ಹುಬ್ಬಳ್ಳಿ-ಮೈಸೂರು ಹೊಸ ಇಂಟರ್ಸಿಟಿ ರೈಲು ಓಡಿಸಿ
ಬೆಂಗಳೂರು, ಜೂನ್ 29: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ 3.0 2024ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ತಯಾರಿ ಆರಂಭಿಸಿದೆ. ಬಜೆಟ್ ಹಿನ್ನಲೆಯಲ್ಲಿ ರೈಲ್ವೆ ಇಲಾಖೆಯ ಹಲವು ಬೇಡಿಕೆಗಳನ್ನು ಇಡಲಾಗುತ್ತಿದೆ.
ಕರ್ನಾಟಕದ ಹುಬ್ಬಳ್ಳಿಯಲ್ಲಿ ಪ್ರಧಾನ ಕಛೇರಿ ಹೊಂದಿರುವನ ನೈಋತ್ಯ ರೈಲ್ವೆಗೆ ಹುಬ್ಬಳ್ಳಿ- ಮೈಸೂರು ತನಕ ಹೊಸ ಇಂಟರ್ಸಿಟಿ ರೈಲು ಓಡಿಸಬೇಕು ಎಂದು ಬೇಡಿಕೆ ಇಡಲಾಗಿದೆ. ಈ ರೈಲಿನಿಂದ ಹಲವು ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಲಾಗಿದೆ.

ನೈಋತ್ಯ ರೈಲ್ವೆ ಪ್ರಯಾಣಿಕರ ಸಂಘವು ನೈಋತ್ಯ ರೈಲ್ವೆ ಕಛೇರಿ, ರೈಲ್ವೆ ಇಲಾಖೆಗೆ ಈ ಕುರಿತು ಪತ್ರವನ್ನು ಬರೆದಿದೆ. ಸಂಘದ ಕಾರ್ಯದರ್ಶಿ ರೋಹಿತ್ ಎಸ್. ಜೈನ್ ಈ ಕುರಿತು ಪತ್ರವನ್ನು ಬರೆದು, ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪತ್ರದ ವಿವರ: ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿ-ಸಾಂಸ್ಕೃತಿಕ ನಗರಿ ಮೈಸೂರು ನಡುವೆ ನೂತನ ಇಂಟರ್ಸಿಟಿ ರೈಲನ್ನು ಓಡಿಸಬೇಕು. ಮೈಸೂರು-ಹಾಸನ ನಡುವೆ ಸಂಚಾರ ನಡೆಸುವ ಸಾವಿರಾರು ಜನರಿಗೆ ಈ ರೈಲು ಸೇವೆ ಅನುಕೂಲ ಕಲ್ಪಿಸಲಿದೆ.
ವ್ಯಾಪಾರಿಗಳು, ನೌಕರರು, ವಿದ್ಯಾರ್ಥಿಗಳು ಉಭಯ ನಗರಗಳ ನಡುವೆ ಸಂಚಾರ ನಡೆಸುತ್ತಾರೆ. ಆದ್ದರಿಂದ ಈ ಬಾರಿಯ ಬಜೆಟ್ನಲ್ಲಿ ಹುಬ್ಬಳ್ಳಿ-ಮೈಸೂರು ನಡುವೆ ನೂತನ ಇಂಟರ್ಸಿಟಿ ರೈಲು ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.
ಹುಬ್ಬಳ್ಳಿ-ಮೈಸೂರು ನೂತನ ಇಂಟರ್ಸಿಟಿ ರೈಲು ಸಂಚಾರದಿಂದ ದಾವಣಗೆರೆ, ಬೀರೂರು, ಅರಸೀಕೆರೆ, ಹಾಸನ ನಡುವೆ ನೇರ ಸಂಪರ್ಕ ಕಲ್ಪಿಸಿದಂತೆ ಆಗುತ್ತದೆ. ಆದ್ದರಿಂದ ರೈಲ್ವೆ ಇಲಾಖೆ ಇದನ್ನು ಮೊದಲ ಆದ್ಯತೆ ಎಂದು ಪರಿಗಣಿಸಿ ರೈಲು ಸಂಚಾರ ಆರಂಭಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಜಯಗಳಿಸಿರುವ ಬಿಜೆಪಿ ನಾಯಕ ವಿ. ಸೋಮಣ್ಣ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರು. ಅವರು ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದು, ಬಜೆಟ್ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಕೊಡುಗೆಯನ್ನು ನಿರೀಕ್ಷೆ ಮಾಡಲಾಗಿದೆ. ರಾಜ್ಯದ ಹಲವು ಸಂಸದರು ಈಗಾಗಲೇ ರೈಲ್ವೆ ಇಲಾಖೆಗೆ ವಿವಿಧ ಬೇಡಿಕೆಗಳನ್ನು ಸಲ್ಲಿಕೆ ಮಾಡಿದ್ದಾರೆ. ಆದರೆ ಬಜೆಟ್ನಲ್ಲಿ ಯಾವುದು ಈಡೇರಲಿದೆ ಕಾದು ನೋಡಬೇಕಿದೆ.
ಬೆಂಗಳೂರು-ಹುಬ್ಬಳ್ಳಿ ನಡುವೆ ಹಲವು ರೈಲುಗಳು ಸಂಚಾರ ನಡೆಸುತ್ತವೆ. ಆದರೆ ಸಾಂಸ್ಕೃತಿಕ ನಗರಿ ಮೈಸೂರು ಮತ್ತು ಉತ್ತರ ಕರ್ನಾಟಕ ಸಂಪರ್ಕಿಸಲು ರೈಲುಗಳ ಕೊರತೆ ಇದೆ. ಆದ್ದರಿಂದ ಹೆಚ್ಚಿನ ರೈಲನ್ನು ಓಡಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ.
ಜುಲೈ 10ರ ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ. ರೈಲ್ವೆ ಬಜೆಟ್ ಅನ್ನು ಸಹ ಸಾಮಾನ್ಯ ಬಜೆಟ್ ಜೊತೆಗೆ ಮಂಡಿಸುವುದರಿಂದ ರೈಲ್ವೆ ಇಲಾಖೆ ಅನುದಾನ, ಹೊಸ ಘೋಷಣೆಗಳು ಬಜೆಟ್ನಲ್ಲಿಯೇ ಸೇರಿರುತ್ತವೆ.
ಈ ಬಾರಿಯ ಬಜೆಟ್ನಲ್ಲಿ ಬೆಂಗಳೂರು-ತುಮಕೂರು 4 ಪಥದ ರೈಲು ಮಾರ್ಗ, ಬೆಂಗಳೂರು-ಮೈಸೂರು 4 ಪಥದ ರೈಲು ರೈಲು ಮಾರ್ಗ, ಬೆಂಗಳೂರಿನ ಸಬ್ ಅರ್ಬನ್ ಯೋಜನೆಗೆ ಹಣಕಾಸು ನೆರವು, ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಅನುದಾನ, ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭ ಸೇರಿದಂತೆ ವಿವಿಧ ನಿರೀಕ್ಷೆಗಳಿವೆ.
ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಕರ್ನಾಟಕದವರು. ನಿರ್ಮಲಾ ಸೀತಾರಾಮನ್ ಸಹ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ 17ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಆದ್ದರಿಂದ ಬಜೆಟ್ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಕೊಡುಗೆಯನ್ನು ನಿರೀಕ್ಷೆ ಮಾಡಲಾಗಿದೆ.












Click it and Unblock the Notifications