೃತಿ ಕಾರ್ಯಕ್ರಮ ವೀಕ್ಷಿಸಲಿದ್ದಾರೆ. ಮಕ್ಕಳೊಂದಿಗೆ ಭೋಜನ ಸವಿದು ಶುಕ್ರವಾರ ರಾತ್ರಿ ಚಂಡರಕಿ ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ ಅವರು ಗುರುವಾರ ಚಂಡರಕಿ ಗ್ರಾಮದಲ್ಲಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. 'ಗ್ರಾಮ ವಾಸ್ತವ್ಯಕ್ಕೆ ಸುಮಾರು 10 ರಿಂದ 15 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ' ಎಂದರು.
'ಹಿಂದುಳಿದ ಜಿಲ್ಲೆಗೆ ಮುಖ್ಯಮಂತ್ರಿಗಳೇ ಬಂದು ಜನರ ಅಹವಾಲು ಆಲಿಸುತ್ತಿರುವುದು ಸಾಮಾನ್ಯ ವಿಷಯವಲ್ಲ. ಯಾವುದೇ ಆಡಂಬರಕ್ಕೆ ಒತ್ತು ಕೊಡದೆ ಸರಳವಾಗಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ' ಎಂದು ಸಚಿವರು ಹೇಳಿದರು.
'2006ರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡಿದ್ದರು. ಅದು ಜನರಿಗೆ ಹತ್ತಿರವಾಗಿ ನೇರವಾಗಿ ಜನರೊಟ್ಟಿಗೆ ಸೇರುವ ಕಾರ್ಯಕ್ರಮವಾಗಿತ್ತು. ಅದರಂತೆ ಯಾದಗಿರಿ ಜಿಲ್ಲೆಯಿಂದ ಗ್ರಾಮ ವಾಸ್ತವ್ಯ ಆರಂಭಿಸುತ್ತಿದ್ದಾರೆ. ಇದು ಒಳ್ಳೆಯ ಕಾರ್ಯಕ್ರಮ' ಎಂದು ತಿಳಿಸಿದರು.












Click it and Unblock the Notifications