ಪಾವಗಡ-ರಾಯದುರ್ಗ ನೂತನ ರೈಲ್ವೆ ಮಾರ್ಗ ಯೋಜನೆ ಲೋಕಾರ್ಪಣೆ ಯಾವಾಗ?-ಇಲ್ಲಿದೆ ಮಹತ್ವದ ಅಪ್ಡೇಟ್
ಚಿತ್ರದುರ್ಗ, ಅಕ್ಟೋಬರ್, 03: ರಾಜ್ಯದ ರೈಲ್ವೆ ವಿಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಲೇ ಇವೆ. ಇನ್ನು ಇದೀಗ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಹಾಗೂ ಪಾವಗಡ-ರಾಯದುರ್ಗ ನೂತನ ರೈಲ್ವೆ ಮಾರ್ಗ ಯೋಜನೆ ಯಾವಾಗ ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಸಚಿವ ವಿ.ಸೋಮಣ್ಣ ಅವರು ಹೇಳಿದ್ದೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಹಾಗೂ ಪಾವಗಡ-ರಾಯದುರ್ಗ ನೂತನ ರೈಲ್ವೆ ಮಾರ್ಗ ಯೋಜನೆ 2027ರ ಜನವರಿಯೊಳಗೆ ಲೋಕಾರ್ಪಣೆ ಆಗಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ತುಮಕೂರು-ಚಿತ್ರದುರ್ಗ-ದಾವಣಗೆರೆ ಹಾಗೂ ರಾಯದುರ್ಗ-ಪಾವಗಡ ನೂತನ ರೈಲ್ವೆ ಮಾರ್ಗಗಳ ಭೂಸ್ವಾಧೀನ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. 2,140 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ರೈಲ್ವೆ ಮಾರ್ಗಗಳ ನಿರ್ಮಾಣ ಕಾರ್ಯಕ್ಕೆ ಯೋಜನೆ ರೂಪಿಸಲಾಗಿದೆ. ಈ ಮೊದಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಶೇಕಡ 50-50ರ ಅನುಪಾತದಲ್ಲಿ ಯೋಜನೆ ಜಾರಿಗೊಳಿಸುವ ತೀರ್ಮಾನಿಸಲಾಗಿತ್ತು ಎಂದರು.
ಇದನ್ನು ಬದಲಿಸಿ ರಾಜ್ಯ ಸರ್ಕಾರ ಭೂ ಸ್ವಾಧೀನ ವೆಚ್ಚವನ್ನು ಭರಿಸಿ, ಯೋಜನೆಗೆ ಭೂಮಿ ಹಸ್ತಾಂತರಿಸಿದರೆ ರೈಲ್ವೆ ಇಲಾಖೆಯಿಂದಲೇ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲಾಗುವುದು. ಎರಡು ನೂತನ ರೈಲ್ವೆ ಮಾರ್ಗಗಳಿಗೆ 2,409 ಹೆಕ್ಟೇರ್ ಭೂಮಿ ಅವಶ್ಯಕತೆ ಇದ್ದು, ಇದರಲ್ಲಿ ಕೇವಲ 280 ಹೆಕ್ಟೇರ್ ಭೂಸ್ವಾಧೀನ ಪ್ರಕ್ರಿಯೆ ಬಾಕಿ ಇದೆ ಎಂದರು.
ರೈಲ್ವೆ ಮಾರ್ಗಕ್ಕೆ ಈಗಾಗಲೇ 1,100 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ಪ್ರಧಾನಮಂತ್ರಿಗಳ ಸೂಚನೆಯಂತೆ 2027ರ ಜನವರಿ ವೇಳೆಗೆ ನೂತನ ರೈಲ್ವೆ ಮಾರ್ಗಗಳ ನಿರ್ಮಾಣ ಮಾಡಿ ಪ್ರಧಾನಮಂತ್ರಿ ಹಾಗೂ ರೈಲ್ವೆ ಖಾತೆ ಸಚಿವರಿಂದ ಲೋಕಾರ್ಪಣೆ ಮಾಡುವುದಾಗಿ ಸಚಿವ ವಿ.ಸೋಮಣ್ಣ ಅವರು ಭರವಸೆ ನೀಡಿದರು.
ರೈಲ್ವೆ ಇಲಾಖೆಯಲ್ಲಿ ಸಾಕಷ್ಟು ಕ್ರಾಂತಿಕಾರಕ ಬದಲಾವಣೆಗಳನ್ನು ತರಲಾಗಿದೆ. ಪ್ರಯಾಣಿಕರ ಸುರಕ್ಷತೆ ಹಿತದೃಷ್ಟಿಯಿಂದ ಹಾಗೂ ರೈಲ್ವೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ "ಕವಚ್" ರಕ್ಷಣಾ ವ್ಯವಸ್ಥೆಯನ್ನು ಪ್ರತಿ ರೈಲಿನಲ್ಲಿಯೂ ಅಳವಡಿಸಲು ಚಿಂತನೆ ನಡೆಸಲಾಗಿದೆ. ಕವಚ್ ವ್ಯವಸ್ಥೆಯು ವಿಮಾನದ ಬ್ಲಾಕ್ಬಾಕ್ಸ್ ಮಾದರಿಯಲ್ಲಿ ರೈಲಿನ ಎಲ್ಲ ಚಲನವಲನಗಳನ್ನು ಸಂಗ್ರಹಿಸಲಿದೆ. ಇದರಿಂದ ಅಪಘಾತಗಳು ಉಂಟಾದ ಸಂದರ್ಭದಲ್ಲಿ ತಾಂತ್ರಿಕ ಲೋಪದೋಷಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ ಎಂದರು.
ದೇಶದ 24 ರಾಜ್ಯಗಳ 303 ಜಿಲ್ಲೆಗಳಲ್ಲಿ 103 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ರಾಜ್ಯದಲ್ಲಿ 10 ವಂದೇ ಭಾರತ್ ಕಾರ್ಯಾಚರಣೆ ನಡೆಸುತ್ತಿವೆ. ಕೇವಲ ಮೂರು ವರ್ಷಗಳಲ್ಲಿ ಈ ಸಾಧನೆ ಮಾಡಲಾಗಿದೆ. ರೈಲು ಸಂಚಾರದ ವೇಗ ಹೆಚ್ಚಳಕ್ಕೆ ಕ್ರಮಕೈಗೊಂಡಿದ್ದು, ಗಂಟೆಗೆ ಗರಿಷ್ಟ 160 ಕಿಲೋ ಮೀಟರ್ ವೇಗದ ಮಿತಿಯನ್ನು ತಲುಪಲು ಪ್ರಯತ್ನಿಸಲಾಗುತ್ತಿದೆ ಎಂದರು.
ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ 49,000 ಕಿಲೋ ಮೀಟರ್ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯ ಮಾಡಲಾಗಿದೆ. ಶೇಕಡ 27ರಷ್ಟು ಇದ್ದ ರೈಲ್ವೆ ಮಾರ್ಗಗಳ ವಿದ್ಯುದೀಕರಣವನ್ನು ಶೇಕಡ 98ರಷ್ಟು ಪ್ರಗತಿ ಸಾಧಿಸಲಾಗಿದೆ. ದೇಶದ ಎಲ್ಲ ಜಿಲ್ಲಾ ಕೇಂದ್ರಗಳ ರೈಲ್ವೆ ನಿಲ್ದಾಣಗಳನ್ನು ಏರ್ಪೋರ್ಟ್ಗಳ ಮಾದರಿಯಲ್ಲಿ ನವೀಕರಣಗೊಳಿಸಲಾಗುತ್ತಿದೆ ಎಂದರು
ಕೇರಳ, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಹಾದುಹೋಗಿರುವ 741 ಕಿಲೋ ಮೀಟರ್ ಉದ್ದದ ಕೊಂಕಣ ರೈಲ್ವೆಯನ್ನು ರೈಲ್ವೆ ಇಲಾಖೆಯ ನೇರ ಆಡಳಿತಕ್ಕೆ ಒಳಪಡಿಸಿ, ಹಳಿಗಳ ಡಬ್ಲಿಂಗ್ ಮಾಡುವ ಕಾರ್ಯಕ್ಕೆ ರೈಲ್ವೆ ಖಾತೆ ಸಚಿವ ಅಶ್ವಿನ್ ವೈಷ್ಣವ್ ಒಲವು ತೋರಿದಿದ್ದಾರೆ ಎಂದು ತಿಳಿಸಿದರು.
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ಬರುವ ಜನವರಿಯಲ್ಲಿ ಕುಂಭಮೇಳ ಜರುಗಲಿದ್ದು, ಸುಮಾರು 40 ಕೋಟಿಗೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ಹಿನ್ನೆಲೆ ರೈಲ್ವೆ ಇಲಾಖೆಯಿಂದ 600 ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗುವುದು. ಪ್ರಯಾಗ್ ರಾಜ್ಗೆ ತೆರಳುವ ಭಕ್ತರಿಗೆ ಏಕರೂಪದ ಟಿಕೆಟ್ ವ್ಯವಸ್ಥೆ ಮಾಡುವ ಚಿಂತನೆ ನಡೆಸಲಾಗಿದ್ದು, ಟಿಕೆಟ್ ಪಡೆದವರು ಯಾವುದೇ ರೈಲಿನಲ್ಲಿ ಪ್ರಯಾಣಿಸಬಹುದಾಗಿದೆ ಎಂದರು.
ಅತೀ ಕಡಿಮೆ ಪ್ರಯಾಣದರದಲ್ಲಿ ಬಡವರು, ಸಣ್ಣ-ಪುಟ್ಟ ವ್ಯಾಪಾರಿಗಳ ಅನುಕೂಲಕ್ಕಾಗಿ ಪ್ರಮುಖ ನಗರಗಳಿಗೆ ರೈಲು ಸಂಪರ್ಕ ಕಲ್ಪಿಸುವ ದೃಷ್ಠಿಯಿಂದ ಡೆಮೋ ರೈಲುಗಳನ್ನು ಓಡಿಸಲಾಗುತ್ತಿದೆ. ಸಂಚಾರ ದಟ್ಟಣೆ ಹೆಚ್ಚಿರುವ ಸಮಯದಲ್ಲಿ ಡೆಮೋ ರೈಲುಗಳನ್ನು ಓಡಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ರೈಲ್ವೆ ಇಲಾಖೆಯಲ್ಲಿ ಪಾರದರ್ಶಕತೆ ತರಲಾಗಿದ್ದು, 14 ಲಕ್ಷ ಕರ್ತವ್ಯ ನಿರತ ನೌಕರರಿಗೆ ಹಾಗೂ 15 ಲಕ್ಷ ನಿವೃತ್ತ ಪಿಂಚಣಿದಾರರಿಗೆ ನಿಗದಿತ ಸಮಯದಲ್ಲಿ ಎಲ್ಲ ಸೇವಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ರೈಲ್ವೆ ಇಲಾಖೆಯಿಂದ ನಿವೃತ್ತರಾಗುವ ನೌಕರರಿಗೆ ನಿವೃತ್ತ ದಿನದಂದೇ ಅವರಿಗೆ ಸಲ್ಲಬೇಕಾದ ಹಣಕಾಸು ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.
ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಹರ್ ಘರ್ ಜಲ್ ಯೋಜನೆಯಡಿ 8,00,000 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರಿನ ನಳ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.
ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಆದ್ಯತೆ: ಪ್ರಸ್ತುತ ನೂತನ ರೈಲ್ವೆ ಮಾರ್ಗಗಳನ್ನು ನಿರ್ಮಾಣ ಮಾಡುವ ವೇಳೆ ರೈಲ್ವೆ ಕೆಳ ಸೇತುವೆ ನಿರ್ಮಾಣದ ಬದಲಿಗೆ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಚಿವ ವಿ.ಸೋಮಣ್ಣ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಳೆ ನೀರು ಸಂಗ್ರಹಗೊಂಡು ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿರುವ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿನ ರೈಲ್ವೆ ಕೆಳಸೇತುವೆ ದುರಸ್ತಿ ಕಾರ್ಯವನ್ನು ಸಂಸದ ಗೋವಿಂದ ಎಂ ಕಾರಜೋಳ ಅವರ ಸಲಹೆ ಪಡೆದು, ರೈಲ್ವೆ ಕೆಳ ಸೇತುವೆಗಳ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
156 ಹೆಕ್ಟೇರ್ ಭೂಸ್ವಾಧೀನ ಪ್ರಕ್ರಿಯೆ ಬಾಕಿ: ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ 1,211 ಹೆಕ್ಟೇರ್ ಭೂ ಸ್ವಾಧೀನಕ್ಕೆ ರೈಲ್ವೆ ಇಲಾಖೆಯಿಂದ ಕೋರಲಾಗಿತ್ತು. ಇದುವರೆಗೆ 1,026 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಭರಮಸಾಗರ-ಚಿತ್ರದುರ್ಗ, ಚಿತ್ರದುರ್ಗ-ಹಿರಿಯೂರು ಹಾಗೂ ಹಿರಿಯೂರು-ತಾವರಕೆರೆ ನಡುವೆ ಮೂರು ಹಂತದಲ್ಲಿ ಭೂಸ್ವಾಧೀನ ನಡೆಸಲಾಗುತ್ತಿದೆ ಎಂದರು.
ಒಟ್ಟು 156 ಎಕರೆ ಭೂಸ್ವಾಧೀನದ ಅಂತಿಮ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಶೇಕಡ 90ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಹಂತಗಳಲ್ಲಿ ಈಗಾಗಲೇ ರೈಲ್ವೆ ಇಲಾಖೆಯಿಂದ ಕಾಮಗಾರಿಗಳನ್ನು ಆರಂಭಿಸಲಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯಲ್ಲಿ ಮಾಹಿತಿ ನೀಡಿದರು.
ಬೆಳೆ ಕಟಾವು ನಂತರ ಕಾಮಗಾರಿ ಆರಂಭಿಸಲು ಸೂಚನೆ: ನೇರ ರೈಲ್ವೆ ಮಾರ್ಗ ಯೋಜನೆಯ ದಾವಣಗೆರೆ-ಭರಮಸಾಗರ-ಚಿತ್ರದುರ್ಗ ಮಧ್ಯದಲ್ಲಿ ಭೂಸ್ವಾಧೀನಪಡಿಸಿಕೊಂಡ ಜಮೀನಿನಲ್ಲಿ ರೈತರು ಬೆಳೆಗಳನ್ನು ಬೆಳೆದಿದ್ದಾರೆ. ರೈತರಿಗೆ ತೊಂದರೆ ಆಗದಂತೆ ಇನ್ನೂ 1 ತಿಂಗಳ ಬಳಿಕ ಬೆಳೆ ಕಟಾವು ನಂತರ ರೈಲ್ವೆ ಕಾಮಗಾರಿಗಳನ್ನು ಆರಂಭಿಸುವಂತೆ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications