ಪ್ರವಾಸಿಗರೇ ಗಮನಿಸಿ; ಕೊಡಗಲ್ಲಿ River Rafting ದರ ಏರಿಕೆ ಇಲ್ಲ
ಬೆಂಗಳೂರು, ಜುಲೈ 11; ಮುಂಗಾರು ಮಳೆಯ ಅವಧಿಯಲ್ಲಿ ಕೊಡಗು ಪ್ರವಾಸ ಕೈಗೊಳ್ಳುವ ಜನರು ಹೆಚ್ಚು. ಪ್ರವಾಸಿಗರಿಗೆ ಜಿಲ್ಲಾಡಳಿತ ಸಿಹಿಸುದ್ದಿ ನೀಡಿದೆ. ಈ ವರ್ಷ ರಿವರ್ ರ್ಯಾಪ್ಟಿಂಗ್ ದರವನ್ನು ಹೆಚ್ಚಳ ಮಾಡುವುದಿಲ್ಲ. ಈಗಾಗಲೇ ನಿಗದಿಯಾಗಿರುವ ದರ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊಡಗು ಜಿಲ್ಲೆಯಲ್ಲಿನ ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು. ಹಲವು ವಿಚಾರಗಳ ಕುರಿತು ಚರ್ಚೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, "ರಿವರ್ ರ್ಯಾಪ್ಟಿಂಗ್ಗೆ ಸಂಬಂಧಿಸಿದಂತೆ ಈಗಾಗಲೇ ನಿಗದಿ ಮಾಡಿರುವ ದರದಂತೆ ಮುಂದುವರೆಸಬೇಕು. ರಿವರ್ ರ್ಯಾಪ್ಟಿಂಗ್ ಹಾಗೂ ಪ್ರವಾಸಿ ಸ್ಥಳಗಳು ಸಂಬಂಧಿಸಿದ ಮಾಹಿತಿ ವೆಬ್ಸೈಟ್ನಲ್ಲಿ ದಾಖಲಿಸಿ, ಜನರಿಗೆ ಮಾಹಿತಿ ದೊರೆಯುವಂತಾಗಬೇಕು" ಎಂದರು.
ರಿವರ್ ರ್ಯಾಪ್ಟಿಂಗ್ಗೆ ಸಂಬಂಧಿಸಿದಂತೆ ಪರವಾನಿಗೆ ನೀಡುವುದು, ಪರವಾನಿಗೆ ನವೀಕರಣ ಮಾಡುವುದು ಈ ಎಲ್ಲಾ ಕಾರ್ಯಗಳನ್ನು ನಿಯಮಾನುಸಾರ ಮಾಡಲಾಗುವುದು. ರಿವರ್ ರ್ಯಾಪ್ಟಿಂಗ್ಗೆ ಅನುಮತಿ ಪಡೆದಿರುವವರು ಜಿಲ್ಲಾಡಳಿತದ ಜೊತೆ ಕೈಜೋಡಿಸಬೇಕು. ಯಾವುದೇ ನಿಯಮವನ್ನು ಉಲ್ಲಂಘಿಸಬಾರದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದರು.
ಸಭೆಯಲ್ಲಿ ಮಾತನಾಡಿದ ದುಬಾರೆಯ ರತೀಶ್, "ರಿವರ್ ರ್ಯಾಪ್ಟಿಂಗ್ಗೆ ಅನ್ನು ಸರ್ಕಾರದ ಮಾರ್ಗಸೂಚಿಯಂತೆ ನಡೆಸಿಕೊಂಡು ಹೋಗಲಾಗುತ್ತದೆ. 73 ರಿವರ್ ರ್ಯಾಪ್ಟಿಂಗ್ ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ. ದುಬಾರೆಗೆ ವಾರಾಂತ್ಯದಲ್ಲಿ ಹೆಚ್ಚಿನ ಪ್ರವಾಸಿಗರು ಭೇಟಿ ನೀಡಲಿದ್ದು, ವಾಹನ ಪಾರ್ಕಿಂಗ್ ವ್ಯವಸ್ಥೆ ಆಗಬೇಕಿದೆ" ಎಂದು ಮನವಿ ಮಾಡಿದರು.
"ರಿವರ್ ರ್ಯಾಪ್ಟಿಂಗ್ ನಡೆಸುವ ನಿಟ್ಟಿನಲ್ಲಿ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಉಚಿತವಾಗಿ ತರಬೇತಿಯನ್ನು ನೀಡಲಾಗುತ್ತದೆ. ಈ ಅವಕಾಶವನ್ನು ಆಸಕ್ತರು ಬಳಸಿಕೊಳ್ಳಬಹುದು" ಎಂದು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ಮುಖ್ಯ ಪ್ರಶಿಕ್ಷಕರಾದ ದಿನೇಶ್ ಹೇಳಿದರು.
ಜಲಸಾಹಸ ಕ್ರೀಡೆ, ಶಿಲಾರೋಹಣ, ಕ್ರೀಡಾರೋಹಣ ಹೀಗೆ ವಿವಿಧ ರೀತಿಯ ತರಬೇತಿಯನ್ನು ಅಕಾಡೆಮಿ ವತಿಯಿಂದ ನೀಡಲಾಗುತ್ತಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಬರಪೊಳೆಯಲ್ಲಿ ಜಲಸಾಹಸ ಕ್ರೀಡೆಯ ತರಬೇತಿ ನೀಡಲಾಗುವುದು ಎಂದರು.
ಸೌಜನ್ಯದಿಂದ ವರ್ತಿಸಿ; "ವರ್ಷದಿಂದ ವರ್ಷಕ್ಕೆ ಕೊಡಗು ಜಿಲ್ಲೆಗೆ ಪ್ರವಾಸಿಗರ ಸಂಖ್ಯೆ ಏರಿಕೆಯಾಗುತ್ತಿದೆ. ದುಬಾರೆ, ಬರಪೊಳೆ, ಕುಮಾರಳ್ಳಿ, ಮಾಂದಲ್ಪಟ್ಟಿ, ಅಬ್ಬಿ ಜಲಪಾತ, ರಾಜಾಸೀಟು ಹೀಗೆ ವಿವಿಧ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಜನರು ಆಗಮಿಸುತ್ತಿದ್ದಾರೆ. ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಸೌಜನ್ಯಯುತವಾಗಿ ನಡೆದುಕೊಳ್ಳಬೇಕು" ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
"ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಜೊತೆ ಅನುಚಿತವಾಗಿ ವರ್ತಿಸಿದರೆ ಇಡೀ ಕೊಡಗು ಜಿಲ್ಲೆಗೆ ಕೆಟ್ಟ ಹೆಸರು ಬರಲಿದೆ. ಇದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶಕ್ಕೆ ತೊಂದರೆಯಾಗಲಿದೆ. ಪ್ರವಾಸಿಗರ ಜೊತೆಗೆ ಸೌಜನ್ಯಯುತವಾಗಿ ನಡೆದುಕೊಳ್ಳಬೇಕು. ಇದರಿಂದ ಮತ್ತಷ್ಟು ಪ್ರವಾಸಿಗರನ್ನು ಸೆಳೆಯಲು ಸಾಧ್ಯ. ಇದರಿಂದ ಉದ್ಯೋಗಗಳು ಹೆಚ್ಚಾಗಲಿದೆ" ಎಂದರು.
ಪ್ರವಾಸಿ ಸ್ಥಳಗಳಲ್ಲಿ ಸುರಕ್ಷತೆ, ಕುಡಿಯುವ ನೀರು, ಶೌಚಾಲಯ, ವಾಹನ ನಿಲುಗಡೆ ಮುಂತಾದ ಮೂಲ ಸೌಲಭ್ಯಗಳು ಅತ್ಯಗತ್ಯವಾಗಿಬೇಕಿದೆ. ಆ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಕಾರ್ಯಕ್ರಮ ರೂಪಿಸಲಿದೆ ಎಂದು ಹೇಳಿದರು.
ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿ, "ಇತ್ತೀಚೆಗೆ ಅಬ್ಬಿಜಲಪಾತ ಬಳಿ ಪ್ರವಾಸಿಗರ ಜೊತೆ ಅನುಚಿತವಾಗಿ ನಡೆದುಕೊಂಡಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿತ್ತು, ಇಂತಹ ಅಹಿತಕರ ಘಟನೆಗಳು ನಡೆಯಬಾರದು. ನಡೆದಲ್ಲಿ ಪೊಲೀಸ್ ಇಲಾಖೆ ನಿಯಮಾನುಸಾರ ಕಾನೂನು ರೀತಿಯ ಕ್ರಮ ಕೈಗೊಳ್ಳಲಿದೆ" ಎಂದು ಎಚ್ಚರಿಸಿದರು.












Click it and Unblock the Notifications