ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್
ದಾವಣಗೆರೆ, ಮಾರ್ಚ್ 23: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಶ್ರೀ ಕ್ಷೇತ್ರ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ 2024ಕ್ಕೆ ತಯಾರಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಜಾತ್ರೆಗೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ವಿಶೇಷ ಬಸ್ ಸೌಲಭ್ಯ ಮಾಡಲಾಗಿದೆ.
ಚಳ್ಳಕೆರೆ ತಾಲ್ಲೂಕಿನ ಶ್ರೀ ಕ್ಷೇತ್ರ ನಾಯಕನಹಟ್ಟಿಯಲ್ಲಿ ಮಾರ್ಚ್ 26ರಂದು ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ನಡೆಯಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಜಾತ್ರೆಗೆ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಮಾಡಿದೆ.

ಕೆಎಸ್ಆರ್ಟಿಸಿಯ ದಾವಣಗೆರೆ ವಿಭಾಗದಿಂದ 65 ಹೆಚ್ಚುವರಿ ವಿಶೇಷ ಬಸ್ಗಳ ಕಾರ್ಯಚರಣೆ ಮಾಡಲಾಗುತ್ತದೆ ಎಂದು ಕೆಎಸ್ಆರ್ಟಿಸಿ ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಯಾಣಿಕರ ದಟ್ಟಣೆಗನುಗುಣವಾಗಿ ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಾಗುವುದು. ಭಕ್ತಾದಿಗಳು ವಿಶೇಷ ಬಸ್ ವ್ಯವಸ್ಥೆಯ ಸದುಪಯೋಗವನ್ನು ಉತ್ತಮ ರೀತಿಯಿಂದ ಪಡೆದುಕೊಂಡು ಶ್ರೀ ಗುರುವಿನ ಕೃಪೆಗೆ ಪಾತ್ರರಾಗುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
ಪ್ರಾಣಿ ಬಲಿ ನಿಷೇಧಿಸಿ ಆದೇಶ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ಚಿತ್ರದುರ್ಗ ಜಿಲ್ಲಾಡಳಿತ ಅಗತ್ಯ ತಯಾರಿಯನ್ನು ಮಾಡಿಕೊಂಡಿದೆ. ಮಾರ್ಚ್ 26 ಮಂಗಳವಾರ ಮಧ್ಯಾಹ್ನ 3 ಗಂಟೆಯಿಂದ ರಥೋತ್ಸವ ನಡೆಯಲಿದೆ. ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಮಾರ್ಚ್ 26ರ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಸಂಪೂರ್ಣವಾಗಿ ಪ್ರಾಣಿಬಲಿ ನಿಷೇಧಿಸಲಾಗಿದೆ. ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಳಕು ವೃತ್ತ ಪೊಲೀಸ್ ವೃತ್ತ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬಾರಿ ಬರಗಾಲದ ಹಿನ್ನಲೆಯಲ್ಲಿ ಭಕ್ತರ ಮನವಿಯಂತೆ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಹಾಕಲಾಗುವ, ಅಂಗಡಿ ಹಾಗೂ ವಾಣಿಜ್ಯ ವ್ಯಾಪಾರ ಮಳಿಗೆಗಳಿಂದ ತೆರಿಗೆ ವಸೂಲಿ ಮಾಡುವುದಿಲ್ಲ. ಜಾತ್ರೆಗೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಜಾತ್ರೆ ಸಮಯದಲ್ಲಿ ಸ್ವಚ್ಛತೆ, ಕುಡಿಯುವ ನೀರು, ಸಾರಿಗೆ, ರಕ್ಷಣೆ, ಆರೋಗ್ಯ ಸೇರಿದಂತೆ ಇತರ ವಿಷಯಗಳಿಗೆ ಪ್ರತ್ಯೇಕ ಸಮಿತಿಗಳನ್ನು ರಚನೆ ಮಾಡಲಾಗಿದೆ. ಸಮಿತಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆಯಿಂದ ತಾತ್ಕಾಲಿಕ ಆಸ್ಪತ್ರೆ ತೆರೆಯಲಾಗುತ್ತದೆ. ಅಗತ್ಯ ಔಷಧಿ ಸಂಗ್ರಹಿಸಲಾಗುತ್ತದೆ. ತುರ್ತು ಸಂದರ್ಭಕ್ಕಾಗಿ ಕನಿಷ್ಠ 3 ಅಗ್ನಿಶಾಮಕ ವಾಹನ ಹಾಗೂ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ದೇವಾಲಯದ ಬಳಿ ಮಾಡಲಾಗುತ್ತಿದೆ.
ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕ್ಷೇತ್ರದ ಜಾತ್ರೆಯು ಮಾರ್ಚ್ 19ರಿಂದ ಆರಂಭವಾಗಿದ್ದು, ಏಪ್ರಿಲ್ 1ರ ತನಕ ನಡೆಯಲಿದೆ. ಜಾತ್ರೆಯ ಅಂಗವಾಗಿ ಮಾರ್ಚ್ 26ರ ಮಂಗಳವಾರ ದೊಡ್ಡ ರಥೋತ್ಸವ ನಡೆಯಲಿದೆ. ಕರ್ನಾಟಕ ಸರ್ಕಾರ 'ಶಕ್ತಿ' ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸಿರುವ ಕಾರಣ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಜಾತ್ರೆಗೆ ಆಗಮಿಸುವ ನಿರೀಕ್ಷೆ ಇದೆ.
ಮುಕ್ತಿ ಬಾವುಟ ಹರಾಜು: ರಥೋತ್ಸವದ ಬಳಿಕ ನಡೆಯುವ ಮುಕ್ತಿ ಬಾವುಟ ಹರಾಜಿನ ಹಣ ಪಾವತಿಗೆ ಸಂಬಂಧಿಸಿದಂತೆ ಯಾವುದೇ ನಿಯಮಗಳು ಇಲ್ಲದಿರುವುದರಿಂದ, ಹರಾಜಿನಲ್ಲಿ ಯಶಸ್ವಿಯಾಗುವವರು ಸಮರ್ಪಕವಾಗಿ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ಇದಕ್ಕೆ ಸೂಕ್ತ ನಿಯಮ ರೂಪಿಸಲು ಜನರು ಒತ್ತಾಯಿಸಿದ್ದಾರೆ. ಹರಾಜಿನಲ್ಲಿ ಭಾಗವಹಿಸುವವರು ಮೊದಲೇ ನೋಂದಣಿ ಮಾಡಿಕೊಳ್ಳಬೇಕು. ಕೂಗಿದ ಹರಾಜು ಮೊತ್ತವನ್ನು ನಿಗದಿತ ಸಮಯದಲ್ಲಿ ದೇವಸ್ಥಾನ ಮಂಡಳಿಗೆ ಕಟ್ಟುವಂತೆ ಮಾರ್ಗಸೂಚಿಯನ್ನು ರಚಿಸಲಾಗಿದೆ.












Click it and Unblock the Notifications