ಹತ್ತು ದಿನಗಳ ಉತ್ಸವದಲ್ಲಿ ಪಾಲ್ಗೊಂಡು ಪುನೀತರಾಗಿ
ಜಾತ್ರೆಯಲ್ಲಿ ನಾಲ್ಕನೆಯ ದಿನವು ಬಹಳ ಪ್ರಮುಖ ದಿನವಾಗಿದ್ದು ಅಂದು ರಾತ್ರಿ ಶ್ರೀದೇವಿ ಭೂದೇವಿಯರೊಂದಿಗೆ ಗರುಡಾರೂಢನಾದ ಚೆಲುವರಾಯಸ್ವಾಮಿಗೆ ವೈರಮುಡಿ ಕಿರೀಟ ಹಾಗೂ ಬ್ರಾಹ್ಮಿ ಮುಹೂರ್ತದಲ್ಲಿ ರಾಜಮುಡಿ ಕಿರೀಟವನ್ನು ಧಾರಣೆ ಮಾಡಲಾಗುತ್ತದೆ. ಐದನೆಯ ದಿನ ಸಂಜೆ ದೇಶಿಕರ ಸನ್ನಿಧಿಯಲ್ಲಿ ಪ್ರಹ್ಲಾದ ಪರಿಪಾಲನೋತ್ಸವ ನಡೆಯುತ್ತದೆ. ಅಂದು ರಾತ್ರಿ ಬಂಗಾರದ ಗರುಡವಾಹನದಲ್ಲಿ ಅಲಂಕಾರಗೊಂಡ ಚೆಲುವರಾಯಸ್ವಾಮಿ ಭಕ್ತರಿಗೆ ದರ್ಶನ ನೀಡುತ್ತಾನೆ. ಆರನೆಯ ದಿನ ಗಜೇಂದ್ರಮೋಕ್ಷ ಅಲಂಕಾರದ ವೈಭೋತ್ಸವ ಬಳಿಕ ಆನೆ, ಕುದುರೆ ಮಹೋತ್ಸವವು ನಡೆಯುತ್ತದೆ. [ಗ್ಯಾಲರಿ ನೋಡಿರಿ]
ಏಳನೆಯ ದಿನ ಶ್ರೀದೇವಿ, ಭೂದೇವಿ, ಕಲ್ಯಾಣನಾಯಕಿ ಹಾಗೂ ರಾಮಾನುಜರೊಂದಿಗೆ ಮಹಾರಥೋತ್ಸವವು ನಡೆಯುತ್ತದೆ. ರಾತ್ರಿ ಬಂಗಾರದ ಪಲ್ಲಕಿ ಸೇವೆಯೂ ಜರುಗುತ್ತದೆ. ಎಂಟನೆಯ ದಿನದಂದು ಕಲ್ಯಾಣಿಯಲ್ಲಿ ಚೆಲುವರಾಯಸ್ವಾಮಿಯ ತೆಪ್ಪೋತ್ಸವವು ನಡೆಯುತ್ತದೆ. ಒಂಭತ್ತನೆಯ ದಿನ ತೀರ್ಥಸ್ನಾನ, ಅವಭೃತ ನಂತರ ಸಂಜೆ ಪರಕಾಲ ಮಠದಲ್ಲಿ ವೈಭವದಿಂದ ಪಟ್ಟಾಭಿಷೇಕ ಜರುಗುತ್ತದೆ. ಹತ್ತನೆಯ ದಿನ ಜಾತ್ರೆಯ ಅಂತಿಮ ದಿನವಾಗಿದ್ದು ಅಂದು ಶ್ರೀಚೆಲುವರಾಯಸ್ವಾಮಿಗೆ ಮಹಾಭಿಷೇಕ ನೆರವೇರುತ್ತದೆ. ಅಲ್ಲಿಗೆ ವೈರಮುಡಿ ಜಾತ್ರೆಯ ಸಂಭ್ರಮ ಮುಗಿದು ಹೋಗುತ್ತದೆ. ಜಾತ್ರೆಗೆ ಸುತ್ತಮುತ್ತಲ ಹಳ್ಳಿಗಳಿಂದ ದೂರದ ಊರುಗಳಿಂದ ಬಂದಿದ್ದ ಸಹಸ್ರಾರು ಭಕ್ತರು ಬ್ರಹ್ಮೋತ್ಸವದಲ್ಲಿ ಪಾಲ್ಗೊಂಡು ಪುನೀತರಾದ ಸಂತಸದಲ್ಲಿ ಮನೆಗೆ ತೆರಳುತ್ತಾರೆ.