Baburao Chinchansur: "ನಾನಿನ್ನೂ ಬದುಕಿದ್ದೇನೆ ಮತ ನೀಡಿ" : ಆಸ್ಪತ್ರೆಯಿಂದಲೇ ಮನವಿ ಮಾಡಿದ ಬಾಬುರಾವ್ ಚಿಂಚನಸೂರ್
ನಾನಿನ್ನೂ ಬದುಕಿದ್ದೇನೆ ದಯವಿಟ್ಟು ನನಗೆ ಮತ ನೀಡಿ ಎಂದು ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಆಸ್ಪತ್ರೆಯಿಂದಲೇ ಮತದಾರರಿಗೆ ಮನವಿ ಮಾಡಿದ್ದಾರೆ. ಏಪ್ರಿಲ್ 15ರಂದು ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಚಿಂಚನಸೂರ್ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರು ಕಲಬುರಗಿಯ ಯುನೈಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಲ್ಲಿ ಬಾಬುರಾವ್ ಚಿಂಚನಸೂರ್ ಎದುರಾಳಿಗಳಾಗಿರುವ ಬಿಜೆಪಿ ಅಭ್ಯರ್ಥಿ ಲಲಿತಾ ಅನಪೂರ ಮತ್ತು ಕಾಡಾ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಗಿರೀಶ್ ಮಟ್ಟಣ್ಣನವರ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಜೆಡಿಎಸ್ ಅಭ್ಯರ್ಥಿ ನಾಗನಗೌಡ ಕಂದಕೂರು ಕೂಡ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.

2018ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಬಾಬುರಾವ್ ಚಿಂಚನಸೂರ್, 2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೋಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. ಬಾಬುರಾವ್ ಚಿಂಚನಸೂರ್ ವಿಧಾನ ಪರಿಷತ್ ಸದಸ್ಯರಾಗಿ ಒಂದೂವರೆ ವರ್ಷಗಳ ಕಾಲ ಅಧಿಕಾರ ಬಾಕಿ ಇದ್ದರು, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರಿದ್ದರು.
ಬಾಬುರಾವ್ ಚಿಂಚನಸೂರ್ ಪರವಾಗಿ ನಾಮಪತ್ರ ಸಲ್ಲಿಕೆ
ಮರಳಿ ಪಕ್ಷಕ್ಕೆ ಬಂದ ಪ್ರಭಾವಿ ನಾಯಕನಿಗೆ ಕಾಂಗ್ರೆಸ್ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಿದೆ. ಚಿಂಚನಸೂರ್ ಆಸ್ಪತ್ರೆಯಲ್ಲಿರುವ ಕಾರಣ, ಮಲ್ಲಿಕಾರ್ಜುನ್ ಖರ್ಗೆ ಆದೇಶದ ಮೇರೆಗೆ ಬಾಬುರಾವ್ ಚಿಂಚನಸೂರ್ ಪರವಾಗಿ ಬೆಂಬಲಿಗರು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಬಾಬುರಾವ್ ಚಿಂಚನಸೂರ್ ಆಸ್ಪತ್ರೆಯಲ್ಲಿದ್ದರು ಪಕ್ಷದ ಕಾರ್ಯಕರ್ತರು ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಚಿಂಚನಸೂರ್ ಕೂಡ ಗುಣಮುಖರಾಗಲಿದ್ದು,ಪ್ರಚಾರಕ್ಕೆ ತೆರಳಲಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಕೂಡ ಪ್ರಬಲವಾಗಿರುವುದರಿಂದ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.












Click it and Unblock the Notifications