ಬೊಮ್ಮಾಯಿ ಸಂಕಲ್ಪದಂತೆ 150 ಶಾಸಕರನ್ನು ಗೆಲ್ಲಿಸಿ: ಶ್ರೀರಾಮುಲು
ಯಾದಗಿರಿ, ಅಕ್ಟೋಬರ್ 19: ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ. ಬಿಜೆಪಿ ಮೇಲೆ ಜನಾಶೀರ್ವಾದ ಇರಬೇಕು. ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರು ಒದಗಿಸಲು 180 ಕೋಟಿ ವೆಚ್ಚ ಮಾಡಲಾಗುವುದು ಸಚಿವ ಬೈರತಿ ಬಸವರಾಜ್ ಜನಸಂಕಲ್ಪ ಕಾರ್ಯಕ್ರಮದಲ್ಲಿ ಜನರಿಗೆ ಭರವಸೆ ನೀಡಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಆರಂಭವಾದ ಜನ ಸಂಕಲ್ಪ ಯಾತ್ರೆ ಯಾದಗಿರಿಗೆ ಬಂದು ತಲುಪಿದೆ. ಇಂದು (ಅಕ್ಟೋಬರ್ 19) ರಂದು ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಜನ ಸಂಕಲ್ಪ ಯಾತ್ರೆ ಅದ್ಧೂರಿಯಾಗಿ ನಡೆದಿದೆ.
ಇಂದಿನ ಜನಸಂಕಲ್ಪ ಯಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿ, ಬಿ ಶ್ರೀರಾಮುಲು, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಸ್ಥಳೀಯ ಸಂಸದರು, ಸ್ಥಳೀಯ ಶಾಸಕರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.
ಜನಸಂಕಲ್ಪ ಯಾತ್ರೆಯಲ್ಲಿ ಜನರನುದ್ದೇಶಿಸಿ ಮಾತನಾಡಿದ ಸಾರಿಗೆ ಸಚಿವ ಬಿ.ಶ್ರೀರಾಮುಲು, ''ರಾಜೂ ಗೌಡರ ನೇತೃತ್ವದಲ್ಲಿ ಈ ಭಾಗದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಆಗಿವೆ. ನುಡಿದಂತೆ ನಡೆದ ವ್ಯಕ್ತಿ ಅವರು. ಅವರನ್ನು ಮತ್ತೆ ಗೆಲ್ಲಿಸಿ ಎಂದರು. ರಾಜ್ಯದ ಸಮಗ್ರ ಅಭಿವೃದ್ಧಿಗೆ ಬೊಮ್ಮಾಯಿಯವರು ಸಂಕಲ್ಪ ಮಾಡಿದ್ದು, ಬಿಜೆಪಿಯ 150 ಶಾಸಕರನ್ನು ಜನತೆ ಗೆಲ್ಲಿಸಬೇಕು. ಇದು 2023ರಲ್ಲಿ ನನಸಾಗುವ ಸಂಕೇತಗಳು ಲಭಿಸಿವೆ'' ಎಂದರು.
ಮಾತು ಮುಂದುವರಿಸಿದ ಅವರು, ನಮ್ಮ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕಕ್ಕೆ 3 ಸಾವಿರ ಕೋಟಿ ಅನುದಾನ ನೀಡಿದ್ದಾರೆ. ಮುಂದಿನ ಬಾರಿ 5 ಸಾವಿರ ಕೋಟಿ ಅನುದಾನ ನೀಡುವುದಾಗಿ ತಿಳಿಸಿದ್ದಾರೆ. ಮೀಸಲಾತಿ ವಿಚಾರದಲ್ಲೂ ದಿಟ್ಟ ನಿರ್ಧಾರ ಮಾಡಿದ್ದಾರೆ. ಇದು ಅವರ ಹೃದಯ ಶ್ರೀಮಂತಿಕೆಯ ಸಂಕೇತ ಎಂದು ಮೆಚ್ಚುಗೆ ಸೂಚಿಸಿದರು. ಇವೆಲ್ಲವನ್ನೂ ಗಮನಿಸಿ ಈ ಭಾಗದಲ್ಲಿ ಅತಿ ಹೆಚ್ಚು ಬಿಜೆಪಿ ಶಾಸಕರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಯಾದಗಿರಿ ಜನಸಂಕಲ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಚಿವ ಗೋವಿಂದ ಕಾರಜೋಳ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈಗಳನ್ನು ಬಲಪಡಿಸಲು ಬಿಜೆಪಿಯನ್ನು ಗೆಲ್ಲಿಸಿ ಎಂದು ಯಾದಗಿರಿಯ ಸುರಪುರ ಜನತೆಗೆ ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಯಲ್ಲಪ್ಪ ಕುರುಗುಂದಿ ಜನಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜೂ ಗೌಡರು ಶಾಸಕರಾಗಿ ಸತತ ಆಯ್ಕೆಯಾಗಿದ್ದಾರೆ. ಇವರು ಗರಿಷ್ಠ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಆದರೆ, ವಿರೋಧ ಪಕ್ಷದವರು ಇಲ್ಲ, ಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ. ಹಾಲು ಮತ ಸಮಾಜಕ್ಕೆ ರಾಜಕೀಯದಲ್ಲೂ ವಿಶೇಷ ಅವಕಾಶ ನೀಡಿದ ರಾಜೂ ಗೌಡರನ್ನು ಮತ್ತೆ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಡೆಯಾಪುರ ಬಸನಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷವು ನನ್ನ ಮೂರು ದಶಕಗಳ ಸೇವೆಗೆ ಬೆಲೆ ಕೊಟ್ಟಿರಲಿಲ್ಲ. ಆದರೆ, ಬಿಜೆಪಿ, ಶಾಸಕ ರಾಜೂ ಗೌಡರು ನನಗೆ ಅವಕಾಶ ನೀಡಿದರು ಎಂದು ವಿವರಿಸಿದರು. 2023ರಲ್ಲಿ ಬಿಜೆಪಿ ಮತ್ತೆ ರಾಜ್ಯದಲ್ಲಿ ಅಧಿಕಾರ ಪಡೆಯಲಿದೆ ಎನ್ನುವ ಭರವಸೆ ವ್ಯಕ್ತಪಡಿಸಿದರು.












Click it and Unblock the Notifications