Shakti Yojana: ಉಚಿತ ಬಸ್ ಪ್ರಯಾಣಕ್ಕೆ ಸರ್ಕಾರ ಷರತ್ತು ವಿಧಿಸಿರುವುದು ಸರಿಯಲ್ಲ: ಶಾಮನೂರು ಶಿವಶಂಕರಪ್ಪ
ದಾವಣಗೆರೆ, ಜೂನ್, 11: ರಾಜ್ಯಾದ್ಯಂತ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದೆ. ಅದೇ ರೀತಿಯಲ್ಲಿ ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಬಸ್ ಪ್ರಯಾಣಕ್ಕೆ ಚಾಲನೆ ಕೊಟ್ಟರು. ಇದೆ ವೇಳೆ ಮಾತನಾಡಿದ ಶಿವಶಂಕರಪ್ಪ, ಈ ಯೋಜನೆಗೆ ಷರತ್ತು ವಿಧಿಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಸಮಾಧಾನ ವ್ಯಕ್ತಪಡಿಸಿದ ಶಿವಶಂಕರಪ್ಪ
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ನಗರದ ಹೈಸ್ಕೂಲ್ ಮೈದಾನದ ಪಕ್ಕದಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು, ಶಕ್ತಿ ಯೋಜನೆ ಅತ್ಯುತ್ತಮ ಯೋಜನೆಯಾಗಿದೆ.

ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ರಾಜ್ಯ ಸರ್ಕಾರವು ಯಾಕೆ ಷರತ್ತು ವಿಧಿಸಿದೆ ಎಂಬುದು ಗೊತ್ತಿಲ್ಲ. ಷರತ್ತು ಮಾಡಿರುವುದು ಸರಿಯಲ್ಲ. ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ. ಅಲ್ಲಿ ನನ್ನ ಅಭಿಪ್ರಾಯಗಳನ್ನು ತಿಳಿಸುತ್ತೇನೆ. ಕಂಡೀಷನ್ ವಿಧಿಸಿರುವುದು ವೈಯಕ್ತಿಕವಾಗಿ ನನಗೆ ಸಮಾಧಾನ ಇಲ್ಲ ಎಂದು ಹೇಳಿದರು.
ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದೇ ಕಾಂಗ್ರೆಸ್
ಬಿಜೆಪಿಯವರು ಪದೇ ಪದೇ ಸುಳ್ಳು ಹೇಳಿದ ಕಾರಣಕ್ಕೆ ಈ ಹಿಂದೆ ಕಾಂಗ್ರೆಸ್ ಮಾಡಿದ್ದ ಒಳ್ಳೆಯ ಕೆಲಸವನ್ನು ಜನರು ಮರೆತಿದ್ದರು. ದೇಶದಲ್ಲಿ ಮೊದಲ ಬಾರಿಗೆ ರಾಜಕಾರಣದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷ. ನಾವು ನುಡಿದಂತೆ ನಡೆಯುತ್ತೇವೆ. ಈ ಹಿಂದೆಯೂ ನುಡಿದಂತೆ ನಡೆದಿದ್ದೇವೆ. ಗ್ರಾಮೀಣ ಪ್ರದೇಶದ ಮಹಿಳೆಯರು, ಯುವತಿಯರು, ಶಾಲಾ ಮಕ್ಕಳಿಗೆ ಈ ಯೋಜನೆ ಉಪಯೋಗ ಆಗುತ್ತದೆ ಎಂದು ತಿಳಿಸಿದರು.
ಪ್ರಯಾಣಿಕರಿಗೆ ತೊಂದರೆಯಾದರೆ ಶಿಸ್ತು ಕ್ರಮ
ಯಾವ ಮಹಿಳೆಗೂ ಪ್ರಯಾಣಕ್ಕೆ ತೊಂದರೆ ಆಗಬಾರದು. ಈ ನಿಟ್ಟಿನಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಇದನ್ನು ಸರಿಯಾಗಿ ನಿಭಾಯಿಸದಿದ್ದಲ್ಲಿ ಸಿಬ್ಬಂದಿ ವಿರುದ್ದ ರಾಜ್ಯ ಸರ್ಕಾರವು ಶಿಸ್ತು ಕ್ರಮ ತೆಗೆದುಕೊಳ್ಳುತ್ತದೆ ಎಂದು ಶಾಮನೂರು ಶಿವಶಂಕರಪ್ಪರು ಎಚ್ಚರಿಕೆ ನೀಡಿದರು.
ಇದೇ ವೇಳೆ ಮಹಿಳೆಯರು ಶಕ್ತಿ ಯೋಜನೆಯನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಲಿ. ಸರ್ಕಾರದ ಯೋಜನೆಯು ಪರಿಣಾಮಕಾರಿಯಾಗಿ ಮಹಿಳೆಯರನ್ನು ತಲುಪಬೇಕು ಎಂದು ಹೇಳಿದರು.
ಇನ್ನು ಅಸುರರ ಕಾಟಕ್ಕೆ ಬ್ರಹ್ಮ, ವಿಷ್ಣು ಮಹೇಶ್ವರ ತತ್ತರಿಸಿ ಹೋಗಿದ್ದರು. ಆಗ ಪಾರ್ವತಿ ಮದುವೆ ಮಾಡಿ ಅಸುರರ ಸಂಹಾರ ಮಾಡಲಾಯಿತು. ಆಗ ಎದ್ದಿದ್ದ ಸಮಸ್ಯೆಯನ್ನು ಯುದ್ಧ ಮಾಡಿ ಕೊಂದು ಹಾಕಲಾಗಿತ್ತು. ಅದೇ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ಮೂಲಕ ಒಳ್ಳೆಯ ಯೋಜನೆಯನ್ನು ಜಾರಿ ಮಾಡುತ್ತಿದೆ ಎಂದು ತಿಳಿಸಿದರು.
ಮೈಸೂರಿನಲ್ಲೂ ಶಕ್ತಿ ಯೋಜನೆಗೆ ಚಾಲನೆ
ಅದೇ ರೀತಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿಯೋಜನೆಗೆ ಭಾನುವಾರ ಮೈಸೂರಿನಲ್ಲೂ ವಿಧ್ಯುಕ್ತ ಚಾಲನೆ ದೊರೆಯಿತು. ಸಚಿವ ಡಾ.ಎಚ್.ಸಿ. ಮಹದೇವಪ್ಪ ಈ ಯೋಜನೆಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಎಚ್.ಸಿ.ಮಹಾದೇವಪ್ಪ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕರ್ನಾಟಕದಲ್ಲಿನ ಪ್ರತಿಯೊಬ್ಬ ಮಹಿಳೆಯರಿಗೆ ಅನುಕೂಲವಾಗುವಂತೆ ಕಾರ್ಯಕ್ರಮಗಳನ್ನು ನೀಡಿದೆ. ಸ್ತ್ರೀಯರ ಸಬಲೀಕರಣಕ್ಕಾಗಿ ರಚನೆಯಾಗಿರುವ ಕಾರ್ಯಕ್ರಮಗಳಲ್ಲಿ "ಶಕ್ತಿ ಯೋಜನೆಯು ಮಹಿಳೆಯರಿಗೆ ಉಚಿತ ಪ್ರಯಾಣ" ಕಾರ್ಯಕ್ರಮವು ಪ್ರಮುಖವಾಗಿದ್ದು, ಇದನ್ನು ಇಂದಿನಿಂದ ರಾಜ್ಯಾದ್ಯಂತ ಅನುಷ್ಟಾನಗೊಳಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮೈಸೂರು ವಿಭಾಗದ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಸಾರಿಗೆ ಮತ್ತು ವೇಗದೂತ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ ಎಂದರು.












Click it and Unblock the Notifications