Get Updates
Get notified of breaking news, exclusive insights, and must-see stories!

Talakadu: ನಿಸರ್ಗ ಪ್ರೇಮಿಗಳಿಗೆ ತಲಕಾಡು ಇಷ್ಟವಾಗುವುದೇಕೆ?

ಮೈಸೂರು, ಜನವರಿ 18: ಪ್ರವಾಸಿಗರು ಮೈಸೂರು ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳತ್ತ ಹೆಜ್ಜೆ ಹಾಕುತ್ತಿದ್ದು ಅವರಿಗೆ ಮರಳಿನಿಂದ ಕೂಡಿರುವ ಕಾವೇರಿ ನದಿ ತಟದ ತಲಕಾಡು ಇಷ್ಟವಾಗುತ್ತಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಾಣಸಿಗುತ್ತಿದ್ದಾರೆ. ಸಾಮಾನ್ಯವಾಗಿ ತಲಕಾಡು ಎಂದಾಕ್ಷಣ ನಾವೆಲ್ಲರೂ ಇತಿಹಾಸದ ದಿನಗಳಿಗೆ ಹೋಗುತ್ತೇವೆ. ಇವತ್ತಿನ ತಲಕಾಡು ಅವತ್ತಿನ ರಾಜಮಹಾರಾಜರ ಕಾಲದಲ್ಲಿ ವೈಭವದಿಂದ ಮೆರೆದ ನಾಡಾಗಿತ್ತು ಎನ್ನುವುದು ಅಷ್ಟೇ ಸತ್ಯ.

ಮೈಸೂರಿನಿಂದ ಸುಮಾರು ಅರುವತ್ತು ಕಿ.ಮೀ. ದೂರದಲ್ಲಿರುವ ತಲಕಾಡು ತಿ.ನರಸೀಪುರ ತಾಲೂಕಿಗೆ ಸೇರಿದೆ. ಭಕ್ತರಿಗೆ ಪವಿತ್ರ ತಾಣವಾಗಿ ಪ್ರವಾಸಿಗರಿಗೆ ಚೆಲುವಿನ ತಾಣವಾಗಿ ಗಮನಸೆಳೆಯುತ್ತದೆ. ಸೋಮದತ್ತ ಋಷಿ ಮತ್ತು ಶಿಷ್ಯರು ಇಲ್ಲಿ ಮೋಕ್ಷ ಪಡೆದಿದ್ದರಿಂದ ಗಜಾರಣ್ಯ ಕ್ಷೇತ್ರ, ಸಿದ್ಧಾರಣ್ಯ ಕ್ಷೇತ್ರವೆಂದೂ, ಗಂಗರ ರಾಜಧಾನಿಯಾಗಿ ಬಳಿಕ ಚೋಳರ ಅಧೀನಕ್ಕೆ ಬಂದಾಗ ರಾಜರಾಜಪುರ ಎಂದೂ, ಇದಾದ ನಂತರ ತಲ ಮತ್ತು ಕಾಡ ಎಂಬ ಬೇಡರು ಇಲ್ಲಿರುವ ವೈದ್ಯನಾಥೇಶ್ವರನನ್ನು ಆರಾಧಿಸಿ ಮೋಕ್ಷ ಪಡೆದಿದ್ದರಿಂದ ತಲಕಾಡು ಎಂಬ ಹೆಸರು ಬಂತೆಂದು ಹೇಳಲಾಗುತ್ತಿದೆ.

Travel News Discover Talakadu A Historical And Natural Gem In Mysuru

ಇನ್ನು ಇತಿಹಾಸದ ಪುಟಗಳನ್ನು ತಿರುವಿದರೆ ಪಶ್ಚಿಮ ಗಂಗರು ಕ್ರಿ.ಶ. ಸುಮಾರು ಆರನೇ ಶತಮಾನದಿಂದ ಹತ್ತನೇ ಶತಮಾನದ ಕೊನೆವರೆಗೂ ತಲಕಾಡನ್ನು ರಾಜಧಾನಿಯನ್ನಾಗಿಸಿಕೊಂಡು ರಾಜ್ಯಭಾರ ನಡೆಸಿ ತಲಕಾಡು ಗಂಗರೆಂದೇ ಹೆಸರುವಾಸಿಯಾದರು. ಆದರೆ ಹತ್ತನೇ ಶತಮಾನದ ಕೊನೆಯ ಭಾಗದಲ್ಲಿ ತಲಕಾಡು ಹಾಗೂ ಸುತ್ತಮುತ್ತಲ ಪ್ರಾಂತ್ಯಗಳನ್ನು ಚೋಳ ಚಕ್ರವರ್ತಿ ರಾಜರಾಜ ಚೋಳನು ತನ್ನ ವಶಕ್ಕೆ ತೆಗೆದುಕೊಂಡನು ಎಂದು ಹೇಳಲಾಗುತ್ತಿದೆ.

ಆ ನಂತರ ಸುಮಾರು 130 ವರ್ಷಗಳ ಕಾಲಚೋಳರು ಆಳ್ವಿಕೆ ನಡೆಸಿದರೆಂದೂ 1117ರಲ್ಲಿ ಹೊಯ್ಸಳ ವಿಷ್ಣುವರ್ಧನ ಚೋಳರನ್ನು ಯುದ್ಧದಲ್ಲಿ ಸೋಲಿಸಿ ಅಧಿಪತ್ಯ ಸ್ಥಾಪಿಸಿದ್ದರಿಂದ ತಲಕಾಡುಗೊಂಡ ಎಂಬ ಬಿರುದು ಪಡೆದನೆಂದೂ ಆ ನಂತರ ಮೈಸೂರು ಒಡೆಯರ್ ಆಳ್ವಿಕೆ ನಡೆಸಿದರೆಂಬುದು ಇತಿಹಾಸದಿಂದ ತಿಳಿದು ಬರುತ್ತದೆ.

Travel News Discover Talakadu A Historical And Natural Gem In Mysuru

ಮರಳಿನಲ್ಲಿ ಹುದುಗಿ ಹೋಗುವ ದೇಗುಲಗಳು

ಸಾಮಾನ್ಯವಾಗಿ ತಲಕಾಡಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಇಲ್ಲಿನ ಮರಳು ರಾಶಿಗಳು ವಿಸ್ಮಯ ಮೂಡಿಸುತ್ತವೆ. ಇದು ಈ ಕ್ಷೇತ್ರದ ಆಕರ್ಷಣೆಯೂ ಹೌದು. ಇಲ್ಲಿ ಹರಿದು ಹೋಗುವ ಕಾವೇರಿ ನದಿ ದಂಡೆಯಿಂದ ಸುಮಾರು ಮೂರು ಕಿ.ಮೀ. ಒಳಭಾಗದವರೆಗೆ ನಿರ್ಮಾಣವಾಗಿರುವ ನಲವತ್ತು ಅಡಿಗಿಂತಲೂ ಎತ್ತರವಾಗಿರುವ ಮರಳಿನ ದಿಬ್ಬಗಳು ಈ ಕ್ಷೇತ್ರದ ವಿಶೇಷತೆಯನ್ನು ಸಾರುತ್ತಾ ದೂರದಿಂದ ಬರುವ ಪ್ರವಾಸಿಗರನ್ನು ಆಶ್ಚರ್ಯ ಚಕಿತರನ್ನಾಗಿಸುತ್ತದೆ. ಮೇಲ್ನೋಟಕ್ಕೆ ಮರಳ ರಾಶಿಗಳು ಪ್ರಕೃತಿಯ ಸೋಜಿಗವಾಗಿ ಕಂಡು ಬಂದರೂ ಇದು ತಲಕಾಡಿಗೆ ತಟ್ಟಿದ ಶಾಪ ಎಂದರೆ ಆಶ್ಚರ್ಯವಾಗಬಹುದು.

ಇನ್ನು ಇಲ್ಲಿರುವ ವೈದ್ಯನಾಥೇಶ್ವರ, ಅರ್ಕೇಶ್ವರ, ಪಾತಾಳೇಶ್ವರ ಮತ್ತು ಮರಳೇಶ್ವರ ಎಂಬ ನಾಲ್ಕು ಶಿವದೇವಾಲಯಗಳನ್ನು ಸುತ್ತಲಿನಿಂದಲೂ ಮರಳು ಆವರಿಸಿಕೊಳ್ಳುತ್ತದೆ. ಹೀಗಾಗಿ ಈ ದೇವಾಲಯಗಳು ಮರಳಿನಲ್ಲಿ ಹುದುಗಿ ಹೋಗುತ್ತವೆ. ಪಂಚಲಿಂಗದರ್ಶನ ಸಂದರ್ಭ ಮರಳು ತೆಗೆದು ದೇವಾಲಯಗಳಲ್ಲಿ ಪೂಜಾಕಾರ್ಯ ನಡೆಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಇಲ್ಲಿನ ನಾಲ್ಕು ದೇವಾಲಯಗಳಲ್ಲದೆ ಮುಡುಕುತೊರೆಯ ಮಲ್ಲಿಕಾರ್ಜುನ ದೇವಾಲಯದ ಮಲ್ಲಿಕಾರ್ಜುನೇಶ್ವರ ಲಿಂಗವೂ ಸೇರಿಕೊಂಡಿದೆ.

Travel News Discover Talakadu A Historical And Natural Gem In Mysuru

ಒಟ್ಟಾರೆಯಾಗಿ ಹೇಳಬೇಕೆಂದರೆ ತಲಕಾಡು ಪೌರಾಣಿಕ ಮತ್ತು ಐತಿಹಾಸಿಕವಾಗಿ ತನ್ನದೇ ಆದ ವಿಶೇಷತೆಗಳನ್ನು ಹೊಂದಿದೆ. ಚಾರಿತ್ರಿಕ ಹಿನ್ನಲೆ ಏನೇ ಇರಲಿ ನಿಸರ್ಗದ ಸೌಂದರ್ಯವೂ ಈ ತಾಣಕ್ಕೆ ಮೆರಗು ತಂದಿಗೆ ಕಾವೇರಿ ನದಿ ಹರಿದು ಕ್ಷೇತ್ರವನ್ನು ಪವಿತ್ರಗೊಳಿಸಿದ್ದು ಮಾತ್ರವಲ್ಲದೆ ಪ್ರಕೃತಿ ಚೆಲುವಿನಿಂದ ಕಂಗೊಳಿಸುವಂತೆ ಮಾಡಿರುವುದು ನಿಜಕ್ಕೂ ಖುಷಿಪಡುವ ವಿಚಾರವೇ. ಹೀಗಾಗಿಯೇ ನಿಸರ್ಗದ ನಡುವೆ ಪ್ರಶಾಂತ ವಾತಾವರಣದಲ್ಲಿ ಒಂದಷ್ಟು ಹೊತ್ತು ಇರಬೇಕೆಂದು ಬಯಸುವವರು ಸದಾ ಇತ್ತ ಕಡೆ ಮುಖ ಮಾಡುತ್ತಿರುತ್ತಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+