ಶಿವಮೊಗ್ಗ ಪ್ರವಾಸ ಹೋಗುವವರು ಗಮನಿಸಿ, ಈ ತಾಣಗಳಿಗೆ ಪ್ರವೇಶ ನಿಷೇಧ
ಶಿವಮೊಗ್ಗ, ಜುಲೈ 18: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದೆ. ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಳ್ಳ, ನದಿಗಳು ಉಕ್ಕಿ ಹರಿಯುತ್ತಿವೆ. ಹಲವು ರಸ್ತೆಗಳು ಜಲಾವೃತವಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಮಳೆಗಾಲದಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸಂದರ್ಭದಲ್ಲಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಹಲವು ಸೂಚನೆಗಳನ್ನು ಶಿವಮೊಗ್ಗ ಜಿಲ್ಲಾ ಪೊಲೀಸರು ನೀಡಿದ್ದಾರೆ. ಪ್ರವಾಸದ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಿ ಎಂದು ಮನವಿ ಮಾಡಿದ್ದಾರೆ.

ಪೊಲೀಸರ ಪ್ರಕಟಣೆ ಏನು?; ಶಿವಮೊಗ್ಗ ಜಿಲ್ಲಾ ಪೊಲೀಸರು ಪ್ರಕಟಣೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ಇದರಿಂದಾಗಿ ನದಿಗಳು, ಹಳ್ಳಗಳು ತುಂಬಿ, ಅಪಾಯಮಟ್ಟವನ್ನು ತಲುಪಿ ಹರಿಯುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಅಣೆಕಟ್ಟುಗಳು, ಜಲಪಾತಗಳು ಮತ್ತು ನದಿ ನೀರಿಗೆ ಇಳಿಯುವುದು, ಈಜಾಡುವುದು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುವುದನ್ನು ಹಾಗೂ ಈ ರೀತಿಯ ಅಪಾಯಕಾರಿ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಭೇಟಿಯನ್ನು ನೀರಿನ ಹರಿವು ಕಡಿಮೆಯಾಗುವವರೆಗೆ ಸಂಬಂಧಪಟ್ಟ ಇಲಾಖೆಗಳಿಂದ ನಿಷೇಧಿಸಲಾಗಿರುತ್ತದೆ.
ಈ ಬಗ್ಗೆ ಈಗಾಗಲೇ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸೂಚನಾ ಫಲಕಗಳನ್ನು ಅಳವಡಿಸಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ನೀರಿನ ಹರಿವು ಕಡಿಮೆಯಾಗುವವರೆಗೆ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡದೇ ಸಹಕರಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ 112 ಸಹಾಯವಾಣಿಗೆ ಕರೆ ಮಾಡಲು ಕೋರಿದ್ದಾರೆ.
ತಲಾಸಿ ಅಬ್ಬಿ ಫಾಲ್ಸ್ ಪ್ರದೇಶವು ಅಪಾಯಕಾರಿ ಸ್ಥಳವಾಗಿದ್ದು ಇಲ್ಲಿಗೆ ಪ್ರವೇಶ ನಿಷೇಧ ಮಾಡಲಾಗಿದೆ. ನೀರಿಗೆ ಇಳಿಯುವುದು, ಈಜುವುದು, ಸೆಲ್ಫೀ ತೆಗೆದುಕೊಳ್ಳುವುದನ್ನು ನಿಷೇಧಿಸಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸರು ಹೇಳಿದ್ದಾರೆ.
ಹಿಡ್ಲುಮನೆ ಫಾಲ್ಸ್ ಪ್ರದೇಶವು ಅಪಾಯಕಾರಿ ಸ್ಥಳವಾಗಿದ್ದು ಇಲ್ಲಿಗೆ ಪ್ರವೇಶ ನಿಷೇಧ ಮಾಡಲಾಗಿದೆ. ನೀರಿಗೆ ಇಳಿಯುವುದು, ಈಜುವುದು, ಸೆಲ್ಫೀ ತೆಗೆದುಕೊಳ್ಳುವುದನ್ನು ನಿಷೇಧಿಸಿದೆ.
ತೀರ್ಥಹಳ್ಳಿಯಲ್ಲಿ ತುಂಗಾ ನದಿಯ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು, ಸಾರ್ವಜನಿಕರು ನೀರಿಗೆ ಇಳಿಯುವುದು, ಸೆಲ್ಫೀ ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಂದು ವಾರದಿಂದ ಮಲೆನಾಡಲ್ಲಿ ಮಳೆಯು ಅಬ್ಬರಿಸುತ್ತಿದೆ. ನದಿಗಳು ಅಪಾಯಮಟ್ಟ ಮಟ್ಟ ಮೀರಿ ಹರಿಯುತ್ತಿವೆ. ಹಳ್ಳ-ಕೊಳ್ಳಗಳು ಅಪಾಯಕಾರಿಯಾಗಿದ್ದು, ಪ್ರವಾಸಿ ತಾಣಗಳ ಸಮೀಪ ಸ್ಥಳೀಯರು, ಪೊಲೀಸರು ಸೂಚನಾ ಫಲಕಗಳನ್ನು ಅಳವಡಿಕೆ ಮಾಡಿದ್ದಾರೆ, ಕೆಲವು ಕಡೆ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.
ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಶಿವಮೊಗ್ಗ ಪೊಲೀಸರು ನೀರಿನ ಹರಿವು ಕಡಿಮೆಯಾಗುವ ತನಕ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡದೇ ಸಹಕರಿಸಲು ಜಿಲ್ಲಾಡಳಿತ ಜೊತೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ಆಯಾ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ. ತುಂಗಾ ನದಿ ಪ್ರವಾಹದಿಂದ ಹಲವು ಪ್ರದೇಶಗಳು ಜಲಾವೃತವಾಗಿದೆ. ಭಾರತೀಯ ಹವಾಮಾನ ಇಲಾಖೆ ಜುಲೈ 19ರ ತನಕ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆ ಭೂ ಕುಸಿತದ ಹಿನ್ನಲೆಯಲ್ಲಿ ಜುಲೈ 22ರ ತನಕ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನಿಷೇಧಿಸಲಾಗಿದೆ. ಜಿಲ್ಲೆಯಲ್ಲಿಯೂ ತುಂಗಾ, ಭದ್ರಾ ನದಿಗಳು ತುಂಬಿ ಹರಿಯುತ್ತಿವೆ.












Click it and Unblock the Notifications