ಒಮಾನ್ ಸ್ಪಂದನ ಸಂಸ್ಥೆಯಿಂದ ಕನ್ನಡ ಪತ್ರಕರ್ತರ ಸನ್ಮಾನ
ಸ್ಪಂದನ ಸಂಘದ ವತಿಯಿಂದ ವಿಶ್ವವಾಣಿ ಸಂಪಾದಕ ವಿಶ್ವೇಶ್ವರ್ ಭಟ್, ಕನ್ನಡಪ್ರಭ ಮತ್ತು ಸುವರ್ಣ ವಾಹಿನಿಯ ಪ್ರಧಾನ ಸಂಪಾದಕ ರವಿ ಹೆಗಡೆ, ವಿಶ್ವವಾಣಿಯ ಸಹ ಸಂಪಾದಕರಾದ ಮೋಹನ್ ಕುಮಾರ್ ಮತ್ತು ಬಹರೇನ್ ನ ಕನ್ನಡ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಕಿರಣ್ ಉಪಾಧ್ಯಾಯರವನ್ನು ಉಡುಪಿ ಹೋಟೇಲ್ ನ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ಸ್ಪಂದನ ಸಂಸ್ಥೆಯ ಮುಖ್ಯ ಅತಿಥಿಗಳಾಗಿ ಒಮಾನ್ ನ ಕೆಲ ಗಣ್ಯ ವ್ಯಕ್ತಿಗಳಾದ ಜೀ. ವಿ. ರಾಮಕೃಷ್ಣ, ಎಸ್.ಕೆ .ಪೂಜಾರಿ, ಗಣೇಶ್ ಹೆಗಡೆ, ಲಕ್ಷ್ಮಿ ನಾರಾಯಾಣ ಆಚಾರ್ಯ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸ್ಪಂದನ ತಂಡದ ಸಂಸ್ಥಾಪಕರಾದ ಕೋಣೀ ಪ್ರಕಾಶ್ ನಾಯಕ್ ರವರು ಸ್ವಾಗತ ಭಾಷಣ ಮಾಡಿ ಅತಿಥಿಗಳಿಗೆ ಸ್ವಾಗತ ಕೋರಿ, ಲಕ್ಷ್ಮಿ ನಾರಾಯಣ ಆಚಾರ್ಯರವರು ದೇವರ ಶ್ಲೋಕದ ಮೂಲಕ ಕಾರ್ಯಕ್ರಮದ ಶುಭಾರಂಭ ಮಾಡಿದರು.
ವಾಲ್ಟರ್ ಮೆಂಡೋನ್ಸರವರು, ತಮ್ಮ ವಿಭಿನ್ನ ಶೈಲಿಯಲ್ಲಿ ನಿರೂಪಣೆ (ಆಂಕರಿಂಗ್) ಮಾಡುವ ಮೂಲಕ ಕಾರ್ಯಕ್ರಮವನ್ನು ಸೊಗಸಾಗಿ ನಡೆಸಿಕೊಟ್ಟರು. ಸಂದರ್ಭಕ್ಕೆ ತಕ್ಕಂತೆ ಹಲವು ಉದಾಹರಣೆಗಳನ್ನು ನೀಡುತ್ತ ತಮ್ಮ ಲಘು ಹಾಸ್ಯದೊಂದಿಗೆ ಸಭಿಕರನ್ನು ಹಾಗೂ ಅತಿಥಿಗಳನ್ನು ಮನರಂಜಿಸಿದರು. ಸ್ಪಂದನ ಪರವಾಗಿ ಮಸ್ಕತ್ ಬ್ಯಾಂಕ್ ನ ಜೀ. ವಿ. ರಾಮಕೃಷ್ಣ, ಎಸ್.ಕೆ ಪೂಜಾರಿ, ಗಣೇಶ್ ಹೆಗಡೆಯವರು ಮತ್ತು ಲಕ್ಷ್ಮಿನಾರಾಯಣ್ ಆಚಾರ್ಯರವರು ಅತಿಥಿಗಳಿಗೆ ಶಾಲು ಹೊದಿಸಿ ಸನ್ಮಾನಿಸಿದರು.
ದುಬೈನಲ್ಲಿ ವಿಶ್ವದ ಪ್ರಪ್ರಥಮ ಜಾಗತಿಕ 'ಕ್ಷಾತ್ರ ಸಂಗಮ - 2019'
ರಾಜ್ ಸನಿಲ್, ವಿಜಯ್ ಸಾಲಿಯಾನ್, ಆರ್.ಕೆ.ನಿರಂಜನ್, ಮತ್ತು ಕವಿತಾ ರಾಮಕೃಷ್ಣ ರವರುಗಳು ಸ್ವಾದಭರಿತ ಒಮಾನ್ ನ ಡೇಟ್ಸ್ ನ್ನು ಉಡುಗೊರೆಯನ್ನಾಗಿ ಹಾಗೂ, ಕೋಣೀ ಪ್ರಕಾಶ್ ನಾಯಕ್, ನಾಗೇಶ್ ಶೆಟ್ಟಿ, ಜುಬೇರ್ ಅಹಮದ್ ಮತ್ತು ಉಮೇಶ್ ಬಂಟ್ವಾಳ್ ರವರು ಒಮಾನ್ ನ ಲಾಂಛನ ಎಂದು ಪರಿಗಣಿಸಲ್ಪಡುವ ಖಂಜಾರ್ ಅನ್ನು ಸ್ಮರಣಿಕೆಯಾಗಿ ನೀಡಿದರು. ಜೀ.ವಿ. ರಾಮಕೃಷ್ಣ ಮತ್ತು ಕವಿತಾ ರಾಮಕೃಷ್ಣರವರು ತಾವು ತಯಾರಿಸಿದ ತಂಜಾವೂರು ಶೈಲಿಯ ಕಲಾಕೃತಿಯನ್ನು ಅತಿಥಿಗಳಿಗೆ ನೀಡಿ ಗೌರವಿಸಿದರು. ಮತ್ತು ಕವಿತಾ ರಾಮಕೃಷ್ಣರವರು ಅತಿಥಿಗಳ ಪರಿಚಯ ಮಾಡಿಕೊಟ್ಟರು.
ಸಂವಾದ : ಅತಿಥಿಗಳೊಂದಿಗೆ, ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈರ್ವರು ತಮ್ಮ ಬಾಲ್ಯ, ಕಾಲೇಜು ವಿದ್ಯಾಭ್ಯಾಸ, ವೃತ್ತಿ ಜೀವನದ ಮೊದಲ ದಿನಗಳು, ತಮ್ಮ ಪತ್ರಿಕಾ ಪಯಣದ ಅನುಭವದ ಬುತ್ತಿಯನ್ನು ಸಭಿಕರೊಂದಿಗೆ ಹಂಚಿಕೊಂಡರು. ತಾವು ಬೆಳೆದು ಬಂದ ಹಾದಿ, ಆ ಹಾದಿಯಲ್ಲಿನ ತೊಡರುಗಳು, ಸವಾಲುಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಪತ್ರಿಕಾ ರಂಗದ ಆಕರ್ಷಣೆ, ವೃತ್ತಿ ಹೇಗೆ ಶುರುವಾಯಿತು ಎನ್ನುವುದರಿಂದ ಹಿಡಿದು, ಮುಂದಿನ ಪೀಳಿಗೆಗೆ ಮುಂದಿನ ಸಾಲಿನಲ್ಲಿ ನಿಲ್ಲುವ ಪತ್ರಕರ್ತರಾರು ಎನ್ನುವಲ್ಲಿಗೆ ಚರ್ಚೆ ನಡೆಯಿತು. ತಾವು ಪತ್ರಕರ್ತರಾಗಿದ್ದಾಗಿನ ದಿನಗಳಲ್ಲಿ, ಅಂದಿನ ಸಂಪಾದಕರಾದ, ವೈ ಎನ್ ಕೆ, ಶ್ಯಾಮರಾವ್ ಮತ್ತಿತರ ಕುರಿತು ತಮ್ಮ ಅನುಭವಗಳನ್ನು ಹಂಚಿ ಕೊಂಡರು.
ಅನಿವಾಸಿ ಭಾರತೀಯರೆಲ್ಲರೂ ಶ್ರೀಮಂತರಲ್ಲ: ಪ್ರವೀಣ್ ಶೆಟ್ಟಿ ವಕ್ವಾಡಿ
ಹೊಸ ತಂತ್ರಜ್ಞಾನ : ಪ್ರಿಂಟ್ ಮಷಿನ್ ನ ಅಚ್ಚುಮೊಳೆಯಿಂದ ಕಂಪ್ಯೂಟರ್ ವರೆಗೂ ಆದ ಬದಲಾವಣೆ, ಆರ್ಕುಟ್ ನಿಂದ, ಫೇಸ್ ಬುಕ್, ವಾಟ್ಸ್ ಅಪ್, ಇನ್ಸ್ಟಾಗ್ರಾಮ್ ವರೆಗಿನ ಇಂದಿನ ಬದಲಾವಣೆ ನೋಡಿ, ಪ್ರತಿಯೊಬ್ಬರು, ಜೀವನದಲ್ಲಿ ಹೊಸತನ್ನು ಅಳವಡಿಸಿಕೊಳ್ಳುತ್ತ ಮುನ್ನುಗ್ಗಬೇಕು. ಅಂದಿನ ಕಾಲದಲ್ಲಿ, ಕಂಪ್ಯೂಟರ್ ಗಳು ಪತ್ರಿಕಾ ಕಛೇರಿಗೆ ಲಗ್ಗೆ ಇಡುತಿದ್ದ ಸಂದರ್ಭದಲ್ಲಿ, ಅಂದಿನ ಹಳೆ ತಲೆಮಾರಿನ ಜನ ಮೊದಮೊದಲು ಅದರ ಅಳವಡಿಕೆಗೆ ವಿರೋಧಿಸಿದ್ದು, ತದನಂತರ ಅದನ್ನು ಒಗ್ಗಿಸಿಕೊಳ್ಳಲಾಗದೆ ಕೆಲವರು ಪತ್ರಿಕಾರಂಗವನ್ನು ತೊರೆದಿದ್ದನ್ನು ನೆನಪಿಸಿದರು.
ಅಂದಿನಿಂದ ಇಂದಿನವರೆಗೂ ವಿಶ್ವೇಶ್ವರ್ ಭಟ್ ಮತ್ತು ರವಿ ಹೆಗಡೆ ಯವರು ಸದಾ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತ ತಮ್ಮನ್ನು ತಾವು ನಿಂತ ನೀರಾಗಲು ಬಿಡದೆ ಹೊಸತನದೊಂದಿಗೆ ತಾವು ಬೆಳೆದಿದ್ದನ್ನು ಎಳೆಎಳೆಯಾಗಿ ಸಭಿಕರ ಮುಂದೆ ತೆರೆದಿಟ್ಟರು. ಕನ್ನಡ ಪತ್ರಿಕೋದ್ಯಮದಲ್ಲಿ 3D ತಂತ್ರಜ್ಞಾನವನ್ನು ತೆಗೆದುಕೊಂಡು ಬರಲು ವಹಿಸಿದ ಶ್ರಮದ ಕುರಿತು ರವಿ ಹೆಗಡೆಯವರು ಮಾಹಿತಿ ಹಂಚಿಕೊಂಡರು.
ಕೊಡಗಿಗೆ ದೇಣಿಗೆ ನೀಡಿ ಹೃದಯವಂತಿಕೆ ಮೆರೆದ ಕತಾರ್ ಭಾರತೀಯರು
ಸ್ಪಂದನ ಬಗ್ಗೆ ಶ್ಲಾಘನೆ : ಸ್ಪಂದನ ತಂಡ ಇದುವರೆವಿಗೂ ನಡೆಸಿಕೊಟ್ಟ ಮನರಂಜನ ಕಾರ್ಯಕ್ರಮಗಳೂ, ರಕ್ತದಾನ ಶಿಬಿರ ಮತ್ತು ಸಮಾಜ ಸೇವೆ ಕಾರ್ಯಕ್ರಮಗಳ ವಿಡಿಯೋ ನೋಡಿದ ಅತಿಥಿಗಳು ಸ್ಪಂದನ ತಂಡದ ಕಾರ್ಯಶೈಲಿಯನ್ನು ಕೊಂಡಾಡಿದರು.
ಮಸ್ಕತ್ ಕನ್ನಡಿಗರನ್ನು ಹೆಮ್ಮೆಯಿಂದ ಹೊಗಳಿ, ಬೆಂಗಳೂರಿನಲ್ಲಿ ಕನ್ನಡಿಗರು ಕನ್ನಡ ಮಾತನಾಡುವುದಕ್ಕೆ ಹಿಂಜರಿದರೆ, ಇನ್ನೂ ಒಮಾನ್ ನಲ್ಲಿ ನೀವೆಲ್ಲ ಅಚ್ಚ ಕನ್ನಡವನ್ನು ಸೊಗಸಾಗಿ ಮಾತನಾಡಿ ನಮ್ಮ ಭಾಷೆಯನ್ನು ಉಳಿಸುತಿದ್ದೀರಿ. ಮಕ್ಕಳಿಗೆ ಸಹ ಕನ್ನಡವನ್ನು ತಪ್ಪದೆ ಕಲಿಸಿ ಮುಂದಿನ ಪೀಳಿಗೆಗೆ ಕನ್ನಡವನ್ನು ಕೊಂಡೊಯ್ಯಲು ಮರೆಯದಿರಿ ಎನ್ನುವ ಹಿತವಚನವನ್ನು ಸಹ ನೀಡಿ ತಮ್ಮ ಕಳಕಳಿ ವ್ಯಕ್ತಪಡಿಸಿದರು.
ನಿಜವಾದ ಕನ್ನಡ ಪ್ರೇಮಿ ಯಾರು, ಎನ್ನಾರೈ ಕನ್ನಡಿಗನ ಅನುಭವಾಮೃತ
ಒಮಾನ್ ದೇಶ ಹಾಗೂ ಇಲ್ಲಿನ ರಾಜರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಒಂದೇ ದೇಶದಲ್ಲಿ, ಹಲವು ರೀತಿಯ ವೈವಿಧ್ಯತೆಯನ್ನು ನಾವು ಕಾಣಬಹುದು. ಬೆಟ್ಟ ಗುಡ್ಡಗಳು, ವಿಶಾಲವಾದ ಸಮುದ್ರ, ನದಿಗಳು, ಕಣಿವೆಗಳು, ಮರುಭೂಮಿ, ಸಲಾಲ್ಹದಂತಹ ಚಿಕ್ಕ ಮಲೆನಾಡು ಪ್ರದೇಶ, ಪಕ್ಕದ ಅರಬ್ ರಾಷ್ಟ್ರಗಳಿಗೆ ಹೋಲಿಸಿದರೆ ಒಮಾನ್ ವಿಭಿನ್ನ ರೀತಿಯಾಗಿದೆ. ಇಂತಹ ಸುಂದರ ದೇಶವನ್ನು ವೀಕ್ಷಿಸಲು ಇಷ್ಟುದಿನ ಯಾಕೆ ತಡಮಾಡಿದೆವು ಎನ್ನುವ ಭಾವನೆ ಈಗ ಮೂಡುತಿದೆ ಎಂದು ಹೇಳಿದರು.
ಸಂಗೀತ ಆಲ್ಬಂ ಬಿಡುಗಡೆ : ಈ ಹಿಂದೆ, ಒಮಾನ್ ಪ್ರವಾಸ ಕೈಗೊಂಡಿದ್ದ ಪ್ರಸಿದ್ದ ಸಂಗೀತ ನಿರ್ದೇಶಕ, ನಿರ್ಮಾಪಕ ಮತ್ತು ನಿರ್ದೇಶಕರಾದ ರವಿ ಬಸ್ರೂರ್ ರವರು ಬರೀ ಮೂರು ದಿನಗಳಲ್ಲಿ ಸಾಹಿತ್ಯ ರಚಿಸಿ, ರಾಗ ಸಂಯೋಜನೆ ನೀಡಿ ಸ್ಥಳೀಯ ಕಲಾವಿದರಿಂದ ಹಾಡಿಸಿ ಸಿದ್ದಪಡಿಸಿದ ಕನ್ನಡ ಮತ್ತು ತುಳು ಹಾಡುಗಳ "ಉಲ್ಲಾಸ ಮತ್ತು ಉತ್ಸಾಹ" (Zeal & Zest) ಎನ್ನುವ ಸಂಗೀತ ಆಲ್ಬಂ ಅನ್ನು ಅತಿಥಿಗಳು ಅಧಿಕೃತವಾಗಿ ಬಿಡುಗಡೆ ಗೊಳಿಸಿದರು.
ಕರವೋಕೆ ಹಾಡು ಮತ್ತು ಭೋಜನ : ಕಾರ್ಯಕ್ರಮದ ಕೊನೆಯಲ್ಲಿ, ಸ್ಥಳೀಯ ಹಾಡುಗಾರರಿಂದ ಕರವೋಕೆ ಹಾಡುಗಾರಿಕೆ ಏರ್ಪಡಿಸಿದ್ದರು ಮತ್ತು ಉಡುಪಿ ಹೋಟೆಲ್ ನ ಸವಿ ಭೋಜನವನ್ನು ಕಾರ್ಯಕ್ರಮಕ್ಕೆ ಬಂದ ಎಲ್ಲ ಅಥಿತಿಗಳಿಗೆ ನೀಡಲಾಯಿತು. ಸಭಿಕರೆಲ್ಲರು, ಸುಮಧುರ ಸಂಗೀತದೊಂದಿಗೆ ಸವಿಭೋಜನ ಸವಿದರು.