Bengaluru-Chennai expressway; ಗಡ್ಕರಿ ಕೊಟ್ಟರು ಅಪ್ಡೇಟ್
ಬೆಂಗಳೂರು, ಜುಲೈ 24; ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ತಮಿಳುನಾಡು ರಾಜಧಾನಿ ಚೆನ್ನೈ ಸಂಪರ್ಕಿಸುವ ಮಹತ್ವದ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇ ಬಗ್ಗೆ ಕೇಂದ್ರ ಸಚಿವರು ಅಪ್ಡೇಟ್ ನೀಡಿದ್ದಾರೆ. ಭಾರತ್ ಮಾಲಾ ಪರಿಯೋಜನೆ ಅಡಿಯಲ್ಲಿ ಈ ಉತ್ಕೃಷ್ಟ ಗುಣಮಟ್ಟದ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತಿದೆ.
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಯೋಜನೆಯ ಕಾಮಗಾರಿ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಬೆಂಗಳೂರು-ಮಾಲೂರು ಸೆಕ್ಷನ್ನ ಕೆಲಸಗಳು ಹೇಗೆ ನಡೆಯುತ್ತಿವೆ? ಎಂದು ಅವರು ವಿವರ ನೀಡಿದ್ದು, ಯೋಜನೆಯ ಇತರ ಮಾಹಿತಿಯನ್ನು ಸಹ ಹಂಚಿಕೊಂಡಿದ್ದಾರೆ.

ಪ್ರಸ್ತುತ 1160 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಮತ್ತು ಮಾಲೂರು ನಡುವಿನ ಕಾಮಗಾರಿ ನಡೆಯುತ್ತಿದೆ ಎಂದು ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಭಾರತ್ ಮಾಲಾ ಪರಿಯೋಜನೆ ಅಡಿ ಕೈಗೊಂಡಿರುವ ಈ ಎಕ್ಸ್ಪ್ರೆಸ್ವೇ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ಮೂರು ರಾಜ್ಯಗಳಲ್ಲಿ ಹಾದು ಹೋಗಲಿದೆ.
ಎಕ್ಸ್ಪ್ರೆಸ್ವೇ ಮಾಹಿತಿ; ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ದೇಶಾದ್ಯಂತ ತಡೆರಹಿತ ಮತ್ತು ಪರಿಸರ ಪೂರಕವಾದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಬದ್ಧರಾಗಿದ್ದೇವೆ ಎಂದು ನಿತಿನ್ ಗಡ್ಕರಿ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ. ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇ ಕಾಮಗಾರಿ ಪೂರ್ಣಗೊಂಡರೆ ಬೆಂಗಳೂರು-ಚೆನ್ನೈ ನಡುವಿನ ಪ್ರಯಾಣದ ಅವಧಿ ಕೇವಲ 3 ಗಂಟೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇ ಮೂರು ರಾಜ್ಯಗಳನ್ನು ಸಂಪರ್ಕಿಸಲಿದೆ. ಅದು ಬೆಂಗಳೂರು ಮೂಲಕ ಹೊಸಕೋಟೆ, ಮಾಲೂರು, ಬಂಗಾರಪೇಟೆ, ಕೋಲಾರ, ವೆಂಕಟಗಿರಿ, ಪಲಮನೇರ್, ಬಂಗಾರುಪೆಲ್ಲೆಂ, ಚಿತ್ತೂರು, ರಾಣಿಪೆಟ್ಟೈ ಮತ್ತು ಶ್ರೀಪೆರಂಬೂರು ನಡುವೆ ಹಾದು ಹೋಗಲಿದೆ ಎಂದು ಸಚಿವರು ಟ್ವೀಟ್ನಲ್ಲಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇಯಲ್ಲಿ ಗಮನ ಸೆಳೆಯುವುದು ಅದರ ವಿನ್ಯಾಸ. ಒಟ್ಟು ಮೂರು ಪದರದ ಈ ಹೆದ್ದಾರಿಯ ವಿನ್ಯಾಸವೇ ವಿಶಿಷ್ಟ ಎಂದು ಸಚಿವರು ವಿವರಣೆ ನೀಡಿದ್ದಾರೆ. ಧೀರ್ಘಕಾಲದ ತನಕ ಬಾಳಿಕೆ ಬರುವ ಉತ್ತಮ ಗುಣಮಟ್ಟದಿಂದ ಈ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಕರ್ನಾಟಕದಲ್ಲಿ ಕೈಗೊಂಡಿರುವ ಮಹತ್ವದ ಯೋಜನೆಗಳಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಪೂರ್ಣಗೊಂಡು ಲೋಕಾರ್ಪಣೆಗೊಂಡಿದೆ. ಎರಡು ರಾಜ್ಯದ ರಾಜಧಾನಿಗಳನ್ನು ಸಂಪರ್ಕಿಸುವ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇ ಮತ್ತೊಂದು ಬಹುನಿರೀಕ್ಷಿತ ಯೋಜನೆಯಾಗಿದೆ.
ಪ್ರಸ್ತುತ ಬೆಂಗಳೂರು ಮತ್ತು ಚೆನ್ನೈ ನಡುವಿನ ಪ್ರಯಾಣದ ಅವಧಿ ಸುಮಾರು 6 ರಿಂದ 7 ಗಂಟೆಗಳು. ಆದರೆ ಈ ಎಕ್ಸ್ಪ್ರೆಸ್ ವೇ ನಿರ್ಮಾಣಗೊಂಡರೆ ಕೇವಲ 3 ಗಂಟೆಯ ಅವಧಿಯಲ್ಲಿ ಸಂಚಾರ ನಡೆಸಬಹುದು, ವಾಹನಗಳ ಸುರಕ್ಷತೆಗೆ ಆದ್ಯತೆ ನೀಡುವಂತೆ ಉತ್ತಮ ಗುಣಮಟ್ಟದ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಿಂದ ಶ್ರೀಪರಂಬೂರು ತನಕ ನೇರ ಸಂಪರ್ಕ ಕಲ್ಪಿಸುವ ಮೂರು ರಾಜ್ಯಗಳ ಮೂಲಕ ಹಾದು ಹೋಗುವ ಯೋಜನೆ ಇದಾಗಿದೆ. ಈ ಕಾರಿಡಾರ್ನಿಂದ ಮೂರು ರಾಜ್ಯಗಳ ಸರಕು ಸಾಗಣೆಯಲ್ಲಿ ಮಹತ್ವದ ಬದಲಾವಣೆಯನ್ನು ನಿರೀಕ್ಷೆ ಮಾಡಲಾಗಿದೆ.
ಸುಮಾರು 17,000 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಮಹತ್ವದ ರಾಷ್ಟ್ರೀಯ ಹೆದ್ದಾರಿ ಯೋಜನೆ ಇದಾಗಿದೆ. ಇದನ್ನು 2024ರ ಲೋಕಸಭೆ ಚುನಾವಣೆ ವೇಳೆಗೆ ಉದ್ಘಾಟನೆ ಮಾಡುವ ಗುರಿ ಇದೆ. ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿಕೊಂಡು ವೇಗವಾಗಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.
ಹಾಸನ, ತುಮಕೂರು ಮೂಲಕ ಬೆಂಗಳೂರು ತಲುಪುವ ವಾಣಿಜ್ಯ ಸರಕು ಸಾಗಣೆ ವಾಹನಗಳು ಬೆಂಗಳೂರು ನಗರ ಪ್ರವೇಶ ಮಾಡದೇ ನೇರವಾಗಿ ಹೊಸಕೋಟೆ ಮೂಲಕ ಆಂಧ್ರ ಪ್ರದೇಶ, ತಮಿಳುನಾಡು ಕಡೆಗೆ ಸಾಗಲು ಈ ರಸ್ತೆ ಸಹಾಯಕವಾಗಿದೆ. ಈ ಹೆದ್ದಾರಿಗೆ ಸಂಪರ್ಕ ಕಲ್ಪಿಸಲು ಅನುಕೂಲವಾಗುವಂತೆ ನೆಲಮಂಗಲ-ದಾಬಸ್ಪೇಟೆಯಿಂದ ರಾಷ್ಟ್ರೀಯ ಹೆದ್ದಾರಿ 648 ಸಹ ಅಭಿವೃದ್ಧಿಗೊಳಿಸಲಾಗುತ್ತಿದೆ.












Click it and Unblock the Notifications