B.R Hills: ಬಿಳಿಗಿರಿರಂಗನ ಬೆಟ್ಟಕ್ಕಿದೆ ಇನ್ನಷ್ಟು ಹೆಸರುಗಳು: ಏನಿದರ ವಿಶೇಷ?
ಈ ಸಮಯದಲ್ಲಿ ನಿಸರ್ಗದ ಸುಂದರತೆಯನ್ನು ಸವಿಯುವುದೇ ಒಂಥರಾ ಖುಷಿ ಅದರಲ್ಲೂ ಸುಂದರ ಬೆಟ್ಟ ಶ್ರೇಣಿಯನ್ನು ಹೊಂದಿ ಹಸಿರು ಹಚ್ಚಡವನ್ನು ಹೊದ್ದು ಕುಳಿತಂತೆ ಭಾಸವಾಗುವ ಬಿಳಿಗಿರಿರಂಗನ ಬೆಟ್ಟಕ್ಕೆ ಹೋದವರಿಗೆ ಇಲ್ಲಿನ ನಿಸರ್ಗ ನಿರ್ಮಿತ ನೋಟಗಳು ಮೈಮನ ತಣಿಸದಿರದು.. ಕಣ್ಣು ಹಾಯಿಸಿದುದ್ದಕ್ಕೂ ಕಾಣ ಸಿಗುವ ದೃಶ್ಯಗಳು ನಮ್ಮೆಮ್ಮ ಜಂಜಾಟಕ್ಕೆ ವಿರಾಮದ ಗೆರೆ ಎಳೆದು ಬಿಡುವುದರಲ್ಲಿ ಎರಡು ಮಾತಿಲ್ಲ.
ಬಿಳಿಗಿರಿರಂಗನ ಬೆಟ್ಟವು ಚಾಮರಾಜನಗರ ಜಿಲ್ಲೆಯ ಪ್ರವಾಸಿ ತಾಣಗಳಲ್ಲೊಂದಾಗಿದೆ. ಸಮುದ್ರಮಟ್ಟದಿಂದ ಸುಮಾರು 1552 ಮೀಟರ್ ಎತ್ತರದಲ್ಲಿರುವ ಈ ಬೆಟ್ಟವನ್ನು ಬಿಳಿಗಿರಿ ಬೆಟ್ಟ, ಬಿಳಿಕಲ್ಲ ಬೆಟ್ಟ, ಶ್ವೇತಾದ್ರಿ ಎಂಬ ಹೆಸರುಗಳಿರುವುದು ಮತ್ತು ದೈವಿಕ ಮಹತ್ವಹೊಂದಿ ಶ್ರೀಬಿಳಿಗಿರಿರಂಗನಾಥನ ನೆಲೆಯಾಗಿರುವುದು ವಿಶೇಷವಾಗಿದೆ.

ಸುಮಾರು 540ಚದರ ಕಿ.ಮೀ. ವಿಸ್ತಾರವನ್ನು ಹೊಂದಿರುವ ಬಿಳಿಗಿರಿರಂಗನಬೆಟ್ಟವು ಸದಾ ಹಸಿರು ಹಚ್ಚಡದಿಂದ ಕೂಡಿ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಬಿಳಿಗಿರಿರಂಗನಬೆಟ್ಟವನ್ನು ಪ್ರವೇಶಿಸುತ್ತಿದ್ದಂತೆಯೇ ಮೇಲಿಂದ ಮೇಲೆ ಬೀಸಿ ಬರುವ ತಂಗಾಳಿಯಿಂದಾಗಿ ನಡುಬೇಸಿಗೆಯೂ ಕೂಡ ಬೆಳದಿಂಗಳೆನೋ ಎಂಬಂತೆ ಭಾಸವಾಗುತ್ತದೆ.
ಶ್ರೀಗಂಧ, ಹೊನ್ನೆ, ಮತ್ತಿ, ಬೀಟೆ, ಬನ್ನಿ ಮೊದಲಾದ ಅಮೂಲ್ಯ ಮರಗಳ ಅರಣ್ಯ ಸಂಪತ್ತು ಹೊಂದಿದ್ದು, ಹುಲಿ, ಚಿರತೆ, ಕರಡಿ, ಆನೆ, ಕಾಡೆಮ್ಮೆ, ಜಿಂಕೆ ಸೇರಿದಂತೆ ವನ್ಯಪ್ರಾಣಿಗಳು... ಕಾಡಿನ ನಡುವೆ ಅಲ್ಲಲ್ಲಿ ಸೋಲಿಗರ ಜೋಪಡಿಗಳು.. ಕಾಫಿ, ಕಿತ್ತಳೆ, ಬಾಳೆ, ಹಿಪ್ಪನೇರಳೆ ಬೆಳೆಯ ತೋಟಗಳು... ಅದರಾಚೆಗಿನ ಕಾಡಿನ ನಡುವಿನ ಅಂಕುಡೊಂಕಿನ ರಸ್ತೆಗಳಲ್ಲಿ ತಲೆ ಮೇಲೆ ಅರಣ್ಯ ಉತ್ಪನ್ನಗಳನ್ನು ಹೊತ್ತು ಸಾಗುವ ಸೋಲಿಗರು... ಅರಣ್ಯದ ನಡುವಿನಿಂದ ಛಂಗನೆ ನೆಗೆದು ಓಡುವ ಜಿಂಕೆಗಳು... ಘೀಳಿಡುವ ಆನೆಗಳು... ಹೀಗೆ ಒಂದು, ಎರಡಲ್ಲ ಹತ್ತಾರು ವಿಸ್ಮಯ ನೋಟಗಳು ಕಣ್ಮುಂದೆ ಹಾದು ಹೋಗುತ್ತವೆ.

ಪೂರ್ವ ಮತ್ತು ಪಶ್ಚಿಮ ಘಟ್ಟಗಳ ಕೊಂಡಿ
ಬಿಳಿಗಿರಿರಂಗನಬೆಟ್ಟ ವನ್ಯಧಾಮವಾಗಿದ್ದು, ಪೂರ್ವ ಮತ್ತು ಪಶ್ಚಿಮ ಘಟ್ಟಗಳ ಕೊಂಡಿ ಎಂದರೆ ತಪ್ಪಾಗುವುದಿಲ್ಲ. ಏಷ್ಯಾದ ಆನೆಗಳು, ಬಿಳಿಪಟ್ಟೆಗಳ ಹುಲಿಗಳ ವಾಸಕ್ಕೆ ಯೋಗ್ಯವಾಗಿರುವ ಈ ತಾಣದಲ್ಲಿ ಸುಮಾರು 700ಕ್ಕೂ ಹೆಚ್ಚು ವೈವಿಧ್ಯಮಯ ಸಸ್ಯ ಪ್ರಭೇದಗಳಿವೆ. ಇಷ್ಟು ಮಾತ್ರವಲ್ಲದೆ ಚಿರತೆ, ಜಿಂಕೆ, ಸೀಳುನಾಯಿ ಮುಂತಾದ ಪ್ರಾಣಿಗಳು 200ಕ್ಕೂ ಅಧಿಕ ಪಕ್ಷಿ ಸಂಕುಲಗಳು ಇಲ್ಲಿವೆ. ಈ ಅರಣ್ಯದಲ್ಲಿ ಬಹಳ ಹಿಂದಿನಿಂದಲೂ ಸೋಲಿಗರು ವಾಸ ಮಾಡುತ್ತಾ ಬಂದಿದ್ದು, ಇಲ್ಲಿ ಸಿಗುವ ಅರಣ್ಯ ಉತ್ಪನ್ನವೇ ಅವರ ಬದುಕಿಗೆ ಆಸರೆಯಾಗಿದೆ.
ಬೆಟ್ಟದ ಮೇಲ್ಭಾಗದಲ್ಲಿ ಶ್ರೀ ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯವಿದ್ದು, ಇದನ್ನು ಅಭಿವೃದ್ಧಿಗೊಳಿಸಲಾಗಿದೆ. ಇಲ್ಲಿನ ಆಧಿದೇವತೆ ಶ್ರೀ ಬಿಳಿಗಿರಿರಂಗನಾಥ ಹಾಗೂ ಶ್ರೀರಂಗಪಟ್ಟಣದ ರಂಗನಾಥ, ಶಿವನಸಮುದ್ರದ ಹಾಗೂ ತಿರುಚನಾಪಳ್ಳಿಯ ಶ್ರೀರಂಗ, ವೆಂಕಟೇಶ ಅಣ್ಣತಮ್ಮಂದಿರು ಎಂಬ ನಂಬಿಕೆ ಇಲ್ಲಿನವರದ್ದಾಗಿದೆ. ದೇವಾಲಯದ ಅಧಿದೇವರಾದ ಬಿಳಿಗಿರಿ ರಂಗಸ್ವಾಮಿ (ಶ್ರೀನಿವಾಸ)ಯ ಲೋಹ ನಿರ್ಮಿತ ಮೂರ್ತಿಗಳು ನವರಂಗದ ಬಲಭಾಗದ ಮೂರು ಗೂಡುಗಳಲ್ಲಿದ್ದು, ಇಲ್ಲಿಯೇ ಹನುಮಂತ ಮಣವಾಳ ಮಹಾಮುನಿಗಳ ಮೂರ್ತಿಗಳಿವೆ. ಬಲ ಭಾಗದಲ್ಲಿ ಅಲಮೇಲು ಮಂಗೈ ಅಮ್ಮನವರ ಸನ್ನಿಧಿಯಿದೆ.
ಇದು ಬ್ರಹ್ಮಾಂಡಪುರಾಣದ ದಕ್ಷಿಣ ತಿರುಪತಿ
ನವರಂಗದ ಎಡಭಾಗದ ಗೂಡುಗಳಲ್ಲಿ ನಮ್ಮಾಳ್ವಾರ್ ಮತ್ತು ರಾಮಾನುಜರ ವಿಗ್ರಹಗಳಿವೆ. ದ್ವಾರದ ಬಲಗಡೆಯಲ್ಲಿರುವ ಇನ್ನೊಂದು ಗೂಡಿನಲ್ಲಿ ವೇದಾಂತಚಾರ್ಯರ ವಿಗ್ರಹವನ್ನು ನಾವು ಕಾಣಬಹುದು. ಮೂಲದೇವರಾದ ಬಿಳಿಗಿರಿ ರಂಗಸ್ವಾಮಿ ಮೂರ್ತಿಯನ್ನು ವಸಿಷ್ಠರು ಪ್ರತಿಷ್ಠಾಪಿಸಿದರೆಂದು ಹೇಳಲಾಗುತ್ತದೆ. ಇಲ್ಲಿರುವ ತಾಮ್ರಶಾಸನದ ಪ್ರಕಾರ ಬಿಳಿಕಲ್ಲು ತಿರುವೆಂಕಟನಾಥನಿಗೆ ಹದಿನಾಡಿನ ಮುದ್ದರಾಜ 1667ರಲ್ಲಿ ದತ್ತಿ ಬಿಟ್ಟಿದ್ದನಂತೆ. ಇನ್ನು ದಿವಾನ್ ಪೂರ್ಣಯ್ಯ ಈ ದೇವಾಲಯದ ಸೇವೆಗಾಗಿ 2 ಗ್ರಾಮಗಳನ್ನು ದತ್ತಿ ಬಿಟ್ಟರು ಎಂದು ಕೂಡ ಹೇಳಲಾಗುತ್ತಿದೆ.
ಬ್ರಹ್ಮಾಂಡಪುರಾಣದಲ್ಲಿ ಬಿಳಿಗಿರಿರಂಗಬೆಟ್ಟವನ್ನು ದಕ್ಷಿಣ ತಿರುಪತಿ ಎಂದು ಕರೆಯಲಾಗಿದೆ. ಬೆಟ್ಟದ ಮೇಲೆ ಗಂಗಾಧರೇಶ್ವರನ ಗುಡಿ ಇದೆ. ದೇವಸ್ಥಾನದಿಂದ 16ಕಿಮೀ ದೂರದಲ್ಲಿ ಭಾರ್ಗವೀ ನದಿ ಹರಿಯುತ್ತದೆ. ಬಿಳಿಗಿರಿರಂಗಸ್ವಾಮಿಯ ದೇವಸ್ಥಾನದಿಂದ ಸುಮಾರು 19ಕಿಮೀ ದೂರದಲ್ಲಿ ಶಿವಸಮುದ್ರದ ಗಂಗರಾಜ ತನ್ನ ಅಳಿಯನಾಗಿ ಕುಂಚುಕೋಟೆಯನ್ನು ನಿರ್ಮಿಸಿದುದಾಗಿ ತಿಳಿಯುತ್ತದೆ. ಈಗಲೂ ಆ ಕೋಟೆಯ ಅವಶೇಷಗಳನ್ನು ನೋಡಬಹುದಾಗಿದೆ. ಬೆಟ್ಟದ ಬುಡದಲ್ಲಿ ಬೃಂದಾವನವೆಂಬ ತುಳಸಮ್ಮನ ಗುಡಿ ಇದೆ. ಮಧ್ಯಭಾಗದಲ್ಲಿ ಕನಕದಾಸರದೆಂದು ಹೇಳಲಾಗುವ ಗುಹೆ ಇದೆ. ಇನ್ನು ಇಲ್ಲಿನ ದೊಡ್ಡಸಂಪಿಗೆ ಮರಕ್ಕೆ ಪುರಾಣದ ಇತಿಹಾಸವಿದೆ.
ಇಷ್ಟಾರ್ಥ ನೆರವೇರಿಸುವ ಪಾದುಕೆ ಆಶೀರ್ವಾದ
ಬಿಳಿಗಿರಿ ರಂಗನಾಥಸ್ವಾಮಿಯ ಮತ್ತೊಂದು ವಿಶೇಷತೆ ಏನೆಂದರೆ ಪ್ರತಿ ವರ್ಷ ಉತ್ಸವದ ವೇಳೆಯಲ್ಲಿ ಒಂದು ಜೊತೆ ಚಪ್ಪಲಿಯನ್ನು ಸೇವಾರೂಪದಲ್ಲಿ ಅರ್ಪಿಸಲಾಗುತ್ತದೆ. ಈ ಪಾದರಕ್ಷೆ ನಿರ್ಮಾಣವನ್ನು ವಂಶ ಪಾರಂಪರ್ಯವಾಗಿ ಬೇರೆ ಬೇರೆ ಊರುಗಳ ಎರಡು ಕುಟುಂಬಗಳು ತಲಾ ಒಂದೊಂದು ಚಪ್ಪಲಿಯಂತೆ ತಯಾರಿಸುತ್ತಾರೆ.
ಆದರೆ ಪೂಜೆಗೆ ತಂದಾಗ ಅವುಗಳ ವಿನ್ಯಾಸ, ಚಿತ್ತಾರದ ಕಲೆ, ಅಳತೆಯಲ್ಲಿ ವ್ಯತ್ಯಾಸವಾಗದೆ ಒಂದೇ ರೀತಿಯಲ್ಲಿರುವುದು ವಿಶೇಷವಾಗಿದೆ. ಅಷ್ಟೇ ಅಲ್ಲ ದೇವಾಲಯದ ಪೆಟ್ಟಿಗೆಯಲ್ಲಿಟ್ಟ ಚಪ್ಪಲಿ ಕೂಡ ಮುಂದಿನ ಜಾತ್ರೆಯ ಹೊತ್ತಿಗೆ ಸವಿಯುತ್ತದೆ. ಈ ಪಾದುಕೆಯಿಂದ ಆಶೀರ್ವಾದ ಪಡೆದರೆ ಇಷ್ಟಾರ್ಥಗಳು ನೆರವೇರುತ್ತವೆ ಎಂಬುವುದು ಪ್ರತೀತಿ.
ಮೈಸೂರಿನಿಂದ ಸುಮಾರು ತೊಂಬತ್ತು ಕಿ.ಮೀ. ಹಾಗೂ ಚಾಮರಾಜನಗರ ಜಿಲ್ಲೆಯ ಯಳಂದೂರಿನಿಂದ ಸುಮಾರು 15ಕಿಮೀ ದೂರದಲ್ಲಿದೆ. ಪವಿತ್ರ ಕ್ಷೇತ್ರ ಮಾತ್ರವಲ್ಲದೆ, ಪ್ರವಾಸಿಗರ ಸೆಳೆಯುವ ಸುಂದರ ಪ್ರವಾಸಿ ತಾಣವೂ ಆಗಿರುವುದರಿಂದ ಇಲ್ಲಿಗೆ ವರ್ಷಪೂರ್ತಿ ಪ್ರವಾಸಿಗರು ಬರುತ್ತಿರುತ್ತಾರೆ. ಕೆಲವರು ಚಾರಣಿಗರಾಗಿ ಬಂದರೆ ಇನ್ನು ಕೆಲವರು ಭಕ್ತರಾಗಿ ಬಂದು ಸ್ವಾಮಿಯ ದರ್ಶನ ಪಡೆದು ಹಿಂತಿರುಗುತ್ತಾರೆ..
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications