ಏ. 1ರಂದು ಮೇಲುಕೋಟೆಯಲ್ಲಿ ವೈರಮುಡಿ ವೈಭವ
ಬೆಟ್ಟಗುಡ್ಡಗಳು... ಅವುಗಳ ಮೇಲೆ ಮತ್ತು ನಡುವೆ ನೆಲೆನಿಂತಿರುವ ಹತ್ತಾರು ದೇಗುಲಗಳು... ಸ್ಪಟಿಕದಂತೆ ಹೊಳೆಯುವ ಸುಂದರ ಕಲ್ಯಾಣಿ, ಕೆರೆಗಳು... ಹಚ್ಚ ಹಸಿರಿನೊಂದಿಗೆ ಸುತ್ತಲೂ ಹರಡಿಕೊಂಡಿರುವ ಕೃಷಿ ಭೂಮಿಗಳು... ಇದು ಪ್ರವಾಸಿ ತಾಣವಾಗಿ, ಪವಿತ್ರ ಕ್ಷೇತ್ರವಾಗಿ ಆಸ್ತಿಕ-ನಾಸ್ತಿಕರೆನ್ನದೆ ಎಲ್ಲರನ್ನೂ ತನ್ನತ್ತ ಸೂಜಿಗಲ್ಲಿನಂತೆ ಸೆಳೆಯುವ ಮೇಲುಕೋಟೆಯ ಮೇಲ್ನೋಟದ ದೃಶ್ಯಗಳು. [ಗ್ಯಾಲರಿ ನೋಡಿರಿ]
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿಗೆ ಸೇರಿರುವ ಮೇಲುಕೋಟೆಯು ಮಂಡ್ಯದಿಂದ 28 ಕಿ.ಮೀ. ದೂರದಲ್ಲಿದೆ. ಸಮುದ್ರ ಮಟ್ಟದಿಂದ ಸುಮಾರು ಮೂರು ಸಾವಿರ ಅಡಿಯಷ್ಟು ಎತ್ತರದಲ್ಲಿದೆ. ಇದು ಭಾರತದಲ್ಲಿರುವ ಪವಿತ್ರ ಕ್ಷೇತ್ರಗಳ ಪೈಕಿ ಒಂದಾಗಿದ್ದು, ದಕ್ಷಿಣ ಭಾರತದ ಪ್ರಮುಖ ನಾಲ್ಕು ವೈಷ್ಣವ ಕ್ಷೇತ್ರ (ಶ್ರೀರಂಗ, ತಿರುಪತಿ, ಕಾಂಚೀಪುರ, ಮೇಲುಕೋಟೆ)ಗಳಲ್ಲಿ ಒಂದಾಗಿದೆ.
ಮೇಲುಕೋಟೆಯಲ್ಲಿ ಪ್ರತಿವರ್ಷವೂ ಹಲವಾರು ಕಾರ್ಯಕ್ರಮ, ಉತ್ಸವಗಳು ನಡೆಯುತ್ತವೆಯಾದರೂ ಅವುಗಳಲ್ಲಿ ಹತ್ತು ದಿನಗಳ ಕಾಲ ನಡೆಯುವ ಚೆಲುವರಾಯಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಅತ್ಯಂತ ಪ್ರಮುಖವಾದುದಾಗಿದೆ.