ಡಿ. ಕೆ. ಶಿವಕುಮಾರ್ ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಶಾಸಕರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಕಾಂಗ್ರೆಸ್ ಹೈಕಮಾಂಡ್ ಜೊತೆ ಸಹ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಕನಕಪುರ ತಾಲೂಕು ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪುತ್ರ. ಸಹೋದರ ಡಿ. ಕೆ. ಸುರೇಶ್ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು.
18ನೇ ವಯಸ್ಸಿನಲ್ಲಿಯೇ ಎನ್ಎಸ್ಯುಐ ಸೇರಿದ ಡಿ. ಕೆ. ಶಿವಕುಮಾರ್ 1981-83ರ ತನಕ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಆರ್. ಸಿ. ಕಾಲೇಜಿನಲ್ಲಿ ಓದುವಾಗ ಯುವ ಕಾಂಗ್ರೆಸ್ ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಆಯ್ಕೆಗೊಂಡರು.
1985ರಲ್ಲಿ ಮೊದಲ ಬಾರಿಗೆ ಸಾತನೂರು ಕ್ಷೇತ್ರದಲ್ಲಿ ಜೆಡಿಎಸ್ನ ಎಚ್. ಡಿ. ದೇವೇಗೌಡರ ವಿರುದ್ಧ ಚುನಾವಣಾ ಕಣಕ್ಕಿಳಿದರು. ಪ್ರಬಲ ಪೈಪೋಟಿ ನೀಡಿದ ಡಿ. ಕೆ. ಶಿವಕುಮಾರ್ ದೇವೇಗೌಡರು ಪ್ರಯಾಸದ ಗೆಲುವು ಪಡೆಯುವಂತೆ ಮಾಡಿದರು.
1987ರಲ್ಲಿ ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದರು. 1989ರಲ್ಲಿ ಸಾತನೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆ ಗೆಲ್ಲುವ ಮೂಲಕ ಕ್ಷೇತ್ರದಲ್ಲಿದ್ದ ಜೆಡಿಎಸ್ ಪ್ರಭಾವನ್ನು ಕಡಿಮೆಗೊಳಿಸಿದರು.
1991ರಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವಲ್ಲಿ ಡಿ. ಕೆ. ಶಿವಕುಮಾರ್ ಮಹತ್ವದ ಪಾತ್ರವಹಿಸಿದ್ದರು. ಬಂಗಾರಪ್ಪ ಸಂಪುಟದಲ್ಲಿ ಬಂಧಿಖಾನೆ ಖಾತೆ ಹೊಣೆಯನ್ನು ಅವರಿಗೆ ನೀಡಲಾಯಿತು.
1994ರ ಚುನಾವಣೆಯಲ್ಲಿ ಕೆಲವು ನಾಯಕರ ಪಿತೂರಿ ಕಾರಣ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿತು. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಗಳಿಸಿದರು. 1999ರ ಚುನಾವಣೆಯಲ್ಲಿ ಸಾತನೂರು ಕ್ಷೇತ್ರದಿಂದ ಆಯ್ಕೆಗೊಂಡರು. ಎಸ್. ಎಂ. ಕೃಷ್ಣ ಸಂಪುಟದಲ್ಲಿ ಸಹಕಾರ ಸಚಿವರಾದರು.
2002ರಲ್ಲಿ ನಗರಾಭಿವೃದ್ಧಿ ಖಾತೆ ಸಚಿವರಾದರು. 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಸಾತನೂರು ಕ್ಷೇತ್ರ ಇಲ್ಲವಾಯಿತು. ಆಗ ಕನಕಪುರ ಕ್ಷೇತ್ರಕ್ಕೆ ಬಂದರು. 2008, 2013 ಮತ್ತು 2018ರ ಚುನಾವಣೆಯಲ್ಲಿ ಕನಕಪುರದಿಂದ ಗೆಲುವು ಸಾಧಿಸಿದ್ದಾರೆ.
2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೂ ಡಿ. ಕೆ. ಶಿವಕುಮಾರ್ಗೆ ಸುಲಭವಾಗಿ ಸಚಿವ ಸ್ಥಾನ ಸಿಗಲಿಲ್ಲ. ಅಂತಿಮವಾಗಿ ಹೈಕಮಾಂಡ್ ಒಪ್ಪಿದ ಮೇಲೆ ಸಂಪುಟ ಸೇರಿ ಇಂಧನ ಖಾತೆ ವಹಿಸಿಕೊಂಡರು. ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಜಲಸಂಪನ್ಮೂಲ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದರು.
ಎಚ್. ಡಿ. ದೇವೇಗೌಡ ಮತ್ತು ಅವರ ಕುಟುಂಬದ ವಿರುದ್ಧ ರಾಜಕೀಯ ವೈಷಮ್ಯ ಹೊಂದಿದ್ದಾರೆ. 2006ರ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ವಿರುದ್ಧ ತೇಜಸ್ವಿನಿ ಗೌಡ ಕಣಕ್ಕಿಳಿಸಿ ಗೆಲ್ಲಿಸಿದ್ದು ಡಿ. ಕೆ. ಶಿವಕುಮಾರ್.
ಸುಮಾರು 35 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿರುವ ಡಿ. ಕೆ. ಶಿವಕುಮಾರ್ ಪಕ್ಷ ವಹಿಸಿದ ಎಲ್ಲಾ ಕೆಲಸಗಳನ್ನು ಶ್ರದ್ಧೆಯಿಂದ ಮಾಡುತ್ತಾರೆ. 2020 ಮಾರ್ಚ್ 11ರಂದು ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ವಿಲಾಸ್ ರಾವ್ ದೇಶ್ಮುಖ್ ಸರ್ಕಾರ ಅಲ್ಪಮೊತ್ತಕ್ಕೆ ಕುಸಿಯುವ ಭೀತಿ ಎದುರಾದಾಗ ಶಾಸಕರನ್ನು ರಕ್ಷಣೆ ಮಾಡಿ ಬೆಂಗಳೂರಿಗೆ ಕರೆದುಕೊಂಡು ಬಂದು ಕುದುರೆ ವ್ಯಾಪಾರ ನಡೆಯದಂತೆ ನೋಡಿಕೊಂಡರು.
2017ರಲ್ಲಿ ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆ ಚುನಾವಣೆ ನಡೆಯುವಾಗ ಪಕ್ಷದ ಸೂಚನೆಯಂತೆ ಪಕ್ಷದ ಶಾಸಕರನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕುದುರೆ ವ್ಯಾಪಾರ ತಪ್ಪಿಸಿದರು.
ಜಾರಿ ನಿರ್ದೇಶನಾಲಯದ ದಾಳಿ ಬಳಿಕ ಡಿ. ಕೆ. ಶಿವಕುಮಾರ್ ಬಂಧನವಾಯಿತು. ದೆಹಲಿಯ ತಿಹಾರ್ ಜೈಲಿನಲ್ಲಿದ್ದ ಅವರನ್ನು ನೋಡಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಗಮಿಸಿದ್ದರು. ಅಷ್ಟರ ಮಟ್ಟಿಗೆ ಡಿ. ಕೆ. ಶಿವಕುಮಾರ್ ಹೈಕಮಾಂಡ್ಗೆ ನಿಷ್ಠರು ಮತ್ತು ನಂಬಿಕಸ್ಥರು.
Disclaimer: The information relating to the candidate is an archive based on the self-declared affidavit filed at the time of elections. The current status may be different. For the latest on the candidate kindly refer to the affidavit filed by the candidate with the Election Commission of India in the recent election.