ಭಾರೀ ಮಳೆ; ಚಿಕ್ಕಮಗಳೂರು ಪ್ರವಾಸಿಗರಿಗೆ ಸೂಚನೆಗಳು
ಚಿಕ್ಕಮಗಳೂರು, ಜುಲೈ 05; ಕರ್ನಾಟಕದಲ್ಲಿ ಜುಲೈ ಆರಂಭದಲ್ಲಿ ನೈಋತ್ಯ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಹಳ್ಳ, ನದಿಗಳು ಮತ್ತೆ ಹರಿಯಲು ಆರಂಭಿಸಿದ್ದು, ಜೀವಕಳೆ ಮರುಕಳಿಸುತ್ತಿದೆ. ಜುಲೈ 10ರ ತನಕವೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಮಲೆನಾಡು ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿರುತ್ತದೆ ಎಂದು ಎಚ್ಚರಿಕೆ ನೀಡಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ದಿನಾಂಕ 05/07/2023, 06/07/2023 ಹಾಗೂ 07/07/2023ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ 115.6 ಮಿ. ಮೀ. ನಿಂದ 204.4 ಮಿ.ಮೀ. ತನಕ ಮಳೆಯಾಗುವ ಸಾಧ್ಯತೆ ಇರುತ್ತದೆ ಎಂದು ಮುನ್ಸೂಚನೆ ಕೊಡಲಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ವಿಪತ್ತು ಪ್ರಾಧಿಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರಿಗೆ, ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಹಲವು ಸೂಚನೆಗಳನ್ನು ನೀಡಿದೆ. ಈ ಸಂದರ್ಭದಲ್ಲಿ ಜಿಲ್ಲಾಡಳಿತದ ಜೊತೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದೆ.
ಸೂಚನೆಗಳು ಹೀಗಿವೆ
* ಸಾರ್ವಜನಿಕರು/ ಪ್ರವಾಸಿಗರು ನದಿಗೆ ಅಥವಾ ತಗ್ಗು ವುದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.
* ಈ ಸಂದರ್ಭದಲ್ಲಿ ಮಕ್ಕಳು/ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ/ ಕಟ್ಟಡ/ ಮರಗಳ ಹತ್ತಿರ/ ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳನ್ನು ತಲುವುವುದು.
* ವಿದ್ಯಾರ್ಥಿಗಳ ಪೋಷಕರು/ ಶಾಲಾ ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.
* ಹಿರಿಯ ನಾಗರಿಕರು/ ವಯಸ್ಕರು ಕೆರೆ/ ನದಿ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು. ಹೊರಗೆ ತೆರಳುವುದು ಅನಿವಾರ್ಯವಿದ್ದಲ್ಲಿ ಕುಟುಂಬದ ಸದಸ್ಯರೊಂದಿಗೆ ತೆರಳತಕ್ಕದ್ದು.
ಸಾರ್ವಜನಿಕರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೂಡದೇ ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಲು ಕೋರಲಾಗಿದೆ. ತುರ್ತು ಸಂದರ್ಭದಲ್ಲಿ ಜನರು ದೂರವಾಣಿ ಸಂಖ್ಯೆ 08262-238950 ಕರೆ ಮಾಡಬಹುದಾಗಿದೆ.
ಮಳೆಯ ಕೊರತೆ; ಚಿಕ್ಕಮಗಳೂರು ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದು. ವಾರಾಂತ್ಯ ಮತ್ತು ಸರ್ಕಾರಿ ರಜೆ ದಿನಗಳ ಸಮಯದಲ್ಲಿ ಸಾವಿರಾರು ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಾರೆ. ಅದರಲ್ಲಿಯೂ ಮಳೆಗಾಲದಲ್ಲಿ ಪ್ರವಾಸಿಗರು ಹೆಚ್ಚು. ಆದರೆ ಜೂನ್ ತಿಂಗಳಿನಲ್ಲಿ ಮಳೆಯ ಕೊರತೆಯ ಕಾರಣ ನದಿ, ಹಳ್ಳ, ಜಲಪಾತಗಳು ಬತ್ತಿ ಹೋಗಿ ಪ್ರವಾಸಿಗರಿಗೆ ನಿರಾಸೆಯಾಗಿತ್ತು.
ಜೂನ್ ತಿಂಗಳಿನಲ್ಲಿ ಕಳೆದ 10 ವರ್ಷಗಳಲ್ಲಿಯೇ ಕಡಿಮೆ ಮಳೆ ದಾಖಲಾಗಿತ್ತು. ವಾಡಿಕೆಯಂತೆ ಮಳೆಯಾದರೆ ಜೂನ್ನಲ್ಲಿ ನದಿ, ಹಳ್ಳಗಳು ತುಂಬಿ ಚಿಕ್ಕಮಗಳೂರಿನ ಪಶ್ಚಿಮ ಘಟ್ಟಗಳ ಸೌಂದರ್ಯ ಇಮ್ಮಡಿಗೊಳ್ಳಬೇಕಿತ್ತು. ವಾಡಿಕೆಯಂತೆ ಜಿಲ್ಲೆಯಲ್ಲಿ ಜನವರಿಯಿಂದ ಜೂನ್ ತನಕ 492 ಮಿ. ಮೀ. ಮಳೆಯಾಗಬೇಕಿತ್ತು. ಆದರೆ ಈ ವರ್ಷ ಕೇವಲ 209.9 ಮಿ. ಮೀ. ಮಳೆಯಾಗಿತ್ತು.
ಜೂನ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಮುಂಗಾರು ಚುರುಕಾಗಿದೆ. ಆದ್ದರಿಂದ ಜುಲೈ ತಿಂಗಳ ಆರಂಭದಲ್ಲಿಯೇ ಮಳೆ ಆರಂಭವಾಗಿದೆ. ಈಗ ಮಳೆಯಾಗುತ್ತಿರುವುದರಿಂದ ಹೆಚ್ಚಿನ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದ್ದು, ಜಿಲ್ಲಾಡಳಿತದ ಸೂಚನೆ ಪಾಲಿಸುವಂತೆ ಮನವಿ ಮಾಡಲಾಗಿದೆ.
ಪ್ರವಾಸ ಹೋಗಿರುವವರು ಸ್ಥಳೀಯರು ನೀಡುವ ಸೂಚನೆಯನ್ನು ಪಾಲನೆ ಮಾಡಿ. ಜಲಪಾತ, ನದಿ, ಗುಡ್ಡ ಪ್ರದೇಶಗಳಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವಾಗ, ರೀಲ್ಸ್ ಮಾಡುವಾಗ ಎಚ್ಚರಿಕೆಯನ್ನು ವಹಿಸುವುದು ಅತ್ಯಗತ್ಯವಾಗಿದೆ.












Click it and Unblock the Notifications