ವಾಡಿ-ಗದಗ ರೈಲು ಯೋಜನೆ, ರೈತರ ಜಮೀನಿಗೆ 17 ಲಕ್ಷ ಪರಿಹಾರ
ಯಾದಗಿರಿ, ನವೆಂಬರ್ 29 : ವಾಡಿ-ಗದಗ ರೈಲ್ವೆ ಯೋಜನೆಗಾಗಿ ಜಮೀನು ಪಡೆದುಕೊಳ್ಳಲಾಗುತ್ತಿದೆ. ಸ್ವಾಧೀನಪಡಿಸಿಕೊಂಡ ಪ್ರತಿ ಎಕರೆ ಜಮೀನಿಗೆ 17 ಲಕ್ಷ ರೂ. ಪರಿಹಾರವನ್ನು ವಿತರಣೆ ಮಾಡಲಾಗುತ್ತದೆ.
ಭೂ ಬೆಲೆ ನಿರ್ಧರಣಾ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಈ ಕುರಿತು ಮಾಹಿತಿ ನೀಡಿದರು. "ರೈಲ್ವೆ ಯೋಜನೆಗಾಗಿ ಜಿಲ್ಲೆಯ ಸುರಪುರ ತಾಲೂಕಿನ ಖಾನಾಪುರ ಎಸ್.ಎಚ್. ಗ್ರಾಮದಲ್ಲಿ ರೈತರಿಂದ ಒಟ್ಟು 41 ಎಕರೆ 22 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದು, ಎಕರೆಗೆ 14 ಲಕ್ಷ ರೂ. ಪರಿಹಾರ ವಿತರಿಸಲಾಗುವುದು" ಎಂದರು.
ವಾಡಿ- ಗದಗ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿಗೆ ಸ್ವಾಧೀನಪಡಿಸಿಕೊಂಡ ಜಮೀನು ಮಾಲೀಕರೊಂದಿಗೆ ನಡೆದ ಭೂ-ಬೆಲೆ ನಿರ್ಧರಣಾ ಸಲಹಾ ಸಮಿತಿಯ ಎರಡನೇ ಸಭೆಯನ್ನು ಜಿಲ್ಲಾಧಿಕಾರಿಗಳು ನಡೆಸಿದರು. ರೈಲ್ವೆ ಹಾಗೂ ರಾಷ್ಟಿಯ ಹೆದ್ದಾರಿ ಯೋಜನೆಗಳು ಬಂದಷ್ಟು ಜಿಲ್ಲೆ ಅಭಿವೃದ್ಧಿ ಸಾಧಿಸುತ್ತದೆ ಎಂದು ಹೇಳಿದರು.

ಜಿಲ್ಲೆಯ ಜನರ ಆರ್ಥಿಕ ಪ್ರಗತಿಗೆ ರೈಲ್ವೆ ಯೋಜನೆ ವರದಾನವಾಗಿದೆ. ಸರ್ಕಾರದ ಭೂಸ್ವಾಧೀನ ಮಾನದಂಡಗಳ ಪ್ರಕಾರ ಈ ರೈಲ್ವೆ ಯೋಜನೆಗಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ನಿಗದಿತ ಬೆಲೆಯಂತೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಮತ್ತು ಶೀಘ್ರವಾಗಿ ಹಣ ವರ್ಗಾವಣೆ ಆಗುತ್ತದೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.
ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಡಾ.ಬಿ.ಶರಣಪ್ಪ ಮಾತನಾಡಿ, "ರೈಲ್ವೆ ಯೋಜನೆಗಾಗಿ ವಶಪಡಿಸಿಕೊಂಡ ಜಮೀನು ಸುತ್ತಲಿನಲ್ಲಿ 50 ಅಡಿವರೆಗೆ ಶಾಲೆ, ವಾಣಿಜ್ಯ ಕಟ್ಟಡ, ಮನೆ ಅಥವಾ ಇತರೆ ಯಾವುದೇ ರೀತಿಯ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ. ಕೃಷಿ ಚಟುವಟಿಕೆ ನಡೆಸಬಹುದು" ಎಂದು ಮಾಹಿತಿ ನೀಡಿದರು.
ರೈತರು ಸಭೆಯಲ್ಲಿ ಮಾತನಾಡಿ, "ರೈಲ್ವೆ ಯೋಜನೆಗಾಗಿ ಭೂಸ್ವಾಧೀನ ಮಾಡಿಕೊಂಡ ಜಮೀನಿನಲ್ಲಿ ಗುಂಟೆಗಳಷ್ಟು ಉಳಿಯುತ್ತಿದೆ. ಇದರಲ್ಲಿ ಕೃಷಿ ಕಾರ್ಯಕ್ಕೆ ಸಾಧ್ಯವಾಗುವುದಿಲ್ಲ. ಅಲ್ಲದೇ, ಕಟ್ಟಡ ನಿರ್ಮಾಣಕ್ಕೂ ಅವಕಾಶ ಇರುವುದಿಲ್ಲ. ಉಳಿದ ಅಲ್ಪ ಜಮೀನನ್ನೂ ಕೂಡ ಖರೀದಿ ಮಾಡಬೇಕು" ಎಂದು ಕೋರಿದರು.
ಗದಗ-ವಾಡಿ ರೈಲು ಮಾರ್ಗ ಒಟ್ಟು 275.26 ಕಿ. ಮೀ. ಇದೆ. ಒಟ್ಟು 2841.84 ವೆಚ್ಚದಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ 50:50ರ ಅನುಪಾತದಲ್ಲಿ ಯೋಜನೆ ಜಾರಿಗೊಳಿಸುತ್ತಿವೆ.












Click it and Unblock the Notifications