ವಾಣಿವಿಲಾಸ ವೈಭೋಗ: ಬೆಂಗಳೂರಿಗರು ಈ ಡ್ಯಾಂ ತಲುಪುವುದು ಹೇಗೆ?
ಚಿತ್ರದುರ್ಗ, ಆಗಸ್ಟ್ 13: ಕರ್ನಾಟಕದಲ್ಲಿ ಈ ಬಾರಿ ಮಳೆರಾಯ ಬಿಟ್ಟು ಬಿಡದೇ ಸುರಿಯುತ್ತಿದ್ದಾನೆ. ಬಿಡುವು ಕೊಡದೇ ಸುರಿಯುತ್ತಿರುವ ಮಳೆಯಿಂದ ರಾಜ್ಯದ ಬಹುಪಾಲು ಜಲಾಶಯಗಳು ಭರ್ತಿಯಾಗಿವೆ. ಅದೇ ರೀತಿ ಭರ್ತಿಯಾಗಿ ಪ್ರವಾಸಿಗರನ್ನು ಕೈ ಬೀಸಿ ಕರೆಯುವ ಜಲಾಶಯಗಳಲ್ಲಿ ವಾಣಿವಿಲಾಸ ಜಲಾಶಯವೂ ಒಂದಾಗಿದೆ.
ಹೊಸದುರ್ಗ, ಹಿರಿಯೂರು ತಾಲೂಕಿನ ಕೆಲ ಭಾಗಗಳಲ್ಲಿ ಕೇವಲ 50 ರಿಂದ 200 ಅಡಿಗೆ ನೀರು ಸಿಗುತ್ತಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಕೃಷಿ, ಚಟುವಟಿಕೆಗಳು ಸಂಭ್ರಮದಿಂದ ಗರಿಗೆದರಿದ್ದು ರೈತರು ಫುಲ್ ಖುಷ್ ಆಗಿದ್ದಾರೆ.
ಈ ಜಲಾಶಯ ತುಂಬುವ ಹಂತಕ್ಕೆ ಬಂದಿರುವುದು ರೈತ ಸಮುದಾಯದಲ್ಲಿ ಹೊಸ ಚೈತನ್ಯ ಮೂಡಿಸಿದೆ. ಮತ್ತೊಂದು ಕಡೆ ಜಿಲ್ಲೆಯ ಹಿರಿಯೂರು, ಚಳ್ಳಕೆರೆ ತಾಲೂಕಿನ ನಗರ ಮತ್ತು ಹಳ್ಳಿಗಳಿಗೆ ಕುಡಿಯುವ ನೀರಿನ ದಾಹ ನೀಗಿದಂತಾಗಿದೆ. ವಾಣಿ ವಿಲಾಸ ಜಲಾಶಯದಲ್ಲಿ ನೀರು ಹೆಚ್ಚಾಗುತ್ತಿದ್ದಂತೆ ಸುತ್ತಲಿನ ಪರಿಸರ ರಮಣೀಯವಾಗಿ ನೋಡುಗರನ್ನು ಆಕರ್ಷಿಸುತ್ತಿದೆ.

ವಾಣಿವಿಲಾಸ ಜಲಾಶಯದಲ್ಲಿ ಹೊಸ ದಾಖಲೆ
88 ವರ್ಷಗಳ ಬಳಿಕ ವಾಣಿವಿಲಾಸ ಸಾಗರ ಜಲಾಶಯ ನೀರಿನ ಸಂಗ್ರಹದಲ್ಲಿ ದಾಖಲೆ ಬರೆಯಲಿದೆ. 1933ರಲ್ಲಿ 135.25 ಅಡಿ ನೀರು ಭರ್ತಿಯಾಗಿ ಮೊದಲ ಬಾರಿಗೆ ಕೋಡಿ ಬಿದ್ದಿತ್ತು. ಇದೀಗ 88 ವರ್ಷಗಳ ಬಳಿಕ 2022ರಲ್ಲಿ ಎರಡನೇ ಬಾರಿಗೆ ಡ್ಯಾಂ ತುಂಬಿ ಕೋಡಿ ಬೀಳುವುದು ಬಹುತೇಕ ಖಚಿತವಾಗಿದೆ.

ನೀರಿನ ಸಂಗ್ರಹಣೆಯಲ್ಲಿ ವಿವಿ ಜಲಾಶಯದ ದಾಖಲೆ
ಕಳೆದ ತಿಂಗಳಿಂದ ಸತತವಾಗಿ ಸುರಿದ ಮಳೆಯಿಂದಾಗಿ ಈ ವರ್ಷ ಜಲಾಶಯದಲ್ಲಿ 6.75 ಅಡಿಗಳಷ್ಟು ಮಳೆ ನೀರು ಸಂಗ್ರಹವಾಗಿದೆ. 1932ರಲ್ಲಿ 125.50, 1933 ರಲ್ಲಿ 135.25, 1934ರಲ್ಲಿ 130.24 ಅಡಿ ನೀರು ಸಂಗ್ರಹವಾಗಿ ಇತಿಹಾಸ ನಿರ್ಮಾಣವಾಗಿತ್ತು. ನಂತರ 1956ರಲ್ಲಿ 125 ಅಡಿ, 1957ರಲ್ಲಿ 125.05 ಅಡಿ, 1958ರಲ್ಲಿ 124.25 ಅಡಿ ನೀರು ಸಂಗ್ರಹವಾಗಿತ್ತು. ಬಳಿಕ 2000ನೇ ಇಸವಿಯಲ್ಲಿ 122.50 ಅಡಿ, 2021ರಲ್ಲಿ 125.50 ಅಡಿ ನೀರು ಸಂಗ್ರಹವಾಗಿದೆ. ಇದೀಗ 1958ರ ದಾಖಲೆಯನ್ನು ಹಿಂದಿಕ್ಕಿ, ಡ್ಯಾಂ ನೀರಿನ ಮಟ್ಟ 125.50 ಅಡಿ ದಾಟಿ ಹೊಸ ದಾಖಲೆಯ ಸನ್ನಿಹಿತದಲ್ಲಿದೆ.

ವಾಣಿ ವಿಲಾಸ ಜಲಾಶಯ ನಿರ್ಮಾಣದ ಇತಿಹಾಸ ತಿಳಿಯಿರಿ
ಈ ಅಣೆಕಟ್ಟನ್ನು 1897ರಲ್ಲಿ ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ತಾಯಿ ಕೆಂಪರಾಜಮ್ಮಣಿ ಆದೇಶದ ಮೇರೆಗೆ ನಿರ್ಮಿಸಲಾಗಿತ್ತು. 'ತಾರಾ ಚಾಂದ್ ದಲಾಲ್' ಎಂಬ ಇಂಜಿನಿಯರ್ ನೇತೃತ್ವದ ತಂಡವು ಆಗಿನ ಮೈಸೂರು ದಿವಾನರಾಗಿದ್ದ ಶೇಷಾದ್ರಿ ಅಯ್ಯರ್ ಮುಂದಾಳತ್ವದಲ್ಲಿ ಡ್ಯಾಂ ನಿರ್ಮಿಸಲಾಗಿದ್ದು, 1907ರಲ್ಲಿ ಕಾಮಗಾರಿ ಪೂರ್ಣಗೊಳಿಸಲಾಯಿತು. ಅಲ್ಲದೇ ಕೆಆರ್ಎಸ್ ಅಣೆಕಟ್ಟು ನಿರ್ಮಾಣಕ್ಕೆ ವಾಣಿವಿಲಾಸ ಸಾಗರದ ನೀಲನಕ್ಷೆಯೇ ಮೂಲ ಎಂದು ಹೇಳಲಾಗುತ್ತದೆ.

ವಿವಿ ಡ್ಯಾಂಗೆ ಬೆಂಗಳೂರಿಗರು ಹೋಗುವುದು ಹೇಗೆ?
ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ್ ಜಲಾಶಯ ನೋಡಲು ಬಯಸುವ ಪ್ರವಾಸಿಗರು ಹಿರಿಯೂರು ನಗರದಿಂದ ಹೊಸದುರ್ಗ ರಸ್ತೆ ಮಾರ್ಗವಾಗಿ 18 ಕಿಲೋ ಮೀಟರ್ ದೂರದ ಎಡಭಾಗಕ್ಕೆ ಜಲಾಶಯಕ್ಕೆ ತಲುಪಬಹುದು. ಬೆಂಗಳೂರು, ತುಮಕೂರಿನಿಂದ ಹಿರಿಯೂರು ನಗರದ ಮೂಲಕ ಡ್ಯಾಂ ಪ್ರವೇಶಿಸಬಹುದು. ಹುಬ್ಬಳ್ಳಿ, ದಾವಣಗೆರೆಯಿಂದ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಲಭಾಗದ ವಿವಿ ಪುರ ಕ್ರಾಸ್ ಮೂಲಕ ಜಲಾಶಯಕ್ಕೆ ತೆರಳಿ ಡ್ಯಾಂ ವೀಕ್ಷಿಸಬಹುದಾಗಿದೆ.












Click it and Unblock the Notifications